ಸಾರಾಂಶ
ಕನ್ನಡಪ್ರಭ ವಾರ್ತೆ ವಿಜಯಪುರ
ಜಿಲ್ಲೆಯಾದ್ಯಂತ ಕಾನೂನು ಸೇವೆಗಳ ಪ್ರಾಧಿಕಾರದಿಂದ ಜು.13 ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದ್ದು, ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ಪರಿಹಾರ ಕಂಡುಕೊಳ್ಳಲು ಇದೊಂದು ಅವಕಾಶವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಶಿವಾಜಿ ಅನಂತ ನಲವಡೆ ಹೇಳಿದರು.ನಗರದ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣದ ಎ.ಡಿ.ಆರ್ ಕಟ್ಟಡದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಿಯಾಗಬಲ್ಲ ಅಪರಾಧ, ಬ್ಯಾಂಕ್ ವಸೂಲಾತಿ, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮು, ಜಿಲ್ಲಾ ಗ್ರಾಹಕರ ವೇದಿಕೆ ಹಾಗೂ ಕಾಯಂ ಜನತಾ ನ್ಯಾಯಾಲಯದಲ್ಲಿ ಬಾಕಿ ಇರುವ, ಚೆಕ್ ಅಮಾನ್ಯ, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣ, ಕಾರ್ಮಿಕ ವಿವಾದ, ವಿದ್ಯುತ್ ಹಾಗೂ ನೀರಿನ ಶುಲ್ಕ, ಭೂ ಸ್ವಾಧೀನ, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪಿಂಚಣಿ, ಸಾರ್ವಜನಿಕ ಉಪಯುಕ್ತ ಸೇವೆ, ವೈವಾಹಿಕ, ಕುಟುಂಬ ನ್ಯಾಯಾಲಯ, ಸಿವಿಲ್ ಸೇರಿದಂತೆ ಇತರೆ ಪ್ರಕರಣ ಇತ್ಯರ್ಥ ಪಡಿಸಿಕೊಳ್ಳಬಹುದಾಗಿದೆ ಎಂದರು.ಉಭಯ ಕಕ್ಷಿದಾರರಿಗೆ ರಾಜೀ ಮಾಡಿಕೊಳ್ಳಲು ಮಾರ್ಗದರ್ಶನ ನೀಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ತೀರ್ಮಾನ ಆಗುವುದರಿಂದ ಬಾಂಧವ್ಯ ಉಳಿದು ವಿವಾದ ಬಗೆಹರಿಯುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದಿರುವ ಪ್ರಕರಣವೂ ಬಗೆಹರಿಸಿಕೊಳ್ಳಬಹುದು ಎಂದರು.ಕಕ್ಷಿಗಾರರು ತಮ್ಮ ಪ್ರಕರಣಗಳನ್ನು ಲೋಕ ಅದಾಲತ್ ಮೂಲಕ ಪ್ರಕರಣ/ವ್ಯಾಜ್ಯಗಳನ್ನು ಇತ್ಯರ್ಥಗೊಳಿಸಿ ಜನರಿಗೆ ತ್ವರಿತವಾಗಿ ಹಾಗೂ ಕಡಿಮೆ ವೆಚ್ಚದಲ್ಲಿ ನ್ಯಾಯ ದೊರಕಿಸಲಾಗುವುದು. ನ್ಯಾಯಾಲಯಗಳಲ್ಲಿ ಉಭಯ ಪಕ್ಷಕಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುವುದು ಎಂದು ತಿಳಿಸಿದರು.ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಜು.೦೧ಕ್ಕೆ ಒಟ್ಟು ೬೬,೭೩೬ ಪ್ರಕರಣಗಳು ವಿಚಾರಣೆಗೆ ಬಾಕಿ ಇದ್ದು, ಇವುಗಳಲ್ಲಿ ಈಗಾಗಲೇ ೧೬,೩೯೩ ಪ್ರಕರಣಗಳನ್ನು ಇತ್ಯರ್ಥಕ್ಕಾಗಿ ಗುರುತಿಸಲಾಗಿದೆ. ಹೆಚ್ಚಿನ ಪ್ರಕರಣಗಳನ್ನು ರಾಜೀ ಸಂಬಂಧಿಸಿದ ವಕೀಲರ ಹಾಗೂ ಕಕ್ಷಿದಾರರೊಂದಿಗೆ ಚರ್ಚಿಸಿ, ರಾಜಿಗಾಗಿ ಗುರುತಿಸಲು ಪ್ರಯತ್ನಿಸಲಾಗುತ್ತಿದೆ. ಇನ್ನೂ ಹೆಚ್ಚಿನ ಪ್ರಕರಣಗಳು ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ರಾಜಿ ಮೂಲಕ ಇತ್ಯರ್ಥಗೊಳ್ಳುವ ನಿರೀಕ್ಷೆ ಇದೆ ಎಂದರು.ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಅಪೌಷ್ಟಿಕ ನಿವಾರಣಾ ರಾಜ್ಯ ಸಲಹಾ ಸಮಿತಿಯಿಂದ ಉಚ್ಛ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕಾದ ಪ್ರಾಧಿಕಾರಕ್ಕೆ ನಿರ್ದೇಶನದ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕಗಳಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ ಒದಗಿಸಿರುವ ಮೂಲಭೂತ ಸೌಲಭ್ಯ ಅವುಗಳ ಸ್ಥಿತಿ ಗತಿ ಕುರಿತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಯು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ ಎಂದು ತಿಳಿಸಿದರು.ಜು.೨೯ ರಿಂದ ಆ.೩ರವರೆಗೆ ವಿಶೇಷ ಲೋಕ ಅದಾಲತ್:
ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯದ ೭೫ನೇ ಸ್ಥಾಪನಾ ದಿನಾಚರಣೆ ಅಂಗವಾಗಿ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳ ಇತ್ಯರ್ಥಕ್ಕೆ ಜು.೨೯ ರಿಂದ ಆಗಸ್ಟ್ ೩ ರವರೆಗೆ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಶೇಷ ಲೋಕ ಅದಾಲತ್ ಕಾಯಕ್ರಮ ಹಮ್ಮಿಕೊಳ್ಳಲಾಗಿದೆ. ಸರ್ವೋಚ್ಛ ನ್ಯಾಯಾಲಯದಲ್ಲಿ ಜಿಲ್ಲೆಯ ೨೬ ಪ್ರಕರಣಗಳು ಬಾಕಿ ಇದ್ದು, ಈಗಾಗಲೇ ಸದರಿ ಪ್ರಕರಣಗಳನ್ನು ಪ್ರತಿ ದಿನ ಜಿಲ್ಲಾ ನ್ಯಾಯಾಲಯದಲ್ಲಿ ವಿಡಿಯೋ ಕಾನ್ಫರೆನ್ಸ್ ಹಾಲ್ನಲ್ಲಿ ಪೂರ್ವ ಸಂಧಾನ ಮಾಡಲಾಗುತ್ತಿದ್ದು, ವಿಚಾರಣೆಗೆ ಬಾಕಿ ಇರುವ ಪ್ರಕರಣಗಳಲ್ಲಿರುವ ಪಕ್ಷಗಾರರು ಖುದ್ದಾಗಿ ಅಥವಾ ವಕೀಲರೊಂದಿಗೆ ಅಥವಾ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿ ಪೂರ್ವ ಸಂಧಾನ ಮಾಡಿಕೊಳ್ಳಬಹುದು ಎಂದರು.ಗೋಷ್ಠಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ ಅಂಬಲಿ, 4ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಜೆಎಂಎಫ್ಸಿ ಮಹೇಶ ಚಂದ್ರಕಾಂತ ಇದ್ದರು.