ಕನ್ನಡಪ್ರಭವಾರ್ತೆ ಸೋಮವಾರಪೇಟೆ

ಪಶ್ಚಿಮಬಂಗಾಳ, ಅಸ್ಸಾಂ ಹಾಗೂ ಪುದುಚೇರಿಯಲ್ಲಿ ಬಿಜೆಪಿ ಪಕ್ಷ ಜಯ ದಾಖಲಿಸಿದ ಹಿನ್ನೆಲೆ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಪುಟ್ಟಪ್ಪ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು. ಈ ಸಂದರ್ಭ ಮಾತನಾಡಿದ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಮಹೇಶ್ ತಿಮ್ಮಯ್ಯ, ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯಗಳಿಸಿದೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಗೆಲುವು ಐತಿಹಾಸಿಕವಾಗಿದೆ. ಮಮತಾ ಬ್ಯಾನರ್ಜಿ ಅವರ ದುರಾಡಳಿತ, ದೇಶ ವಿರೋಧಿ ನೀತಿಗೆ ಜನತೆ ತಕ್ಕಪಾಠ ಕಲಿಸಿದ್ದಾರೆ. ಇದೇ ಹಾದಿಯಲ್ಲಿರುವ ಕಾಂಗ್ರೆಸ್‌ನ್ನು ಸಾರಾಸಗಟಾಗಿ ತಿರಸ್ಕರಿಸುವ ಮೂಲಕ ರಾಷ್ಟ್ರೀಯ ಏಕತೆಗಾಗಿ ಬಿಜೆಪಿಯನ್ನು ಬೆಂಬಲಿಸಿದ್ದಾರೆ ಎಂದರು. ಮುಂದಿನ ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲಿಯೂ ಬಿಜೆಪಿ ಗೆಲುವು ಸಾಧಿಸಿ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಅಭಿಪ್ರಾಯಿಸಿದರು. ಈ ಸಂದರ್ಭ ಪಕ್ಷದ ಪ್ರಮುಖರಾದ ಮನುಕುಮಾರ್ ರೈ, ಹೆಚ್.ಕೆ. ಮಾದಪ್ಪ, ದರ್ಶನ್ ಜೋಯಪ್ಪ, ಬಿ.ಎ. ಧರ್ಮಪ್ಪ, ಕಂಠಿ ಕಾರ್ಯಪ್ಪ, ಎಸ್.ಆರ್. ಸೋಮೇಶ್, ಪಿ.ಕೆ. ಚಂದ್ರು, ಸಿ.ಡಿ. ನೆಹರು, ದೇಶ್‌ರಾಜ್, ಮಂಜುಳಾ ಸುಬ್ರಮಣಿ, ವಿಜಯಕುಮಾರ್, ಸುಧೀರ್, ಶಿವಕುಮಾರ್ ಸೇರಿದಂತೆ ಇತರರು ಇದ್ದರು.