ಸಾರಾಂಶ
ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ನಾಗರ ಪಂಚಮಿ ಹಬ್ಬವನ್ನು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ಕನ್ನಡಪ್ರಭ ವಾರ್ತೆ ತುಮಕೂರುಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ನಾಗರ ಪಂಚಮಿ ಹಬ್ಬವನ್ನು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಶುಕ್ರವಾರ ಬೆಳಿಗ್ಗೆಯೇ ಮಹಿಳೆಯರು, ಪುರುಷರು, ಮಕ್ಕಳು, ವೃದ್ಧರು ಸೇರಿದಂತೆ ಕುಟುಂಬ ಸಮೇತರಾಗಿ ಹುತ್ತಗಳು ಹಾಗೂ ನಾಗರಕಲ್ಲುಗಳು ಇರುವ ಸ್ಥಳಗಳಿಗೆ ತೆರಳಿ ಹೂವುಗಳಿಂದ ಅಲಂಕಾರ ಮಾಡಿ ಹುತ್ತಕ್ಕೆ ಹಾಲೆರೆದು ವಿಶೇಷ ಪೂಜೆ ಸಲ್ಲಿಸುವ ಮೂಲಕ ನಾಗರ ಪಂಚಮಿಯನ್ನು ಆಚರಿಸಿ ಭಕ್ತಿ ಸಮರ್ಪಿಸಿದರು. ನಗರದ ಅಮಾನಿಕೆರೆ ಏರಿ ಮೇಲಿನ ಹುತ್ತಗಳಿಗೆ, ನಾಗರಕಲ್ಲುಗಳು ಸೇರಿದಂತೆ ವಿವಿಧ ಬಡಾವಣೆಗಳ ದೇವಾಲಯಗಳ ಬಳಿ ಇರುವ ಹುತ್ತಗಳಿಗೆ ಭಕ್ತರು ಬೆಳಿಗ್ಗೆಯಿಂದಲೇ ವಿಶೇಷ ಪೂಜೆ ಸಲ್ಲಿಸಿ ಹಾಲು ಎರೆದರು. ನಾಗಾರಾಧನೆ ಭಾರತದ ಸಂಸ್ಕೃತಿಯ ಭಾಗವಾಗಿದ್ದು, ನಾಗ ಪಂಚಮಿಯು ನಾಗದೇವರ ಅಸ್ತಿತ್ವವನ್ನು ಸ್ಮರಿಸುವ ಸಲುವಾಗಿ ಆಚರಿಸಲಾಗುವ ಭಾರತದಲ್ಲಿನ ಪ್ರಮುಖ ಹಬ್ಬಗಳಲ್ಲಿ ಒಂದಾಗಿದ್ದು, ಈ ಹಬ್ಬವನ್ನು ಶ್ರಾವಣ ಮಾಸದ ಚಂದ್ರನ-ಹದಿನೈದು ದಿನಗಳ ಐದನೇ ದಿನದಂದು ಆಚರಿಸಲಾಗುತ್ತದೆ.