ಸಾರಾಂಶ
ಕೊಪ್ಪಳ:
ಜು. 12ರಂದು ಜಿಲ್ಲಾದ್ಯಂತ ರಾಷ್ಟೀಯ ಲೋಕ್ ಅದಾಲತ್ ಹಮ್ಮಿಕೊಂಡಿದ್ದು ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ. ಮಹಾಂತೇಶ ಎಸ್. ದರಗದ್ ಹೇಳಿದರು.ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ನ್ಯಾ. ಸಿ. ಚಂದ್ರಶೇಖರ ಅವರ ನಿರ್ದೇಶನದಂತೆ ಅಂದು ಅದಾಲತ್ ನಡೆಯಲಿದೆ. ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ದಾವೆದಾರರು ಹಾಗೂ ಕಕ್ಷಿದಾರರು ಇದರಲ್ಲಿ ಭಾಗವಹಿಸಿ ತಮ್ಮ ಪ್ರಕರಣ ಇತ್ಯರ್ಥಪಡಿಸಿಕೊಳ್ಳಬಹುದು ಎಂದರು.
ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಕ್ಕೆ ತಕ್ಷಣ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದ್ದು ಪರಸ್ಪರ ರಾಜಿ ಸಂಧಾನ ಮಾಡಿಕೊಳ್ಳಬಹುದು ಎಂದು ತಿಳಿಸಿದ್ದಾರೆ.ರಾಜಿ ಸಂಧಾನಕ್ಕಾಗಿ ಸಿವಿಲ್ ದಾವೆ, ಭೂ-ಸ್ವಾಧೀನ, ಬ್ಯಾಂಕ್ ವಸೂಲಾತಿ, ದರಖಾಸ್ತು ಅರ್ಜಿ, ಕಾರ್ಮಿಕ, ಎಂಎಂಆರ್ಡಿ, ಚೆಕ್ ಬೌನ್ಸ್, ಮೋಟಾರು ಅಪಘಾತ ಪರಿಹಾರ, ವೈವಾಹಿಕ ಹಾಗೂ ರಾಜಿ ಆಗಲು ಅರ್ಹವಿರುವ ಕ್ರಿಮಿನಲ್ ಪ್ರಕರಣಗಳನ್ನು ರಾಜಿಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದು ಎಂದಿರುವ ಅವರು, ತಾವು ನ್ಯಾಯಾಲಯಕ್ಕೆ ತುಂಬಿದ ಕೋರ್ಟ್ ಶುಲ್ಕವನ್ನು ಸಹ ಸಂಪೂರ್ಣವಾಗಿ ವಾಪಸ್ ನೀಡಲಾಗುವುದು ಎಂದು ಹೇಳಿದ್ದಾರೆ.
ಪ್ರಕರಣ ರಾಜಿಸಂಧಾನದ ಮೂಲಕ ಇತ್ಯರ್ಥವಾದರೆ ಉಭಯ ಪಕ್ಷಗಾರರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿಲ್ಲ. ಇದರಿಂದ ಹಣ, ಸಮಯ ಹಾಗೂ ಸಂಬಂಧ ಉಳಿಸಿಕೊಳ್ಳಲು ಸಹಾಯಕವಾಗುತ್ತದೆ. ಆದರಿಂದ ಅಂದು ನಡೆಯುವ ಅದಾಲತ್ನ ಸದುಪಯೋಗಪಡೆದುಕೊಳ್ಳಿ ಎಂದು ತಿಳಿಸಿದ್ದಾರೆ.ಜಿಲ್ಲಾ ಸಾಥಿ ಸಮಿತಿ:
ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ ಜಿಲ್ಲಾ ಸಾಥಿ ಸಮಿತಿ ರಚಿಸಲು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜಿಲ್ಲಾ ಸಾಥಿ ಸಮಿತಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ತಹಸೀಲ್ದಾರ್ರು, ಶಿಕ್ಷಣಾಧಿಕಾರಿ, ಆರೋಗ್ಯ ಅಧಿಕಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಪ್ಯಾನಲ್ ವಕೀಲರು, ಪ್ಯಾರಾ ಲೀಗಲ್ ವಾಲಂಟಿಯರ್ಸ್ಗಳು ಈ ಸಮಿತಿಗೆ ಸದಸ್ಯರಾಗಿರುತ್ತಾರೆ ಎಂದರು.ನೇಮಕಾತಿ:
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೊಪ್ಪಳದಲ್ಲಿ ವಕೀಲರಗಳಿಗೆ ಮುಖ್ಯ ಕಾನೂನು ಅಭಿರಕ್ಷಕರು, ಉಪ ಮುಖ್ಯ ಕಾನೂನು ಅಭಿರಕ್ಷಕರು ಹಾಗೂ ಸಹಾಯಕ ಕಾನೂನು ಅಭಿರಕ್ಷಕರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದ್ದು ಜೂ. 9ರಿಂದ ಜೂ. 19ರೊಳಗಾಗಿ ದಾಖಲಾತಿಗಳೊಂದಿಗೆ ನಿಗದಿತ ಅರ್ಜಿಯನ್ನು ಸಂಜೆ 6ರ ಒಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ https://koppal.dcourts.gov.in ಹಾಗೂ https://koppal.dcourts.gov.in/dlsa-tlsa/ ಸಂಪರ್ಕಿಸಬಹುದು ಎಂದು ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಸುರೇಶ ಜಿ., ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಪ್ರ.ದ.ಸ ಎಂ.ಬಿ. ಹನೀಫ್ ಸೇರಿದಂತೆ ನ್ಯಾಯಾಲಯದ ಇತರೆ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.