ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರು ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ನಿತೀಶ್ ಕುಮಾರ್ ರವರ ಪರ ಜೈಕಾರ ಹಾಕಿದ ಮುಖಂಡರು ಪರಸ್ಪರ ಸಿಹಿ ತಿನಿಸಿ ಸಂಭ್ರಮಿಸಿದರು.

ನಂತರ ಮಂಡಲ ಅಧ್ಯಕ್ಷ ಪೀಹಳ್ಳಿ ರಮೇಶ್ ಮಾತನಾಡಿ, ಬಿಹಾರ ಮತದಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಗೆ ಬಹುಮತ ನೀಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಅಣಕಿಸುವಂತೆ ಮತಗಳ್ಳತನದ ಅಪಪ್ರಚಾರದಲ್ಲಿದ್ದ ಕಾಂಗ್ರೆಸ್‌ಗೆ ತಕ್ಕ ಉತ್ತರ ನೀಡಿದ್ದಾನೆ ಎಂದು ಟೀಕಿಸಿದರು.

ಬಿಜೆಪಿ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಕೆ.ಎಸ್ ನಂಜುಂಡೇಗೌಡ ಮಾತನಾಡಿ, ದೇಶದ ಭವಿಷ್ಯ ಹಾಗೂ ಭದ್ರತೆ ದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿ ಅನಿವಾರ್‍ಯ ಎಂಬ ಅಭಿಪ್ರಾಯಕ್ಕೆ ಇಡೀ ದೇಶದ ಜನ ಬಂದಿದ್ದಾರೆ. ಬಿಜೆಪಿ ಹಾಗೂ ನರೇಂದ್ರ ಮೋದಿ ಅವರನ್ನು ಟೀಕೆ ಮಾಡುವ ಭರದಲ್ಲಿ ವಿರೋಧ ಪಕ್ಷಗಳು ದೇಶದ ಭದ್ರತೆಯನ್ನೇ ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದ್ದವು. ಸದ್ಯ ಬಿಹಾರದ ಜನರು ಸರಿಯಾದ ಉತ್ತರ ಕೊಟ್ಟಿದ್ದಾರೆ ಎಂದು ಹೇಳಿದರು.


ಈ ವೇಳೆ ಮಳ್ಳೇನಹಳ್ಳಿ ಚಂದ್ರು, ಪುಟ್ಟರಾಜು, ಕೃಷ್ಣಪ್ಪ, ಚಂದಗಾಲು ಶಂಕರ್, ಹೇಮಂತ್, ಕಿರಣ್‌ಸಿಂಗ್, ಬಿ.ಸಿ ಕೃಷ್ಣೇಗೌಡ, ಉಮೇಶ್‌ಕುಮಾರ್, ಮಂಜು, ಎಸ್.ಕೆ ಮಂಜುನಾಥ್ ಸೇರಿದಂತೆ ಇತರರು ಇದ್ದರು.