ನಾಲ್ವಡಿ ಕೃಷ್ಣರಾಜರ ಆಡಳಿತ ಇಂದಿನ ರಾಜಕಾರಣಿಗಳಿಗೆ ಮಾದರಿ: ಕೆ.ಎಂ.ಶಿವಪ್ಪ

| Published : Jun 05 2025, 01:34 AM IST

ಸಾರಾಂಶ

ಶಿಕ್ಷಣ, ಆರೋಗ್ಯ ಹಾಗೂ ಅಭಿವೃದ್ಧಿಯಲ್ಲಿ ಕ್ರಾಂತಿ ಮಾಡಿದ ರಾಜರ್ಷಿ ನಾಲ್ವಡಿ ಕೃಷ್ಣರಾಜರು ಮೀಸಲಾತಿ ವ್ಯವಸ್ಥೆಗೆ ಚಾಲನೆ ನೀಡಿ ತುಳಿತಕ್ಕೊಳಗಾದ ಹಾಗೂ ಶೋಷಿತ ವರ್ಗಗಳ ಜನರಿಗೆ ಸಾಮಾಜಿಕ ನ್ಯಾಯ ನೀಡಿದ ಮಹಾನುಭಾವರಾಗಿದ್ದಾರೆ.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಮೈಸೂರು ರಾಜ್ಯದ ನಿರ್ಮಾತೃ, ಅಭಿವೃದ್ಧಿ ಹರಿಕಾರ ನಾಲ್ವಡಿ ಶ್ರೀ ಕೃಷ್ಣರಾಜ ಒಡೆಯರ್ ಅವರ ದೂರದೃಷ್ಟಿ ಆಡಳಿತ ಹಾಗೂ ಸಮಾಜಮುಖಿ ಕಾಳಜಿ ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದೆ ಎಂದು ತಾಲೂಕು ನಯನಜ ಕ್ಷತ್ರೀಯ ಸಮಾಜದ ಅಧ್ಯಕ್ಷ ಕೆ.ಎಂ.ಶಿವಪ್ಪ ಅಭಿಪ್ರಾಯಪಟ್ಟರು.

ಪಟ್ಟಣದ ತಾಲೂಕು ಆಡಳಿತ ಕಾರ್ಯಸೌಧದ ಸಭಾಂಗಣದಲ್ಲಿ ಆಯೋಜಿಸಿದ್ದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿಯಲ್ಲಿ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದರು.

ಕಾವೇರಿ ನದಿಗೆ ಅಡ್ಡಲಾಗಿ ಕನ್ನಂಬಾಡಿ ಅಣೆಕಟ್ಟೆ ನಿರ್ಮಿಸಿ, ಮಂಡ್ಯ ಜಿಲ್ಲೆಯನ್ನು ಭತ್ತ, ಕಬ್ಬು, ತೆಂಗು ಬೆಳೆಯುವ ಬಂಗಾರದ ಭೂಮಿಯನ್ನಾಗಿಸಿ ಜನರು ನೆಮ್ಮದಿ ಜೀವನ ನಡೆಸಲು ಕಾರಣರಾದರು. ಅಣೆಕಟ್ಟೆ ನಿರ್ಮಾಣಕ್ಕೆ ಹಣಕಾಸು ಸಮಸ್ಯೆ ಎದುರಾದಾಗ ಚಿನ್ನ, ವಜ್ರದ ಆಭರಣಗಳನ್ನು ಮಾರಾಟ ಮಾಡಿ ಬಂದ ಹಣದಿಂದ ಕಾಮಗಾರಿ ಪೂರ್ಣಗೊಳಿಸಿ, ಜನತೆ ಸೇವೆಗೆ ಸಮರ್ಪಿಸಿ ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದ್ದಾರೆ ಎಂದರು.

ತಹಸೀಲ್ದಾರ್ ಡಾ.ಎಸ್.ಯು.ಅಶೋಕ್ ಮಾತನಾಡಿ, ಶಿಕ್ಷಣ, ಆರೋಗ್ಯ ಹಾಗೂ ಅಭಿವೃದ್ಧಿಯಲ್ಲಿ ಕ್ರಾಂತಿ ಮಾಡಿದ ರಾಜರ್ಷಿ ನಾಲ್ವಡಿ ಕೃಷ್ಣರಾಜರು ಮೀಸಲಾತಿ ವ್ಯವಸ್ಥೆಗೆ ಚಾಲನೆ ನೀಡಿ ತುಳಿತಕ್ಕೊಳಗಾದ ಹಾಗೂ ಶೋಷಿತ ವರ್ಗಗಳ ಜನರಿಗೆ ಸಾಮಾಜಿಕ ನ್ಯಾಯ ನೀಡಿದ ಮಹಾನುಭಾವರಾಗಿದ್ದಾರೆ ಎಂದು ಸ್ಮರಿಸಿದರು.

ಕಾರ್ಯಕ್ರಮದಲ್ಲಿ ಬಿಎಸ್ಪಿ ತಾಲೂಕು ಮುಖಂಡ ಗಂಗಾಧರ್, ಕಂದಾಯ ಇಲಾಖೆ ನೌಕರರ ಸಂಘದ ಅಧ್ಯಕ್ಷೆ ಬಿ.ಎಲ್. ಚಂದ್ರಕಲಾ, ಆರೋಗ್ಯ ಇಲಾಖೆ ಶೀಳನೆರೆ ಸತೀಶ್, ಆಸರೆ ಸಮಾಜ ಸೇವಾ ಟ್ರಸ್ಟ್ ಅಧ್ಯಕ್ಷ ಎಚ್.ಬಿ.ಮಂಜುನಾಥ್, ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ದಿವಾಕರ್, ಬಿಸಿಎಂ ಅಧಿಕಾರಿ ವೆಂಕಟೇಶ್, ಗ್ರೇಡ್-2 ತಹಸೀಲ್ದಾರ್ ಲೋಕೇಶ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಸಂಘ- ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.