ಸಾರಾಂಶ
ಕನ್ನಡಪ್ರಭ ವಾರ್ತೆ ಹಲಗೂರು
ಮಾರಕ ರೋಗಗಳು ಬರುವುದಕ್ಕೆ ಮುನ್ನವೇ ನಾವು ಜಾಗೃತರಾಗಿದ್ದರೆ ಅಂತಹ ರೋಗಗಳ ಅಪಾಯದಿಂದ ಪಾರಾಗಬಹುದು ಎಂದು ಹಲಗೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿ ಲಕ್ಷ್ಮಣ್ ಹಿರೇಕುಬರ್ ತಿಳಿಸಿದರು.ಇಲ್ಲಿಗೆ ಸಮೀಪದ ಮಾರಗೌಡನಹಳ್ಳಿ ಗ್ರಾಮದಲ್ಲಿರುವ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಡೆಂಘೀ ಜ್ವರದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.
ರಾತ್ರಿ ವೇಳೆ ಕಚ್ಚುವ ಸೊಳ್ಳೆಗಳಿಂದ ಮಲೇರಿಯಾದಂತಹ ರೋಗಗಳು ಬರುವ ಸಾಧ್ಯತೆಯಿದೆ. ಆದರೆ, ಹಗಲು ಹೊತ್ತಿನಲ್ಲಿ ಮಕ್ಕಳಿಗೆ ಹಾಗೂ ವೃದ್ಧರಿಗೆ ಕಚ್ಚುವ ಸೊಳ್ಳೆಗಳಿಂದ ಡೆಂಘೀ ಅಪಾಯವಿದೆ. ಅದಕ್ಕಾಗಿ ಮನೆಯ ಆವರಣಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಮಲಗುವಾಗ ಸೊಳ್ಳೆ ಪರದೆಗಳನ್ನು ಉಪಯೋಗಿಸುವುದು ಸೂಕ್ತ. ಸಾಮಾನ್ಯವಾಗಿ ಮಕ್ಕಳು ಈ ರೋಗಗಳಿಗೆ ತುತ್ತಾಗುವುದು ಹೆಚ್ಚು. ಮಕ್ಕಳ ಬಗ್ಗೆ ಜಾಗೃತಿ ವಹಿಸುವಂತೆ ತಿಳಿಸಿದರು.ಜ್ವರ, ಕೆಮ್ಮು ಬಂದರೆ ವೈದ್ಯಾಧಿಕಾರಿಗಳ ಬಳಿ ತೆರಳಿ ತಪಾಸಣೆ ಮಾಡಿಕೊಳ್ಳಬೇಕು. ಜ್ವರ ಬಂದರೆ ಹಾಗೂ ಮೂಗು, ಕಿವಿಯಲ್ಲಿ ರಕ್ತಸ್ರಾವವಾದರೆ, ತಲೆನೋವು, ಹೊಟ್ಟೆ ನೋವಿನಂತಹ ಲಕ್ಷಣಗಳಿದ್ದರೆ ರಕ್ತ ಪರೀಕ್ಷೆ ಮಾಡಿಸಿಕೊಂಡು ವೈದ್ಯರ ಬಳಿಗೆ ಹೋಗಬೇಕು ನಿರ್ಲಕ್ಷಿಸಿರೆ ಅಪಾಯವಾಗುತ್ತದೆ ಮಳೆಗಾಲದಲ್ಲೇ ಇಂತಹ ರೋಗಗಳು ಹೆಚ್ಚು ಬಾಧಿಸುತ್ತವೆ ಎಂದರು.
ಮುಖ್ಯ ಶಿಕ್ಷಕಿ ಶಕುಂತಲಾ ಮಾತನಾಡಿ, ಡೆಂಘೀ ಎಂಬ ಮಹಾ ರೋಗ ತುಂಬಾ ಅಪಾಯಕಾರಿಯಾಗಿದ್ದು ಮನೆಗಳಲ್ಲಿ ಮಳೆಯ ನೀರು, ಶುದ್ಧ ನೀರು ನಿಲ್ಲದಂತೆ ನೋಡಿಕೊಂಡು ಸೊಳ್ಳೆಗಳ ಸಂತಾನೋತ್ಪತ್ತಿಯಾಗದಂತೆ ತಡೆಯಬೇಕು ಎಂದರು.ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಶಿವಮಲ್ಲಯ್ಯ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಶಕುಂತಲಾ ಮತ್ತು ಶಿಕ್ಷಕವೃಂದ ಹಾಗೂ ಆಶಾ ಕಾರ್ಯಕರ್ತೆಯರಾದ ಸುನಿತಾ, ಶ್ವೇತಾ ಮತ್ತು ಇತರರು ಇದ್ದರು.ರೈತ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನ
ಮಂಡ್ಯ:ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು ನವೆಂಬರ್ ತಿಂಗಳಿನಲ್ಲಿ ಕೃಷಿ ಮೇಳವನ್ನು ಆಯೋಜಿಸಿದ್ದು, ಕೃಷಿಯಲ್ಲಿ ಸಾಧನೆ ಮಾಡಿದ ಜಿಲ್ಲಾ ಹಾಗೂ ತಾಲೂಕು ಮಟ್ಟದ ಆಸಕ್ತ ರೈತ ಹಾಗೂ ರೈತ ಮಹಿಳೆಯರಿಗೆ ವಿವಿಧ ಕೃಷಿ ಪ್ರಶಸ್ತಿಗಳನ್ನು ನೀಡಲು ರೈತ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಿದೆ.
ಆಸಕ್ತ ರೈತರು ರಾಜ್ಯ ಮಟ್ಟದ ಪ್ರಶಸ್ತಿಗಳಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ರಾಜ್ಯ ಮಟ್ಟದ ಅತ್ಯುತ್ತಮ ರೈತ/ ರೈತ ಮಹಿಳೆ ಪ್ರಶಸ್ತಿ, ಡಾ.ಎಂ.ಎಚ್.ಮರೀಗೌಡ ರಾಜ್ಯ ಮಟ್ಟದ ಅತ್ಯುತ್ತಮ ತೋಟಗಾರಿಕಾ ರೈತ/ ರೈತ ಮಹಿಳೆ ಪ್ರಶಸ್ತಿ, ಕೆನರಾ ಬ್ಯಾಂಕ್ ಪ್ರಾಯೋಜಿತ ಕ್ಯಾನ್ ಬ್ಯಾಂಕ್ ಅತ್ಯುತ್ತಮ ರೈತ/ ರೈತ ಮಹಿಳೆ ಪ್ರಶಸ್ತಿ, ಡಾ. ಆರ್.ದ್ವಾರಕೀನಾಥ್ ಅತ್ಯುತ್ತಮ ವಿಸ್ತರಣಾ ಕಾರ್ಯಕರ್ತ ಪ್ರಶಸ್ತಿ, ಡಾ. ಆರ್.ದ್ವಾರಕೀನಾಥ್ ಅತ್ಯುತ್ತಮ ರೈತ/ ರೈತ ಮಹಿಳೆ ಪ್ರಶಸ್ತಿಗಳಿಗೆ, ಜಿಲ್ಲಾ ಮಟ್ಟದ ಅತ್ಯುತ್ತಮ ರೈತ/ ರೈತ ಮಹಿಳೆ ಪ್ರಶಸ್ತಿ, ತಾಲೂಕು ಮಟ್ಟದ ಅತ್ಯುತ್ತಮ ಯುವ ರೈತ/ ಯುವ ರೈತ ಮಹಿಳೆ ಪ್ರಶಸ್ತಿಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.ಪ್ರಶಸ್ತಿಗಳನ್ನು ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು ನವೆಂಬರ್ ತಿಂಗಳಿನಲ್ಲಿ ಆಯೋಜಿಸಲಿರುವ ಕೃಷಿ ಮೇಳದಲ್ಲಿ ನೀಡಲಾಗುತ್ತದೆ. ಆಸಕ್ತ ರೈತರು ನಿಗದಿತ ಅರ್ಜಿ ನಮೂನೆಯು ಆಯಾ ಜಿಲ್ಲೆಗಳ ಜಂಟಿ ಕೃಷಿ ನಿರ್ದೇಶಕರವರ ಕಚೇರಿ, ವಿಸ್ತರಣಾ ನಿರ್ದೇಶಕರ ಕಛೇರಿ, ಜಿಕೆವಿಕೆ, ಬೆಂಗಳೂರು, ಕೃಷಿ ವಿಜ್ಞಾನ ಕೇಂದ್ರಗಳು ಹಾಗೂ ವಿಸ್ತರಣಾ ಶಿಕ್ಷಣ ಘಟಕದಲ್ಲಿ ಹಾಗೂ ಜಿಲ್ಲಾ ತೋಟಗಾರಿಕಾ, ರೇಷ್ಮೆ, ಮೀನುಗಾರಿಕೆ, ಅರಣ್ಯ, ಪಶು ಸಂಗೋಪನಾ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಕಚೇರಿಗಳಲ್ಲಿ ದೊರೆಯುತ್ತದೆ.
ಅರ್ಜಿ ನಮೂನೆಯು ವಿವಿಯ ವೆಬ್ಸೈಟ್ www.uasbangalore.edu.in ನಲ್ಲೂ ಲಭ್ಯವಿದೆ. ಅರ್ಜಿ ಸಲ್ಲಿಸಲು ಜುಲೈ 31 ಕೊನೆ ದಿನ. ಹೆಚ್ಚಿನ ಮಾಹಿತಿಗೆ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ವಿಸ್ತರಣಾ ನಿರ್ದೇಶಕರ ಕಚೇರಿ (ದೂ: 080-23330153) ಹಾಗೂ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥರು (ದೂ: 08232 277456) ರವರನ್ನು ಸಂಪರ್ಕಿಸಬಹುದು ಎಂದು ಮಂಡ್ಯ ವಿ.ಸಿ.ಫಾರ್ಮ್ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರು ತಿಳಿಸಿದ್ದಾರೆ.