ಸಾರಾಂಶ
ವಿಶೇಷ ಶಾಲೆಗಳ ಸಹಭಾಗಿತ್ವದಲ್ಲಿ ವಿಶ್ವ ಆರೈಕೆದಾರರ ದಿನಾಚರಣೆ ನಡೆಯಿತು. ಜಿ.ಪಂ. ಮುಖ್ಯ ಯೋಜನಾಧಿಕಾರಿ ಉದಯ್ಕುಮಾರ್ ಶೆಟ್ಟಿ ಉದ್ಘಾಟಿಸಿದರು.
ಕನ್ನಡಪ್ರಭ ವಾರ್ತೆ ಉಡುಪಿ
ವಿಕಲಚೇತನರನ್ನು ಪೋಷಿಸುತ್ತಿರುವ ಆರೈಕೆದಾರರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಹಲವು ಆತಂಕ ಮತ್ತು ಒತ್ತಡಗಳಿಗೆ ಒಳಗಾಗುತ್ತಿದ್ದಾರೆ. ಅವರಿಗೆ ಸಾಂತ್ವಾನ ಹೇಳುವುದು ಮತ್ತು ಆಪ್ತ ಸಹಾಯ ನೀಡುವುದು ಅತಿ ಮುಖ್ಯ. ಈ ಕಾರ್ಯಕ್ರಮವನ್ನು ಸರ್ಕಾರ ಮತ್ತು ಸಾಮಾಜಿಕ ಸಂಘಟನೆಗಳು ಮಾಡಬೇಕಾಗಿದೆ ಎಂದು ಡಾ.ಎ.ವಿ ಬಾಳಿಗಾ ಆಸ್ಪತ್ರೆಯ ಹಿರಿಯ ಮಾನಸಿಕ ತಜ್ಞ ಡಾ. ವಿರೂಪಾಕ್ಷ ದೇವರಮನೆ ಹೇಳಿದರು.ಅವರು ಉಡುಪಿ ಜಿಲ್ಲಾಡಳಿತ, ಭಾರತೀಯ ರೆಡ್ ಕ್ರಾಸ್, ಆಶಾ ನಿಲಯ ವಿಶೇಷ ಶಾಲೆಗಳ ಸಹಭಾಗಿತ್ವದಲ್ಲಿ ನಡೆದ ವಿಶ್ವ ಆರೈಕೆದಾರರ ದಿನಾಚರಣೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಆರೈಕೆದಾರರು ಇಂದು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ವಿವರಿಸಿದರು. ಅವರು ಸಂಘಟಿತರಾಗುವ ಅಗತ್ಯವಿದೆ ಎಂದರು.ಜಿ.ಪಂ. ಮುಖ್ಯ ಯೋಜನಾಧಿಕಾರಿ ಉದಯಕುಮಾರ್ ಶೆಟ್ಟಿ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲ ಸಿ.ಕೆ. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು.
ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಲ್ಯಾಣಾಧಿಕಾರಿ ರತ್ನಾ ಸುವರ್ಣ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು. ಆಶಾ ನಿಲಯದ ಮುಖ್ಯೋಪಾಧ್ಯಾಯಿನಿ ಶೈಲಾ ಅಮ್ಮನ್ನ ಮುಖ್ಯ ಅತಿಥಿಯಾಗಿ ಸಂದೇಶ ನೀಡಿದರು. ಜಿಲ್ಲಾ ವಿಕಲಚೇತನ ಪುನರ್ವಸತಿ ಕೇಂದ್ರದ ಸದಸ್ಯ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಯೋಜನಾಧಿಕಾರಿ ಶಿವಾಜಿ ವಂದಿಸಿದರು. ಉಡುಪಿ ಜಿಲ್ಲೆಯ ವಿವಿಧ ತಾಲೂಕುಗಳ ನೂರಾರು ಆರೈಕೆದಾರರು ಭಾಗವಹಿಸಿದ್ದರು.