ಸಾಮಾಜಿಕ ಸಮಾನತೆಗಾಗಿ ಶ್ರಮಿಸಿದ ನಾರಾಯಣ ಗುರು: ಚಿದಾನಂದಪ್ಪ

| Published : Sep 08 2025, 01:01 AM IST

ಸಾರಾಂಶ

ಸಾಮಾಜಿಕ ಕ್ರಾಂತಿಯ ಮೂಲಕ ಜಾತೀಯತೆ, ಅಸ್ಪೃಶ್ಯತೆ ಎಂಬ ವಿಷ ವೃಕ್ಷವನ್ನು ತೆಗೆದುಹಾಕುವ ಮೂಲಕ ಸಾಮಾಜಿಕ ಸಮಾನತೆಗಾಗಿ ಶ್ರಮಿಸಿದವರು.

ಬಳ್ಳಾರಿಯಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆಕನ್ನಡಪ್ರಭ ವಾರ್ತೆ ಬಳ್ಳಾರಿ

ಸಾಮಾಜಿಕ ಕ್ರಾಂತಿಯ ಮೂಲಕ ಜಾತೀಯತೆ, ಅಸ್ಪೃಶ್ಯತೆ ಎಂಬ ವಿಷ ವೃಕ್ಷವನ್ನು ತೆಗೆದುಹಾಕುವ ಮೂಲಕ ಸಾಮಾಜಿಕ ಸಮಾನತೆಗಾಗಿ ಶ್ರಮಿಸಿದವರು ಬ್ರಹ್ಮಶ್ರೀ ನಾರಾಯಣ ಗುರುಗಳು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ. ಚಿದಾನಂದಪ್ಪ ಹೇಳಿದರು.

ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವುಗಳ ಸಂಯುಕ್ತಾಶ್ರಯದಲ್ಲಿ ನಗರದ ಡಾ. ರಾಜ್‍ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಛಯ ಆವರಣದ ಹೊಂಗಿರಣ ಸಭಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ಬ್ರಹ್ಮಶ್ರೀ ನಾರಾಯಣಗುರು ಜನ್ಮದಿನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬಳ್ಳಾರಿಯ ಆಕಾಶವಾಣಿ ಎಫ್ಎಂ ಕೇಂದ್ರದ ಉದ್ಘೋಷಕ ಬಸವರಾಜ ಅಮಾತಿ ವಿಶೇಷ ಉಪನ್ಯಾಸ ನೀಡಿ, ಕೇರಳದಲ್ಲಿ ಜಾತಿ, ಮತಭೇದಗಳು ಹೆಚ್ಚಾಗಿದ್ದ ಕಾಲದಲ್ಲಿ ನಾರಾಯಣ ಗುರು ಎಂಬ ಒಬ್ಬ ಸಮಾಜ ಸುಧಾರಕ, ಉದಯಿಸಿ, ಸಮಾಜದ ತಾರತಮ್ಯಗಳನ್ನು ಕಡಿಮೆ ಮಾಡಲು ತಮ್ಮ ಇಡೀ ಜೀವನ ಮುಡಿಪಾಗಿಟ್ಟರು.

ಜಗತ್ತಿನಲ್ಲಿರುವುದು ಒಂದೇ ಜಾತಿ, ಒಂದೇ ಮತ, ಹಾಗೂ ಒಂದೇ ದೇವರು ಎಂಬ ಸತ್ಯವಾಕ್ಯವನ್ನು ಗುರುಗಳು ಪ್ರತಿಪಾದಿಸಿದ ತತ್ವವಾಗಿತ್ತು. ಅದ್ವಿತೀಯ ಪಂಡಿತರಾಗಿದ್ದ ಅವರು, ಕೇರಳ ಸಮಾಜದಲ್ಲಿ ಅಸ್ಪೃಶ್ಯತೆಯ ಪಿಡುಗಿಗೆ ತಮ್ಮದೇ ಆದ ನಿಲುವಿನಲ್ಲಿ, ಸಮಾಧಾನಕರವಾದ ಉಪಾಯ ಕಂಡುಕೊಂಡರು ಎಂದು ಅಮಾತಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಬಳ್ಳಾರಿಯ ರೇಣುಕಾ ಎ. ತಂಡದವರು ಭಕ್ತಿ ಸಂಗೀತ ಗಾಯನ ಪ್ರಸ್ತುತಪಡಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಜಿಲ್ಲಾ ಆರ್ಯ ಈಡಿಗ ಗೌನ ಮಹಾಜನ ಸಂಘದ ಜಿಲ್ಲಾಧ್ಯಕ್ಷ ಎಚ್.ಆರ್. ಶ್ರೀನಾಥ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಯ ಪದಾಧಿಕಾರಿಗಳು, ಸಮಾಜದ ಮುಖಂಡರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಬ್ರಹ್ಮಶ್ರೀ ನಾರಾಯಣ ಗುರು ಜಯಂತ್ಯೋತ್ಸವ ಅಂಗವಾಗಿ ನಗರದಲ್ಲಿ ಮೆರವಣಿಗೆ ನಡೆಯಿತು. ನಾರಾಯಣಗುರು ಅವರ ಭಾವಚಿತ್ರದೊಂದಿಗೆ ಪೂರ್ಣ ಕುಂಭ ಹೊತ್ತ ಮಹಿಳೆಯರು ಹಾಗೂ ವಿವಿಧ ಸಾಂಸ್ಕೃತಿಕ ಕಲಾತಂಡಗಳು ಗಮನ ಸೆಳೆದವು. ನಗರದ ಈಡಿಗ ಹಾಸ್ಟೆಲ್ ನಿಂದ ಆರಂಭಗೊಂಡ ಮೆರವಣಿಗೆ ಗಡಿಗಿ ಚನ್ನಪ್ಪ ವೃತ್ತ-ಡಾ. ರಾಜಕುಮಾರ್ ರಸ್ತೆ- ಇಂದಿರಾ ವೃತ್ತದ ಮೂಲಕ ಸಾಂಸ್ಕೃತಿಕ ಸಮುಚ್ಚಯ ಹೊಂಗಿರಣ ಸಭಾಂಗಣದ ವೇದಿಕೆಯವರೆಗೆ ತಲುಪಿ ಸಂಪನ್ನಗೊಂಡಿತು.