ವಿದ್ಯಾರ್ಥಿಗಳು ನಾಯಕತ್ವ ಗುಣವನ್ನು ಬೆಳೆಸಿಕೊಳ್ಳಲು ರಾಷ್ಟ್ರೀಯ ಸೇವಾ ಯೋಜನೆ ಒಂದು ಉತ್ತಮ ವೇದಿಕೆಯಾಗಿದೆ ಎಂದು ಕಾಫಿ ಬೆಳೆಗಾರ ಅವರೇಮಾದಂಡ ಶರಣ್ ಪೂಣಚ್ಚ ಹೇಳಿದರು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ವಿದ್ಯಾರ್ಥಿಗಳು ನಾಯಕತ್ವ ಗುಣವನ್ನು ಬೆಳೆಸಿಕೊಳ್ಳಲು ರಾಷ್ಟ್ರೀಯ ಸೇವಾ ಯೋಜನೆ ಒಂದು ಉತ್ತಮ ವೇದಿಕೆಯಾಗಿದೆ ಎಂದು ಕಾಫಿ ಬೆಳೆಗಾರ ಅವರೇಮಾದಂಡ ಶರಣ್ ಪೂಣಚ್ಚ ಹೇಳಿದರು.

ಇಲ್ಲಿಗೆ ಸಮೀಪದ ಮೂರ್ನಾಡು ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಆಯೋಜಿಸಲಾಗಿದ್ದ ರಾಷ್ಟ್ರೀಯ ಸೇವಾ ಯೋಜನೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳು ರಾಷ್ಟ್ರೀಯ ಸೇವಾ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಮತ್ತೋರ್ವ ಮುಖ್ಯ ಅತಿಥಿ ವಿರಾಜಪೇಟೆ ಸರ್ಕಾರಿ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಜ್ಯೋತಿಪ್ರಕಾಶ್ ಮಾತನಾಡಿ, ವಿದ್ಯಾರ್ಥಿಗಳಿಗೆ ಶಿಸ್ತು ತುಂಬಾ ಮುಖ್ಯ. ಶಿಸ್ತು ಇದ್ದರೆ ಮಾತ್ರ ವಿದ್ಯೆ ಚೆನ್ನಾಗಿ ಕಲಿಯಬಹುದು. ಪ್ರತಿಯೊಬ್ಬರೂ ಉತ್ತಮ ಶಿಕ್ಷಣ ಪಡೆದು ಸಮಾಜದ ಉತ್ತಮ ನಾಗರಿಕರಾಗಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲರಾದ ದೇವಕಿ ಮಾತನಾಡಿ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂರ್ನಾಡು ವಿದ್ಯಾ ಸಂಸ್ಥೆಯ ಅಧ್ಯಕ್ಷ ಐ.ಜಿ. ಚಿನ್ನಪ್ಪ ವಹಿಸಿದ್ದರು. ರಾಷ್ಟ್ರೀಯ ಸೇವಾ ಯೋಜನೆ ಘಟಕದ ಎಲ್ಲ ಪದಾಧಿಕಾರಿಗಳು ಹಾಜರಿದ್ದರು. ಎನ್ಎಸ್ಎಸ್ ಸ್ವಯಂಸೇವಕ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು.

ಎನ್ ಎಸ್ ಎಸ್ ಯೋಜನಾಧಿಕಾರಿ ರಶ್ಮಿ ಸ್ವಾಗತಿಸಿದರು. ಉಪನ್ಯಾಸಕಿ ರೋಹಿಣಿ ಮತ್ತು ಲೀನಾ ಅತಿಥಿಗಳ ಪರಿಚಯ ಮಾಡಿದರು. ಉಪನ್ಯಾಸಕಿ ಲೀನಾ ಕಾರ್ಯಕ್ರಮ ನಿರೂಪಿಸಿದರು. ಸೌಮಿನಿ ವಂದಿಸಿದರು.