ಸಾರಾಂಶ
ಕನ್ನಡಪ್ರಭ ವಾರ್ತೆ ಹಾವೇರಿ
ಲೋಕಸಭಾ ಚುನಾವಣೆಯಲ್ಲಿ ದೇಶದ ಜನರು ದುರಹಂಕಾರಿ ಸರ್ಕಾರಕ್ಕೆ ಸಂದೇಶ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಕ್ಕಪಾಠ ಕಲಿಸಿದ್ದಾರೆ. ಎನ್ಡಿಎ ಕಿಚಡಿ ಸರ್ಕಾರವಾಗಿದ್ದು, ಇದಕ್ಕೆ ಆಯುಷ್ಯ ಬಹಳ ಕಡಿಮೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು.ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.ಪ್ರಧಾನಿ ಮೋದಿ ಭಾಷಣದಲ್ಲಿ ಸಬ್ ಕಾ ಸಾತ್ ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಅಂತ ಹೇಳುತ್ತಿದ್ದರು. ಆದರೆ, ಅವರು ಸಬ್ ಕಾ ವಿಶ್ವಾಸ್ ಕಳೆದುಕೊಂಡಿದ್ದಾರೆ. ಆಬ್ ಕಿ ಬಾರ್ ಚಾರಸೋ ಪಾರ್ ಅಂತ ಹೇಳುತ್ತಿದ್ದರೂ ೨೫೦ ಸ್ಥಾನ ಗೆಲ್ಲಲು ಸಾಧ್ಯವಾಗಿಲ್ಲ. ಮೋದಿ ಅವರು ಜನರ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ. ಸಂವಿಧಾನ ಬದಲಾವಣೆ ಮಾಡಲು ಹುನ್ನಾರ ಮಾಡಿದ್ದ ಅವರಿಗೆ ಜನರು ತಕ್ಕಪಾಠ ಕಲಿಸುವ ಮೂಲಕ ಸಂದೇಶ ನೀಡಿದ್ದಾರೆ ಎಂದರು.
ಗ್ಯಾರಂಟಿ ನಿಲ್ಲಲ್ಲರಾಜಕೀಯ ಉದ್ದೇಶಕ್ಕಾಗಿ ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿಲ್ಲ. ರಾಜ್ಯದ ಜನರ ಕಲ್ಯಾಣಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು, ಅವುಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ.
ರಾಜ್ಯದಲ್ಲಿ ಬಿಜೆಪಿ ಜನರದ ದಿಕ್ಕು ತಪ್ಪಿಸುವ ಮೂಲಕ ರಾಜ್ಯ ಸರ್ಕಾರ ಜನ ವಿರೋಧಿ ಸರ್ಕಾರ ಎಂದು ಬಿಂಬಿಸಲು ಹೋರಟಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ತೈಲ ಬೆಲೆ ಏರಿಕೆ ಆದಾಗ ಪ್ರಶ್ನಿಸಿದ ಅವರು ಈಗ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮುಂದಿಟ್ಟುಕೊಂಡು ರಾಜ್ಯ ಸರ್ಕಾರದ ವಿರುದ್ಧ ಷಡ್ಯಂತ್ರ ನಡೆಸುತ್ತಿದ್ದಾರೆ. ಕೇವಲ ಚುನಾವಣೆಗಾಗಿ ಗ್ಯಾರಂಟಿ ಯೋಜನೆ ಜಾರಿಗೊಳಿಸಿಲ್ಲ, ಜನರ ಸಂಕಷ್ಟಗಳಿಗೆ ಸ್ಪಂದಿಸಲು ಗ್ಯಾರಂಟಿ ಯೋಜನೆ ಜಾರಿಗೊಳಿಸಿ ರಾಜ್ಯದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದ್ದೇವೆ ಎಂದರು.ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಶೇ. ೪೫.೫ರಷ್ಟು ಮತಗಳು ಬಂದಿವೆ. ಕನಿಷ್ಟ ೧೩-೧೪ ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸವಿತ್ತು. ಆದರೆ ೯ ಸ್ಥಾನಗಳಲ್ಲಿ ಗೆಲುವು ಸಾಧ್ಯವಾಗಿದೆ. ೩-೪ ಸ್ಥಾನಗಳಲ್ಲಿ ಕಡಿಮೆ ಅಂತರದಲ್ಲಿ ಸೋಲಾಗಿದೆ. ಸೋಲಿಗೆ ಕಾರಣ ಏನು ಎಂಬುದರ ಕುರಿತು ಕೆಪಿಸಿಸಿ ವತಿಯಿಂದ ೨೮ ಕ್ಷೇತ್ರಗಳ ಕುರಿತು ಪರಾಮರ್ಶೆ ಮಾಡಲಾಗುವುದು. ಕಳೆದ ಲೋಸಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಶೇ. ೩೭ರಷ್ಟು ಮತ ಬಂದಿತ್ತು. ಆದರೆ ಈ ಬಾರಿ ಶೇ.೪೫.೫ರಷ್ಟು ಮತ ನೀಡಿದ್ದು ಎಲ್ಲ ಮತಬಾಂಧವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಿ ಬೂತ್ಮಟ್ಟದಲ್ಲಿ ಪಕ್ಷ ಸಂಘಟಿಸಿ ಮುಂಬರುವ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ, ತಾಪಂ, ಜಿಪಂ, ಚುನಾವಣೆಗೆ ಸಿದ್ಧತೆ ಕೈಗೊಳ್ಳಲಾಗುತ್ತಿದೆ.
ಚನ್ನಪಟ್ಟಣ, ಬಳ್ಳಾರಿ ಹಾಗೂ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಸಂಬಂಧಪಟ್ಟಂತೆ ಪಕ್ಷದ ಸಂಘಟನೆ, ಬೂತ್ ಕಮಿಟಿ ಕುರಿತು ಚರ್ಚೆ ನಡೆಯುತ್ತಿದೆ. ಚುನಾವಣೆಯಲ್ಲಿ ಅಭ್ಯರ್ಥಿ ಯಾರಾಗಬೇಕು ಎಂಬುದನ್ನು ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ. ಉಪಚುನಾವಣೆಯ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸವಿದೆ. ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧಿಸುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದರು.ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್ಎಫ್ಎನ್ ಗಾಜೀಗೌಡ್ರ, ಮಾಜಿ ಶಾಸಕ ನೆಹರು ಓಲೇಕಾರ, ಮುಖಂಡರಾದ ಎಂ.ಎಂ. ಹಿರೇಮಠ, ಎಂ.ಎಂ. ಮೈದೂರ, ಡಿ. ಬಸವರಾಜ, ಶಿವಕುಮಾರ ತಾವರಗಿ, ಬಸವರಾಜ ಹೆಡಿಗ್ಗೊಂಡ ಇತರರು ಇದ್ದರು.