ಸೆ.18ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೆಬ್ರಿಗೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಕರಾವಳಿ ಭಾಗದ ಪ್ರಮುಖ ಸಮಸ್ಯೆಗಳಿಗೆ ಸರ್ಕಾರದಿಂದ ಶಾಶ್ವತ ಪರಿಹಾರ ದೊರೆಯುವ ನಿರೀಕ್ಷೆ ಮೂಡಿದೆ ಎಂದು ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಕಾರ್ಕಳ: ಸೆ.18ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೆಬ್ರಿಗೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಕರಾವಳಿ ಭಾಗದ ಪ್ರಮುಖ ಸಮಸ್ಯೆಗಳಿಗೆ ಸರ್ಕಾರದಿಂದ ಶಾಶ್ವತ ಪರಿಹಾರ ದೊರೆಯುವ ನಿರೀಕ್ಷೆ ಮೂಡಿದೆ ಎಂದು ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.ಕಸ್ತೂರಿರಂಗನ್ ವರದಿ, ಸಿಆರ್ಝಡ್, ಉದ್ಯೋಗ, ಪ್ರವಾಸೋದ್ಯಮ, ಆರೋಗ್ಯ ಹಾಗೂ ಮೂಲಸೌಕರ್ಯ ಸೇರಿದಂತೆ ಹಲವು ವರ್ಷಗಳಿಂದ ಬಾಕಿ ಉಳಿದಿರುವ ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಗಮನಹರಿಸಬೇಕು ಎಂದು ಒತ್ತಾಯಿಸಿದರು.ಕಸ್ತೂರಿರಂಗನ್ ವರದಿ ವ್ಯಾಪ್ತಿಯ ಗ್ರಾಮಗಳ ವಾಸ್ತವ ಪರಿಸ್ಥಿತಿ, ಕೃಷಿ ಚಟುವಟಿಕೆ ಹಾಗೂ ಪರಿಸರ ಸೂಕ್ಷ್ಮತೆಯನ್ನು ಪರಿಗಣಿಸಿ ಭೌತಿಕ ಸಮೀಕ್ಷೆ ಮುಂದುವರಿಸಿ ವೈಜ್ಞಾನಿಕ ಪರಿಹಾರ ಕಂಡುಕೊಳ್ಳಬೇಕು. ರೈತರು ಮತ್ತು ಗ್ರಾಮೀಣ ಜನರ ಸಮಸ್ಯೆಗಳನ್ನು ಆಲಿಸಿ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದರು.
ಕರಾವಳಿಯ ಯುವಕರು ಉದ್ಯೋಗಕ್ಕಾಗಿ ಬೇರೆ ಜಿಲ್ಲೆ, ರಾಜ್ಯ ಹಾಗೂ ವಿದೇಶಗಳಿಗೆ ತೆರಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಥಳೀಯವಾಗಿಯೇ ಉದ್ಯೋಗ ಸೃಷ್ಟಿಸುವ ಕೈಗಾರಿಕೆ ಹಾಗೂ ಉದ್ಯಮಗಳಿಗೆ ಸರ್ಕಾರ ಉತ್ತೇಜನ ನೀಡಬೇಕು. ನಿಟ್ಟೆ ಜವಳಿ ಪಾರ್ಕ್ ಸೇರಿದಂತೆ ಉದ್ಯೋಗ ಸೃಷ್ಟಿಸುವ ಯೋಜನೆಗಳಿಗೆ ವೇಗ ನೀಡಬೇಕು ಎಂದು ಹೇಳಿದರು.ಹೆಬ್ರಿ–ಕಾರ್ಕಳ ಭಾಗದ ಪ್ರವಾಸೋದ್ಯಮ ಅಭಿವೃದ್ಧಿಗೂ ಆದ್ಯತೆ ನೀಡಬೇಕಿದ್ದು, ಕೋಟಿ-ಚೆನ್ನಯ್ಯ ಥೀಮ್ ಪಾರ್ಕ್, ರಾಮಸಮುದ್ರ, ಆನೆಕೆರೆ ಬಸದಿ, ಬಾಹುಬಲಿ ಬೆಟ್ಟ, ವರಂಗ, ಕೂಡ್ಲು ತೀರ್ಥ, ಕಬ್ಬಿನಾಲೆ ಹಾಗೂ ಚಿತ್ರಬಿ ಜಲಪಾತ ಸೇರಿದಂತೆ ಪ್ರಮುಖ ಪ್ರವಾಸಿ ತಾಣಗಳಿಗೆ ಮೂಲಸೌಕರ್ಯ ಕಲ್ಪಿಸಿ ನಿಯಮಬದ್ಧ ಪ್ರವೇಶಕ್ಕೆ ಅವಕಾಶ ಕಲ್ಪಿಸಬೇಕು ಎಂದರು.ಹೆಬ್ರಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಿ ತಜ್ಞ ವೈದ್ಯರು, ತುರ್ತು ಚಿಕಿತ್ಸಾ ಸೌಲಭ್ಯ ಹಾಗೂ ಅಗತ್ಯ ಸಿಬ್ಬಂದಿ ಒದಗಿಸಬೇಕು. ವಾರಾಹಿ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಕೊಲ್ಲೂರು–ಧರ್ಮಸ್ಥಳ–ಬೆಂಗಳೂರು ರೈಲು ಸಂಪರ್ಕ ಯೋಜನೆಯನ್ನು ಪುನರುಜ್ಜೀವನಗೊಳಿಸಲು ಕೇಂದ್ರ ಸರ್ಕಾರದ ಗಮನ ಸೆಳೆಯಬೇಕು ಎಂದು ಒತ್ತಾಯಿಸಿದರು.169ಎ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಪರಿಸರಕ್ಕೆ ಧಕ್ಕೆಯಾಗದಂತೆ ವೈಜ್ಞಾನಿಕ ಹಾಗೂ ಸುಸ್ಥಿರ ರೀತಿಯಲ್ಲಿ ತ್ವರಿತವಾಗಿ ಕೈಗೆತ್ತಿಕೊಳ್ಳಬೇಕು. ಮುಖ್ಯಮಂತ್ರಿ ಹೆಬ್ರಿ ಭೇಟಿಯ ವೇಳೆ ಕರಾವಳಿಯ ಈ ಪ್ರಮುಖ ಬೇಡಿಕೆಗಳ ಬಗ್ಗೆ ಸರ್ಕಾರ ಸ್ಪಷ್ಟ ಕ್ರಮ ಕೈಗೊಳ್ಳುವ ನಿರೀಕ್ಷೆಯಿದೆ ಎಂದು ಮಂಜುನಾಥ ಪೂಜಾರಿ ಹೇಳಿದರು.ಸುದ್ದಿಗೋಷ್ಠಿಯಲ್ಲಿ ರಹಮತುಲ್ಲಾ, ಅಶ್ಫಾಕ್ ಅಹ್ಮದ್, ರಮೇಶ್, ರಾಘವ, ಬಿಪಿನ್ ಚಂದ್ರ ಪಾಲ್ ಹಾಗೂ ಜಾರ್ಜ್ ಕ್ಯಾಸ್ಟಲಿನೊ ಉಪಸ್ಥಿತರಿದ್ದರು.