ರಾಜ್ಯೋತ್ಸವ ಅದ್ದೂರಿಯಾಗಿ ಆಚರಿಸಲು ಅಗತ್ಯ ಸಿದ್ಧತೆ: ಎಡಿಸಿ ರಾಜು

| Published : Oct 22 2025, 01:03 AM IST

ರಾಜ್ಯೋತ್ಸವ ಅದ್ದೂರಿಯಾಗಿ ಆಚರಿಸಲು ಅಗತ್ಯ ಸಿದ್ಧತೆ: ಎಡಿಸಿ ರಾಜು
Share this Article
  • FB
  • TW
  • Linkdin
  • Email

ಸಾರಾಂಶ

ಶುಕ್ರವಾರ ಮಂಗಳೂರಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯೋತ್ಸವದ ಪೂರ್ವಭಾವಿ ಸಭೆ ನೆರವೇರಿತು.

ಮಂಗಳೂರು: ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಸೂಚಿಸಿದರು.

ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯೋತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕನ್ನಡ ನಾಡು, ನುಡಿಯ ಬಗ್ಗೆ ಜಾಗೃತಿ ಮೂಡಿಸುವಲ್ಲಿ ರಾಜ್ಯೋತ್ಸವ ಕಾರ್ಯಕ್ರಮಗಳು ರೂಪಗೊಳ್ಳಬೇಕು. ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವು, ಜಿಲ್ಲೆಯಲ್ಲಿ ನಡೆದ ಕನ್ನಡ ಹೋರಾಟ, ನಾಡಿನ ಏಕೀಕರಣ ಚಳುವಳಿಗಳ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಇತಿಹಾಸ ತಿಳಿಸುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ಸಾಂಸ್ಕತಿಕವಾಗಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಶಾಲಾ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕತಿ ಇಲಾಖೆ ಸಂಯುಕ್ತವಾಗಿ ಸಾಂಸ್ಕತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಅವರು ತಿಳಿಸಿದರು.

ಪ್ರತಿ ವರ್ಷದಂತೆ ರಾಜ್ಯೋತ್ಸವವನ್ನು ನೆಹರು ಮೈದಾನದಲ್ಲಿ ಆಯೋಜಿಸಲಾಗುತ್ತದೆ. ಎಲ್ಲ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಪೊಲೀಸ್ ಪಡೆ, ಜಿಲ್ಲಾ ಮೀಸಲು ಪೊಲೀಸ್ ಪಡೆ, ಜಿಲ್ಲಾ ಗೃಹರಕ್ಷಕ ದಳ, ಅರಣ್ಯ ಇಲಾಖೆ, ಅಗ್ನಿಶಾಮಕ ದಳ, ಎನ್. ಸಿ. ಸಿ. ವಿದ್ಯಾರ್ಥಿಗಳು, ಭಾರತ ಸೇವಾದಳ ಮತ್ತು ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಕವಾಯತ್‍ನಲ್ಲಿ ಪಾಲ್ಗೊಂಡು ಉತ್ತಮ ರೀತಿಯಲ್ಲಿ ಪ್ರದರ್ಶನ ನೀಡುವಂತೆ ಅವರು ಹೇಳಿದರು.

ರಾಜ್ಯೋತ್ಸವದ ಮುನ್ನ ದಿನ ಪ್ರಮುಖ ಸರ್ಕಾರಿ ಕಟ್ಟಡಗಳನ್ನು ದೀಪಾಲಂಕಾರ ಮಾಡಬೇಕು. ಮಹಾನಗರಪಾಲಿಕೆ ವತಿಯಿಂದ ವೇದಿಕೆ ಹಾಗೂ ಇತರೆ ಸಿದ್ಧತೆಗಳನ್ನು ಏರ್ಪಡಿಸಲು ಹೆಚ್ಚುವರಿ ಜಿಲ್ಲಾಧಿಕಾರಿ ಹೇಳಿದರು. ಪೊಲೀಸ್‌ ಉಪ ಆಯುಕ್ತ ಉಮೇಶ್ ಪಿ., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.