ಬೇವು ಲೇಪಿತ ಯೂರಿಯಾ ಅಕ್ರಮ ಸಾಗಣೆ ಲಾರಿ ವಶ

| Published : May 05 2024, 02:01 AM IST

ಬೇವು ಲೇಪಿತ ಯೂರಿಯಾ ಅಕ್ರಮ ಸಾಗಣೆ ಲಾರಿ ವಶ
Share this Article
  • FB
  • TW
  • Linkdin
  • Email

ಸಾರಾಂಶ

ಬೇವು ಲೇಪಿತ ಯೂರಿಯಾ ರಸಗೊಬ್ಬರವನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಲಾರಿಯ ಮೇಲೆ ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತ ನಾಗರಾಜು ಸಿ. ಗಂಗನಗೌಡರ್, ಸಿಟಿಒ ನಾಗರಾಜು ಎಸ್., ಸಿಟಿಐ ಹರ್ಷಿತ ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.

ಕನ್ನಡಪ್ರಭ ವಾರ್ತೆ ತುಮಕೂರುಬೇವು ಲೇಪಿತ ಯೂರಿಯಾ ರಸಗೊಬ್ಬರವನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಲಾರಿಯ ಮೇಲೆ ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತ ನಾಗರಾಜು ಸಿ. ಗಂಗನಗೌಡರ್, ಸಿಟಿಒ ನಾಗರಾಜು ಎಸ್., ಸಿಟಿಐ ಹರ್ಷಿತ ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.ನಗರದ ಹೊರವಲಯದ ರಂಗಾಪುರ-ಅಂತರಸನಹಳ್ಳಿ ಸರ್ವೀಸ್ ರಸ್ತೆಯಲ್ಲಿ ಅಕ್ರಮವಾಗಿ ಬೇವು ಲೇಪಿತ ಯೂರಿಯಾವನ್ನು ಸಾಗಣೆ ಮಾಡುತ್ತಿದ್ದ ಲಾರಿಯ ಮೇಲೆ ವಾಣಿಜ್ಯ ತೆರಿಗೆ ಇಲಾಖೆಯ ಜಂಟಿ ಆಯುಕ್ತ ಟಿ.ಆರ್. ಕೃಷ್ಣಕುಮಾರ್ ನಿರ್ದೇಶದನ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿ ಲಾರಿ ದಾಖಲಾತಿ ಪರಿಶೀಲಿಸಿದ್ದಾರೆ. ಲಾರಿಯಲ್ಲಿ ಕ್ಯಾಲ್ಸಿಯಂ ಕಾರ್ಬೊನೇಟ್ ಮತ್ತು ಬೇವು ಲೇಪಿತ ಯೂರಿಯಾ ರಸಗೊಬ್ಬರವನ್ನು ಗಂಗಾವತಿಯಿಂದ ತುಂಬಿಕೊಂಡು ಸೇಲಂ, ತಮಿಳುನಾಡಿಗೆ ಅಕ್ರಮವಾಗಿ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಲಾರಿಯನ್ನು ವಶಕ್ಕೆ ಪಡೆದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ರಸಗೊಬ್ಬರ ಪರಿಶೀಲನೆಗಾಗಿ ಕೃಷಿ ಇಲಾಖೆ ಜಾರಿದಳದ ಸಹಾಯಕ ನಿರ್ದೇಶಕ ಪುಟ್ಟರಂಗಪ್ಪಗೆ ತಿಳಿಸಿದ್ದಾರೆ. ಆಗ ಕೃಷಿ ಇಲಾಖೆ ಅಧಿಕಾರಿಗಳು ರಸಗೊಬ್ಬರ ದಾಖಲಾತಿ ಪರಿಶೀಲಿಸಿ ಸರ್ಕಾರದ ಆದೇಶ ಉಲ್ಲಂಘನೆ ಮಾಡಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.ಕೃಷಿ ಬಳಕೆಗೆ ಮೀಸಲಾದ ಸರ್ಕಾರದ ಸಹಾಯ ಧನದ ಬೇವು ಲೇಪಿತ ಯೂರಿಯಾ ರಸಗೊಬ್ಬರವನ್ನು ಕೈಗಾರಿಕಾ ಉದ್ದೇಶಕ್ಕೆ ಅಂತಾರಾಜ್ಯ ಸಾಗಾಣಿಕೆ ನಿಷೇಧವಿದ್ದರೂ ಸಹ ಸಾಗಾಣಿಕೆ ಮಾಡುತ್ತಿರುವುದು ಕಂಡು ಬಂದಿದೆ. ಈ ಸಂಬಂಧ ಹೆಚ್ಚಿನ ತನಿಖೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತು ಕೃಷಿ ಇಲಾಖೆ ಜಾರಿದಳದ ಸಹಾಯಕ ನಿರ್ದೇಶಕ ಪುಟ್ಟರಂಗಪ್ಪ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.