ಕನ್ನಡಪ್ರಭ ವಾರ್ತೆ ಸಕಲೇಶಪುರ

ತಾಲೂಕಿನ ಅಂಗನವಾಡಿಗಳಿಗೆ ಅಗತ್ಯವಿರುವ ಎಲ್ಲಾ ಮೂಲ ಸೌಕರ್ಯಗಳನ್ನು ಒದಗಿಸಲು ಶಕ್ತಿ ಮೀರಿ ಶ್ರಮಿಸುವುದಾಗಿ ಶಾಸಕ ಸಿಮೆಂಟ್ ಮಂಜು ಹೇಳಿದರು.ಪಟ್ಟಣದ ಪುರಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂಗನವಾಡಿಗಳಿಗೆ ಟಿವಿ, ಭಾಗ್ಯಲಕ್ಷ್ಮೀ ಬಾಂಡ್ ಹಾಗೂ ಕುಡಿಯುವ ನೀರಿನ ಶುದ್ಧೀಕರಣ ಫಿಲ್ಟರ್‌ಗಳನ್ನು ವಿತರಿಸಿ ಮಾತನಾಡಿ, ತಾಲೂಕಿನ ಸುಮಾರು 107 ಅಂಗನವಾಡಿಗಳಿಗೆ ಟಿವಿಗಳನ್ನು ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರ ಜೊತೆಗೆ ಬಡ ಕುಟುಂಬಗಳಲ್ಲಿ ಜನಿಸಿದ ಹೆಣ್ಣುಮಕ್ಕಳ ಭವಿಷ್ಯ ಭದ್ರತೆಗಾಗಿ 2006ರಲ್ಲಿ ಅಂದಿನ ಮುಖ್ಯಮಂತ್ರಿಯಾಗಿದ್ದ ಬಿ. ಎಸ್. ಯಡಿಯೂರಪ್ಪ ಅವರ ಅವಧಿಯಲ್ಲಿ ಜಾರಿಗೆ ಬಂದ ಭಾಗ್ಯಲಕ್ಷ್ಮೀ ಯೋಜನೆಯ ಬಾಂಡ್‌ಗಳನ್ನು ವಿತರಿಸಲಾಗುತ್ತಿದೆ. ಒಂದು ಕುಟುಂಬದಲ್ಲಿ ಎರಡು ಹೆಣ್ಣುಮಕ್ಕಳಿದ್ದರೆ ಅವರಿಗೆ 18 ವರ್ಷ ತುಂಬಿದ ಬಳಿಕ ಮೆಚ್ಯೂರಿಟಿಯಾಗಿ ಬಾಂಡ್ ನೀಡುವ ಯೋಜನೆಯಾಗಿದೆ ಎಂದು ತಿಳಿಸಿದರು.ಅದೇ ರೀತಿಯಲ್ಲಿ ಸರ್ಕಾರದಿಂದ ದೊರೆತಿರುವ ಶುದ್ಧ ಕುಡಿಯುವ ನೀರಿನ ಫಿಲ್ಟರ್‌ಗಳನ್ನು ಕೂಡ ಅಂಗನವಾಡಿಗಳಿಗೆ ವಿತರಿಸಲಾಗುತ್ತಿದೆ. ಮಕ್ಕಳಿಗೆ ಶುದ್ಧ ಕುಡಿಯುವ ನೀರು ದೊರೆಯುವಂತೆ ಮಾಡುವುದು ಇದರ ಉದ್ದೇಶವಾಗಿದೆ ಎಂದು ಹೇಳಿದರು. ಕಳೆದ ಬಾರಿ ಅಂಗನವಾಡಿಗಳ ಮೂಲಭೂತ ಸೌಕರ್ಯಗಳ ಕುರಿತು ಮಾಹಿತಿ ಸಂಗ್ರಹಿಸಿದ್ದೇನೆ. ಈಗಲೂ ಎಲ್ಲೆಲ್ಲಿ ವಿದ್ಯುತ್ ಸಮಸ್ಯೆ ಇದೆ ಎಂಬ ಮಾಹಿತಿ ನೀಡಿದರೆ ಅದನ್ನು ತಕ್ಷಣ ಸರಿಪಡಿಸುವ ಕ್ರಮ ಕೈಗೊಳ್ಳಲಾಗುವುದು ಎಂದರು. ನಮ್ಮ ಭಾಗದಲ್ಲಿ ಹೆಚ್ಚಿನ ಮಳೆಯ ಪರಿಣಾಮ ಕೆಲ ಅಂಗನವಾಡಿಗಳಿಗೆ ಹಾನಿಯಾಗಿರುವುದು ಗಮನಕ್ಕೆ ಬಂದಿದೆ. ಅವುಗಳನ್ನು ಕೂಡ ಹಂತ ಹಂತವಾಗಿ ಸರಿಪಡಿಸುವ ಕೆಲಸ ಮಾಡಲಾಗುವುದು ಎಂದು ತಿಳಿಸಿದರು. ಅಂಗನವಾಡಿಗೆ ಬರುವ ಮಕ್ಕಳಿಗೆ ಉತ್ತಮ ಶಿಕ್ಷಣ ಹಾಗೂ ಪೌಷ್ಟಿಕ ಆಹಾರ ಸಿಗಬೇಕು. ಅವರ ಆರೋಗ್ಯ ಮತ್ತು ದೈಹಿಕ ಬೆಳವಣಿಗೆ ದೃಷ್ಟಿಯಿಂದ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸಿಡಿಪಿಒ ಇಂದಿರ, ಸಿಐಟಿಯು ಸಂಘಟನೆಯ ಹೇಮಾ, ಸುಮಿತ್ರ, ಅಂಗನವಾಡಿ ಮೇಲ್ವಿಚಾರಕಿ ಜ್ಯೋತಿ, ಪುರಸಭಾ ಮಾಜಿ ಸದಸ್ಯೆ ವನಜಾಕ್ಷಿ ವಿವಿಧ ಸಂಘಟನೆಗಳ ಮುಖಂಡರು, ಸದಸ್ಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.