ಭಯೋತ್ಪಾದಕ ದಾಳಿ ಸಂತ್ರಸ್ತರ ಮಕ್ಕಳಿಗೆ ನಟ್ಟೋಜ ಫೌಂಡೇಶನ್‌ ಉಚಿತ ಶಿಕ್ಷಣ ಘೋಷಣೆ

| Published : Apr 25 2025, 11:52 PM IST

ಭಯೋತ್ಪಾದಕ ದಾಳಿ ಸಂತ್ರಸ್ತರ ಮಕ್ಕಳಿಗೆ ನಟ್ಟೋಜ ಫೌಂಡೇಶನ್‌ ಉಚಿತ ಶಿಕ್ಷಣ ಘೋಷಣೆ
Share this Article
  • FB
  • TW
  • Linkdin
  • Email

ಸಾರಾಂಶ

ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾಧಕರ ನಡೆಸಿದ ನರಮೇಧದಿಂದ ಮೃತಪಟ್ಟ ಕುಟುಂಬಗಳಿಂದ ಅನಾಥರಾದ ಮಕ್ಕಳಿಗೆ ಎಲ್‌ಕೆಜಿಯಿಂದ ಪದವಿ ತನಕ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ಶಿಕ್ಷಣ ಸಂಸ್ಥೆಗಳಲ್ಲಿ ಉಚಿತ ಶಿಕ್ಷಣ ಒದಗಿಸಲಾಗುವುದು ಎಂದು ಅಂಬಿಕಾ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಪುತ್ತೂರು

ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾಧಕರ ನಡೆಸಿದ ನರಮೇಧದಿಂದ ಮೃತಪಟ್ಟ ಕುಟುಂಬಗಳಿಂದ ಅನಾಥರಾದ ಮಕ್ಕಳಿಗೆ ಎಲ್‌ಕೆಜಿಯಿಂದ ಪದವಿ ತನಕ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ಶಿಕ್ಷಣ ಸಂಸ್ಥೆಗಳಲ್ಲಿ ಉಚಿತ ಶಿಕ್ಷಣ ಒದಗಿಸಲಾಗುವುದು ಎಂದು ಅಂಬಿಕಾ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ತಿಳಿಸಿದ್ದಾರೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಶ್ಮೀರದಲ್ಲಿ ಹಿಂದೂಗಳ ಮೇಲೆ ನಡೆದಿರುವ ದಾಳಿಯಿಂದ ಹಿಂದೂ ಸಮಾಜ ತಲೆ ತಗ್ಗಿಸುವಂತಾಗಿದೆ. ಭಯೋತ್ಪಾದಕರ ದಾಳಿಗೆ ತುತ್ತಾದ ಕುಟುಂಬಗಳ ಜೊತೆಗೆ ನಿಮ್ಮೊಂದಿಗೆ ನಾವಿದ್ದೇವೆ ಎಂಬುದನ್ನು ತೋರಿಸುವ ನಿಟ್ಟಿನಲ್ಲಿ ಕಾಶ್ಮೀರ ದಾಳಿಯಲ್ಲಿನ ಸಂತ್ರಸ್ತ ಕುಟುಂಬಗಳ ಮಕ್ಕಳಿಗೆ ಸಂಪೂರ್ಣ ಉಚಿತವಾಗಿ ಶಿಕ್ಷಣ ನೀಡುವುದಕ್ಕೆ ನಿರ್ಧರಿಸಲಾಗಿದೆ ಎಂದು ಘೋಷಿಸಿದರು.

ಎಲ್‌ಕೆಜಿ ತರಗತಿಯಿಂದ ತೊಡಗಿ ಪದವಿ ಹಂತದ ತನಕ ಯಾವುದೇ ತರಗತಿಯಲ್ಲಿ ಓದಲು ಬಯಸುವ ದಾಳಿ ಸಂತ್ರಸ್ತರ ಮಕ್ಕಳಿಗೆ ಊಟೋಪಚಾರ, ವಸತಿ ಮತ್ತು ಶುಲ್ಕರಹಿತವಾಗಿ ಉಚಿತ ಶಿಕ್ಷಣ ಸೌಲಭ್ಯ ಒದಗಿಸಲಾಗುವುದು ಎಂದರು.

ಈ ಹಿಂದೆ ಕಾಶ್ಮೀರದ ಪಂಡಿತರ ಮೇಲಾದ ದೌರ್ಜನ್ಯ ಮನಗಂಡು ಕಾಶ್ಮೀರಿ ಸಂತ್ರಸ್ತ ಪಂಡಿತರ ಮಕ್ಕಳಿಗೆ ಉಚಿತ ಶಿಕ್ಷಣ ಘೋಷಿಸಿತ್ತು. ಅದರ ಅನ್ವಯ ಕಾಶ್ಮೀರದಿಂದ ಇಬ್ಬರು ವಿದ್ಯಾರ್ಥಿಗಳು ಪುತ್ತೂರಿನ ಅಂಬಿಕಾ ಪದವಿ ಪೂರ್ವ ವಿದ್ಯಾಲಯಕ್ಕೆ ಆಗಮಿಸಿದ್ದರು. ಅಲ್ಲದೆ ಸೈನಿಕರ ಮಕ್ಕಳಿಗೆ ಹಲವು ವರ್ಷಗಳಿಂದ ಸಂಸ್ಥೆಯು ರಿಯಾಯಿತಿ ಶುಲ್ಕದೊಂದಿಗೆ ಶಿಕ್ಷಣ ಒದಗಿಸುತ್ತಿದೆ ಎಂದು ಮಾಹಿತಿ ನೀಡಿದರು.

ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಯ ವಿರುದ್ಧ ಸಂಸ್ಥೆಯ ವಿದ್ಯಾರ್ಥಿ ಸಂಘಗಳ ವತಿಯಿಂದ ಪ್ರತಿಭಟನೆ ನಡೆಸಿ ಭಯೋತ್ಪಾಧನೆ ಬೇರು ಸಹಿತ ಕಿತ್ತು ಹಾಕುವಂತೆ ಆಗ್ರಹಿಸಿ ಪುತ್ತೂರಿನ ಉಪವಿಭಾಗಾಧಿಕಾರಿಗಳ ಮೂಲಕ ದೇಶದ ಗೃಹ ಸಚಿವರಿಗೆ ಮನವಿ ಪತ್ರ ಸಲ್ಲಿಸಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ನಟ್ಟೋಜ ಫೌಂಡೇಶನ್ ಟ್ರಸ್ಟ್ ಕೋಶಾಧಿಕಾರಿ ರಾಜಶ್ರೀ ನಟ್ಟೋಜ, ಸಂಸ್ಥೆಯ ಆಡಳಿತಾಧಿಕಾರಿ ಗಣೇಶ್ ಪ್ರಸಾದ್, ಸದಸ್ಯರಾದ ಡಾ. ಎಚ್. ಮಾಧವ ಭಟ್, ಬಾಲಕೃಷ್ಣ ಬೋರ್ಕರ್ ಇದ್ದರು.