ನೀಟ್ ಪರೀಕ್ಷೆಯಲ್ಲಿ ನಡೆಯಲಾದ ಅಕ್ರಮವನ್ನು ಖಂಡಿಸಿ ಸಂಸತ್ತಿನತ್ತ ಮೆರವಣಿಗೆ ಹೊರಟಿದ್ದ ವಿದ್ಯಾರ್ಥಿಗಳ ಮೇಲೆ ಸಂಸತ್ ಭವನದ ಬಳಿ ಭದ್ರತಾ ಪಡೆಗಳು ಅಶ್ರುವಾಯು ಮತ್ತು ಲಾಠಿಚಾರ್ಜ್ ಪ್ರಯೋಗಿಸುವಂತೆ ಪ್ರೇರೇಪಿಸಿದ ಕೇಂದ್ರ ಸರ್ಕಾರದ ನಡೆ ಖಂಡನೀಯ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಡುಪಿ: ನೀಟ್ ಪರೀಕ್ಷೆಯಲ್ಲಿ ನಡೆಯಲಾದ ಅಕ್ರಮವನ್ನು ಖಂಡಿಸಿ ಸಂಸತ್ತಿನತ್ತ ಮೆರವಣಿಗೆ ಹೊರಟಿದ್ದ ವಿದ್ಯಾರ್ಥಿಗಳ ಮೇಲೆ ಸಂಸತ್ ಭವನದ ಬಳಿ ಭದ್ರತಾ ಪಡೆಗಳು ಅಶ್ರುವಾಯು ಮತ್ತು ಲಾಠಿಚಾರ್ಜ್ ಪ್ರಯೋಗಿಸುವಂತೆ ಪ್ರೇರೇಪಿಸಿದ ಕೇಂದ್ರ ಸರ್ಕಾರದ ನಡೆ ಖಂಡನೀಯ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.ನೀಟ್ ಪರೀಕ್ಷೆಯ ಪ್ರಶ್ನಾಪತ್ರಿಕೆ ಸೋರಿಕೆಯಿಂದ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿರುವುದನ್ನು ಖಂಡಿಸಿ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಮಾಡಿದ ಕೇಂದ್ರ ಸರ್ಕಾರದ ನಡೆ ಕಳವಳಕಾರಿಯಾಗಿದೆ.

ನೀಟ್ ಪರೀಕ್ಷೆಯ ಪ್ರಶ್ನಾಪತ್ರಿಕೆ ಸೋರಿಕೆಯಾಗಿ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡಿದ್ದಲ್ಲದೆ ಹಲವಾರು ವಿದ್ಯಾರ್ಥಿಗಳು ಇದಕ್ಕಾಗಿ ತಮ್ಮ ಪ್ರಾಣವನ್ನೇ ಕಳೆದುಕೊಂಡರೂ ಕೇಂದ್ರದ ಶಿಕ್ಷಣ ಸಚಿವ ಇದೊಂದು ಸಣ್ಣ ವಿಚಾರ ಎನ್ನುವಂತೆ ವರ್ತಿಸುತ್ತಿದ್ದಾರೆ. ಅವರ ರಾಜೀನಾಮೆಯನ್ನು ಕೇಳಿದ ಮುಗ್ದ ವಿದ್ಯಾರ್ಥಿಗಳ ಮೇಲೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕುಮ್ಮಕ್ಕಿನಿಂದ ನಡೆದ ಲಾಠಿಚಾರ್ಚ್ ನಿಜಕ್ಕೂ ಬಿಜೆಪಿಗರಿಗೆ ವಿದ್ಯಾರ್ಥಿಗಳ ಭವಿಷ್ಯ ಮೇಲೆ ಇರುವ ಕಾಳಜಿ ಏನು ಎನ್ನುವುದು ತಿಳಿಯುವಂತಾಗಿದೆ. ಜಿಲ್ಲೆಯಲ್ಲಿ ಕೂಡ ಸಾವಿರಾರು ಮಂದಿ ವಿದ್ಯಾರ್ಥಿಗಳು ನೀಟ್ ಪರೀಕ್ಷೆಯ ಅಕ್ರಮದಿಂದ ನೊಂದಿದ್ದಾರೆ. ನಮ್ಮ ಸಂಸದರು ಸದಾ ಕಾಲ ಪ್ರತಿ ವಿಚಾರದಲ್ಲೂ ಮಾತನಾಡುವವರು ನೀಟ್ ಗೊಂದಲದ ಬಗ್ಗೆ ಮೌನವಾಗಿರುವುದರ ಉದ್ದೇಶವೇನು ಎಂದು ಪ್ರಶ್ನಿಸಿದ್ದಾರೆ.

ವಿದ್ಯಾರ್ಥಿಗಳ ನ್ಯಾಯಯುತ ಬೇಡಿಕೆಯನ್ನು ಮನ್ನಿಸಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ಪಡೆಯದೆ ಹೋದರೆ ಮುಂದಿನ ದಿನಗಳಲ್ಲಿ ವಿದ್ಯಾರ್ಥಿ ಸಮುದಾಯವೇ ಬಿಜೆಪಿ ಸರ್ಕಾರವನ್ನು ಕಿತ್ತೆಸೆಯುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.