ಕನ್ನಡಪ್ರಭ ವಾರ್ತೆ, ತುಮಕೂರುಮುಂಬರುವ ಅಕ್ಟೋಬರ್ ತಿಂಗಳಲ್ಲಿ ನಡೆಯಲಿರುವ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಕೆ.ಎಂ. ಸುರೇಶ್ ಅವರ ಗೆಲುವಿಗೆ ಪಕ್ಷದ ಕಾರ್ಯಕರ್ತರು ಶ್ರಮಿಸಬೇಕು ಎಂದು ಶಾಸಕ ಜಿ.ಬಿ. ಜ್ಯೋತಿ ಗಣೇಶ್ ಕರೆ ನೀಡಿದರು.ನಗರದ ಸಿದ್ದರಾಮೇಶ್ವರ ಬಡಾವಣೆಯ ೨ನೇ ಕ್ರಾಸ್‌ನ ಪೂರ್ವ ಪಾರ್ಕ್ ಬಳಿ ನೂತನವಾಗಿ ಆರಂಭಿಸಲಾದ ಆಗ್ನೇಯ ಪದವೀಧರ ಕ್ಷೇತ್ರದ ಎನ್.ಡಿ.ಎ. ಮೈತ್ರಿಕೂಟದ ಅಭ್ಯರ್ಥಿ ಕೆ.ಎಂ. ಸುರೇಶ್ ಅವರ ಗೃಹ ಕಚೇರಿ ಶ್ರೀ ಲಕ್ಷ್ಮೀವೆಂಕಟೇಶ್ವರ ನಿಲಯ ಉದ್ಘಾಟಿಸಿ ಅವರು ಮಾತನಾಡಿದರು.ಆಗ್ನೇಯ ಪದವೀಧರ ಕ್ಷೇತ್ರ ಎಸ್. ಮಲ್ಲಿಕಾರ್ಜುನಯ್ಯ ಕಾಲದಿಂದಲೂ ಬಿಜೆಪಿಯ ಭದ್ರಕೋಟೆಯಾಗಿದೆ. ಅಂದಿನಿಂದಲೂ ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿ ಪದವೀಧರರು ಮತ್ತು ಶಿಕ್ಷಕರ ಸಮಸ್ಯೆಗಳಿಗೆ ಧ್ವನಿಯಾಗಿ ಕೆಲಸ ಮಾಡಿದ್ದಾರೆ. ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಸುಮಾರು ೨ ಲಕ್ಷ ಪದವೀಧರರ ಮತದಾರರಿದ್ದು, ಕ್ಷೇತ್ರದಲ್ಲಿ ಪದವೀಧರರು ಮತ್ತು ಶಿಕ್ಷಕರು ಸಮಸ್ಯೆಗಳಿಗೆ ಧ್ವನಿಯಾಗಿ ಸುರೇಶ್ ರವರು ಕೆಲಸ ಮಾಡಲಿದ್ದಾರೆ. ಹಾಗಾಗಿ ಚುನಾವಣೆಯಲ್ಲಿ ಅವರ ಗೆಲುವಿಗೆ ಪಕ್ಷದ ಮುಖಂಡರು, ಕಾರ್ಯಕರ್ತರು ಶ್ರಮ ವಹಿಸಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಆಗ್ನೇಯ ಪದವೀಧರ ಕ್ಷೇತ್ರ ಎನ್‌ಡಿಎ ಅಭ್ಯರ್ಥಿ ಕೆ.ಎಂ. ಸುರೇಶ್ ಮಾತನಾಡಿ, ಈ ಕ್ಷೇತ್ರದಲ್ಲಿ ಯಾವಾಗಲೂ ಬಿಜೆಪಿ ಗೆದ್ದಿದೆ. ಈಗ ನಡೆಯುತ್ತಿರುವ ೯ನೇ ಚುನಾವಣೆಯಲ್ಲೂ ಎನ್‌ಡಿಎ ಮೈತ್ರಿಕೂಟ ಗೆಲ್ಲುತ್ತದೆ ಎಂಬ ವಿಶ್ವಾಸವಿದೆ ಎಂದರು. ಇದು ನನ್ನ ಚುನಾವಣೆಯಲ್ಲ, ಕಾರ್ಯಕರ್ತರ ಚುನಾವಣೆ. ಎಲ್ಲರ ಸಹಕಾರದಿಂದ ಪಕ್ಷ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸ ನನಗಿದೆ ಎಂದ ಅವರು, ಹಿರಿಯರ ಆಶೀರ್ವಾದದಿಂದ ಎನ್‌ಡಿಎ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧೆ ಮಾಡಲು ಅವಕಾಶ ಸಿಕ್ಕಿದೆ. ಪಕ್ಷದ ಎಲ್ಲರ ಸಹಕಾರ, ಕಾರ್ಯಕರ್ತರ ಬಲದಿಂದ ಗೆಲ್ಲುತ್ತೇವೆ ಎಂದರು. ಪದವೀಧರರಿಗೆ ಬಹಳಷ್ಟು ಹುದ್ದೆಗಳು ಖಾಲಿ ಇದ್ದರೂ ಸರ್ಕಾರ ನೇಮಕಾತಿ ಪ್ರಕ್ರಿಯೆ ಕೈಗೊಳ್ಳುತ್ತಿಲ್ಲ. ಕೂಡಲೇ ರಾಜ್ಯ ಸರ್ಕಾರ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಬೇಕು. ಆಗ್ನೇಯ ಪದವೀಧರ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ೫ ಜಿಲ್ಲಾ ಕೇಂದ್ರಗಳಲ್ಲಿ ನನ್ನ ಸ್ವಂತ ಖರ್ಚಿನಲ್ಲಿ ಕೆಎಎಸ್, ಐಎಎಸ್, ಐಪಿಎಸ್ ಓದುವವರಿಗೆ ಇ-ಲೈಬ್ರರಿ ಮಾಡುವುದಾಗಿ ಅವರು ಹೇಳಿದರು.

ಮುಖಂಡರಾದ ಸಿರಾದ ಬಿ.ಕೆ. ಮಂಜುನಾಥ್ ಮಾತನಾಡಿ, ಆಗ್ನೇಯ ಪದವೀಧರ ಕ್ಷೇತ್ರ ಯಾವಾಗಲೂ ಬಿಜೆಪಿ ಭದ್ರಕೋಟೆ. ಈ ಬಾರಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯನ್ನಾಗಿ ವರಿಷ್ಠರು ಸುರೇಶ್ ರವರನ್ನು ಘೋಷಣೆ ಮಾಡಿದ್ದಾರೆ. ಹಾಗಾಗಿ ಎನ್‌ಡಿಎ ಮೈತ್ರಿ ಕೂಟದ ಅಭ್ಯರ್ಥಿ ಸುರೇಶ್‌ರವರ ಗೆಲುವಿಗೆ ಎಲ್ಲರೂ ಶ್ರಮ ವಹಿಸಿ ಕೆಲಸ ಮಾಡಬೇಕು ಎಂದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎಚ್.ಎಸ್. ರವಿಶಂಕರ್ ಹೆಬ್ಬಾಕ, ಮಾಜಿ ಶಾಸಕ ಎಂ.ಡಿ. ಲಕ್ಷ್ಮೀ ನಾರಾಯಣ್, ವೇದಮೂರ್ತಿ, ರುದ್ರೇಶ್, ಮಾಜಿ ವಿಧಾನ ಪರಿಷತ್ ಸದಸ್ಯ ಶಿವಯೋಗಿಸ್ವಾಮಿ, ಪರಿವಾರದ ಕಾಶಿನಾಥ್, ವಸಂತಕುಮಾರ್, ಗಂಗಾಧರ್, ಸುಬ್ಬಣ್ಣ, ವೀರೇಶ್, ಮೂರ್ತಿ, ಎಲ್.ಎನ್. ಕಲ್ಲೇಶ್, ಶಿವಶಂಕರ್ ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

ಫೋಟೋ : ಆಗ್ನೇಯ ಪದವೀಧರ ಕ್ಷೇತ್ರದ ಎನ್.ಡಿ.ಎ. ಮೈತ್ರಿಕೂಟದ ಅಭ್ಯರ್ಥಿ ಕೆ.ಎಂ. ಸುರೇಶ್ ಅವರ ಗೃಹ ಕಚೇರಿಯನ್ನು ಶಾಸಕ ಜಿ.ಬಿ. ಜ್ಯೋತಿ ಗಣೇಶ್ ಉದ್ಘಾಟಿಸಿದರು.