ನಾಗರಿಕರ ಸುರಕ್ಷತೆಗೆ ಅಗತ್ಯ ಕ್ರಮ: ಜಿಲ್ಲಾಧಿಕಾರಿ ದಿವ್ಯಪ್ರಭು

| Published : May 13 2025, 01:29 AM IST

ನಾಗರಿಕರ ಸುರಕ್ಷತೆಗೆ ಅಗತ್ಯ ಕ್ರಮ: ಜಿಲ್ಲಾಧಿಕಾರಿ ದಿವ್ಯಪ್ರಭು
Share this Article
  • FB
  • TW
  • Linkdin
  • Email

ಸಾರಾಂಶ

ಅಧಿಕಾರಿಗಳು ಜನನಿಬಿಡ ಪ್ರದೇಶಗಳು, ವಿಮಾನ ನಿಲ್ದಾಣ, ರೈಲು ನಿಲ್ದಾಣ, ಬಸ್‌ ನಿಲ್ದಾಣಗಳಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಜಿಲ್ಲೆಯ ಕೈಗಾರಿಕಾ ಪ್ರದೇಶಗಳಲ್ಲಿ ಕೈಗೊಂಡಿರುವ ಸುರಕ್ಷತಾ ಕ್ರಮಗಳನ್ನು ಖಾತರಿಸಿಕೊಳ್ಳಬೇಕು ಮತ್ತು ಅಗತ್ಯ ಭದ್ರತೆ ನೀಡಬೇಕು.

ಧಾರವಾಡ: ನಾಗರಿಕ ಸುರಕ್ಷತೆ, ಶಾಂತಿ, ಸುವ್ಯವಸ್ಥೆ ಕಾಪಾಡಲು ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಯಾವುದೇ ರೀತಿಯ ಭಯ, ಅನಗತ್ಯ ಬೆಲೆ ಹೆಚ್ಚಳ, ಕೃತಕ ಅಭಾವ ಸೃಷ್ಟಿ ಬಗ್ಗೆ ಇಲಾಖೆ ಅಧಿಕಾರಿಗಳು ಮುಂಜಾಗೃತೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.

ಅವರು ಇಲ್ಲಿನ ಜಿಪಂ ಸಭಾಂಗಣದಲ್ಲಿ ಸೋಮವಾರ ಜರುಗಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಯುದ್ಧ ಅಥವಾ ವಿದೇಶಿ ದಾಳಿ ಸಂದರ್ಭದಲ್ಲಿ ಜಿಲ್ಲೆಯ ನಾಗರಿಕರ ರಕ್ಷಣಾ ಕಾರ್ಯ ಚಟುವಟಿಕೆಗಳ ಕುರಿತು ಪರಾಮರ್ಶಿಸಿದರು.

ಅಧಿಕಾರಿಗಳು ಜನನಿಬಿಡ ಪ್ರದೇಶಗಳು, ವಿಮಾನ ನಿಲ್ದಾಣ, ರೈಲು ನಿಲ್ದಾಣ, ಬಸ್‌ ನಿಲ್ದಾಣಗಳಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಜಿಲ್ಲೆಯ ಕೈಗಾರಿಕಾ ಪ್ರದೇಶಗಳಲ್ಲಿ ಕೈಗೊಂಡಿರುವ ಸುರಕ್ಷತಾ ಕ್ರಮಗಳನ್ನು ಖಾತರಿಸಿಕೊಳ್ಳಬೇಕು ಮತ್ತು ಅಗತ್ಯ ಭದ್ರತೆ ನೀಡಬೇಕು ಎಂದರು.

ಆಹಾರ ಉತ್ಪನ್ನಗಳ ಬೆಲೆ ಹೆಚ್ಚಳ, ಕೃತಕ ಅಭಾವ ಸೃಷ್ಟಿ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಅನಗತ್ಯವಾಗಿ ಆಹಾರ ಉತ್ಪನ್ನಗಳ ಸಂಗ್ರಹವಾಗದಂತೆ, ಸಾರ್ವಜನಿಕರಲ್ಲಿ ಯಾವುದೇ ಗೊಂದಲಗಳು ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಸಾಮಾಜಿಕ ಮಾಧ್ಯಮಗಳಲ್ಲಿ ಭಯ, ಆತಂಕ, ಸುಳ್ಳು ಸುದ್ದಿ, ಕಮ್ಯುನಲ್ ಸಂದೇಶಗಳು ಹರಡದಂತೆ, ನಿಗಾ ವಹಿಸಬೇಕು. ಅಂತಹ ಸಂದೇಶಗಳು ಕಂಡುಬಂದಲ್ಲಿ ಪೊಲೀಸ್ ಇಲಾಖೆ ಅಗತ್ಯ ಕಾನೂನು ಕ್ರಮ ಜರುಗಿಸಿ, ಸಂದೇಶಗಳು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು. ಕಂದಾಯ, ಪೊಲೀಸ್, ಅಗ್ನಿಶಾಮಕ, ಹೆಸ್ಕಾಂ, ಸಾರಿಗೆ, ಗೃಹರಕ್ಷಕ ಸೇರಿದಂತೆ ಪ್ರಮುಖ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.

ಮಹಾನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಮಾತನಾಡಿ, ಮಹಾನಗರ ವ್ಯಾಪ್ತಿಯಲ್ಲಿ ನಾಗರಿಕರ ಹಾಗೂ ಪ್ರಮುಖ ಸ್ಥಳಗಳ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಮಹಾನಗರ ವ್ಯಾಪ್ತಿಯಲ್ಲಿ 15ಕ್ಕೂ ಹೆಚ್ಚು ಚೆಕ್ ಪೋಸ್ಟ್‌ಗಳನ್ನು ತೆರೆಯಲಾಗಿದೆ. ಶಸ್ತ್ರಸಜ್ಜಿತ ಸಿಬ್ಬಂದಿಗಳನ್ನು ಕಾವಲಿಗೆ ನೇಮಿಸಲಾಗಿದೆ. ಜಿಲ್ಲಾಡಳಿತದ ಸಹಯೋಗ ಮತ್ತು ಮಾರ್ಗದರ್ಶನದಲ್ಲಿ ಶಾಂತಿ, ಸುವ್ಯವಸ್ಥೆಗೆ ಅಗತ್ಯ ಕ್ರಮಕೈಗೊಳ್ಳಲಾಗಿದೆ. ಜತೆಗೆ 35 ಪೊಲೀಸ್ ಠಾಣೆಗಳಲ್ಲಿ ಸೋಶಿಯಲ್ ಮೀಡಿಯಾ ಮಾನೆಟರಿಂಗ್ ಸೆಲ್‌ಗಳನ್ನು ಸ್ಥಾಪಿಸಲಾಗಿದೆ ಎಂದರು.

ಪೊಲೀಸ್ ಅಧೀಕ್ಷಕ ಡಾ. ಗೋಪಾಲ್ ಎಂ. ಬ್ಯಾಕೋಡ ಮಾತನಾಡಿ, ಜಿಲ್ಲೆಯ ಅಂತರಗಡಿ ಸ್ಥಳಗಳು ಸೇರಿದಂತೆ ಜಿಲ್ಲೆಯ ಪ್ರಮುಖ ಸ್ಥಳಗಳಲ್ಲಿ 9 ಚೆಕ್ ಪೋಸ್ಟ್ ಸ್ಥಾಪಿಸಿ, ಶಸ್ತ್ರಸಜ್ಜಿತ ಅಧಿಕಾರಿ ಮತ್ತು ಸಿಬ್ಬಂದಿ ನೇಮಿಸಲಾಗಿದೆ. ಸಂಶಯಾಸ್ಪದ ವಾಹನಗಳ ತಪಾಸಣೆ ನಡೆದಿದೆ. ಜಿಲ್ಲೆಯ ಯಾವುದೇ ಭಾಗದಲ್ಲಿ ಸಾರ್ವಜನಿಕ ಶಾಂತಿ ಭಂಗವಾಗದಂತೆ, ಯಾವುದೇ ಅಪರಾಧ ಚಟುವಟಿಕೆಗಳು ಜರುಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ಈ ವೇಳೆ ಜಿಪಂ ಸಿಇಓ ಭುವನೇಶ ಪಾಟೀಲ, ಪೊಲೀಸ್ ಅಧಿಕಾರಿ ನಾರಾಯಣ್ ಬರಮನಿ, ಪಾಲಿಕೆ ಆಯುಕ್ತ ಡಾ. ರುದ್ರೇಶ್ ಘಾಳಿ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಸೇರಿದಂತೆ ಹಲವರಿದ್ದರು.