ನೀಟ್ ಪರೀಕ್ಷೆ : ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ ಎನ್‌ಎಸ್‌ಯುಐ ಪ್ರತಿಭಟನೆ

| Published : Jun 23 2024, 02:01 AM IST

ನೀಟ್ ಪರೀಕ್ಷೆ : ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ ಎನ್‌ಎಸ್‌ಯುಐ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಚಿಕ್ಕಮಗಳೂರು, ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಶಂಕೆಯಿದೆ. ಹಾಗಾಗಿ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಆಗ್ರಹಿಸಿ ಎನ್ಎಸ್‌ಯುಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ನಗರದ ಹನುಮಂತಪ್ಪ ವೃತ್ತದಿಂದ ಎಸ್‌ಟಿಜೆ, ಟಿಎಂಎಸ್, ಎಂಇಎಸ್ಇತರೆ ಕಾಲೇಜು ವಿದ್ಯಾರ್ಥಿಗಳ ಮೆರವಣಿಗೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಶಂಕೆಯಿದೆ. ಹಾಗಾಗಿ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಆಗ್ರಹಿಸಿ ಎನ್ಎಸ್‌ಯುಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.ನಗರದ ಹನುಮಂತಪ್ಪ ವೃತ್ತದಿಂದ ಎಸ್‌ಟಿಜೆ, ಟಿಎಂಎಸ್, ಎಂಇಎಸ್ ಸೇರಿದಂತೆ ಇತರೆ ಕಾಲೇಜಿನ ವಿದ್ಯಾರ್ಥಿಗಳು ಎಂ.ಜಿ.ರಸ್ತೆ ಮುಖಾಂತರ ಮೆರವಣಿಗೆ ನಡೆಸಿ ಆಜಾದ್ ಪಾರ್ಕ್ ವೃತ್ತದಲ್ಲಿ ಸಮಾವೇಶಗೊಂಡು ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದರು.

ಜಿಲ್ಲಾ ಗ್ಯಾರಂಟಿ ಪ್ರಾಧಿಕಾರ ಸಮಿತಿ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ಮಾತನಾಡಿ, ನೀಟ್ ಪರೀಕ್ಷೆ ಫಲಿತಾಂಶ ವಿವಾದ ಗಳಿಂದ ಕೂಡಿದೆ. ಭಾರಿ ಅಕ್ರಮ ನಡೆದಿರುವ ಸಾಧ್ಯತೆಯಿದೆ. ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ವಿವಾದಾತ್ಮಕ ಫಲಿತಾಂಶದ ಕಾರಣಗಳಿಂದ ದೇಶದ ಲಕ್ಷಾಂತರ ವೈದ್ಯಕೀಯ ಸೀಟು ಆಕಾಂಕ್ಷಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಹೇಳಿದರು.

ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಲು ಕೇಂದ್ರ ಸರ್ಕಾರ ನೀಟ್ ಅಕ್ರಮದ ಬಗ್ಗೆ ತನಿಖೆ ನಡೆಸಬೇಕು ಎಂಬುದು ದೇಶಾದ್ಯಂತವಿರುವ ವಿದ್ಯಾರ್ಥಿಗಳ ಕೂಗಾಗಿದೆ. ನೀಟ್ ಫಲಿತಾಂಶ ವಿವಾದವಾಗಲು ಅನೇಕ ಅಂಶಗಳು ಕಾರಣವಾಗಿದೆ ಎಂದು ತಿಳಿಸಿದರು.ಎನ್‌ಎಸ್‌ಯುಐ ರಾಜ್ಯ ಕಾರ್ಯದರ್ಶಿ ಆದಿಲ್ ಮಾತನಾಡಿ 67 ವಿದ್ಯಾರ್ಥಿಗಳು ಮೊದಲ ರ್‍ಯಾಂಕ್ ಬಂದಿರುವುದು ಹಾಗೂ ಒಂದೇ ಪರೀಕ್ಷಾ ಕೇಂದ್ರದ 8 ವಿದ್ಯಾರ್ಥಿಗಳು ಪ್ರಥಮ ರ್‍ಯಾಂಕ್ ಪಡೆದಿರುವುದು ನೀಟ್ ಅಕ್ರಮ ನಡೆದಿರುವುದಕ್ಕೆ ಸಾಕ್ಷಿಯಾಗಿದೆ. ಅಲ್ಲದೇ ರ್‍ಯಾಂಕ್ ಗಳಿಸಿರುವ ವಿದ್ಯಾರ್ಥಿಗಳು ಒಂದೇ ತರಬೇತಿ ಕೇಂದ್ರವರಾಗಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ ಎಂದರು.ತರಾತುರಿ ಕೃಪಾಂಕ ನೀಡಿರುವುದು, ಲೋಕಸಭಾ ಚುನಾವಣಾ ಫಲಿತಾಂಶ ದಿನದಂದು ನೀಟ್ ಫಲಿತಾಂಶ ಪ್ರಕಟಿಸಿ ರುವುದು ಅನುಮಾನ ಹೆಚ್ಚಿಸಿದೆ. ನೀಟ್ ಪರೀಕ್ಷೆ ಫಲಿತಾಂಶ ದೇಶದ ಕೆಲವೆಡೆ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು ಯುವ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಳ್ಳುವ ನಿರ್ಧಾರ ಕೈಬಿಟ್ಟು ನ್ಯಾಯಯುತ ಹೋರಾಟಕ್ಕೆ ಮುಂದಾಗಬೇಕು ಎಂದರು.ಪ್ರತಿಭಟನೆ ನೇತೃತ್ವ ವಹಿಸಿದ್ದ ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಬಿ.ಟಿ.ಸುಮಂತ್ ಮಾತನಾಡಿ, ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದರಿಂದ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂಬುದು ಇಡೀ ದೇಶದ ವೈದ್ಯಕೀಯ ಸೀಟು ಆಕಾಂಕ್ಷಿಗಳು, ಪಾಲಕರು ಹಾಗೂ ಒಕ್ಕೂಟ ಆಗ್ರಹಿಸಿದೆ ಎಂದರು.ಪ್ರತಿಭಟನೆಯಲ್ಲಿ ಕೆಪಿಸಿಸಿ ವಕ್ತಾರ ಸುಧೀರ್‌ಕುಮಾರ್ ಮುರಳಿ, ಎನ್‌ಎಸ್‌ಯುಐ ಮಾಜಿ ಅಧ್ಯಕ್ಷರಾದ ಧೃವಕುಮಾರ್, ವೆಂಕಟೇಶ್, ಕಾರ್ಯದರ್ಶಿಗಳಾದ ಸುನೀಲ್, ವಿನಯ್, ಸಹ ಕಾರ್ಯದರ್ಶಿ ಯೋಗೀಶ್, ಸದಸ್ಯರಾದ ಚೇತನ್, ಪ್ರೀತಂಗೌಡ ಹಾಗೂ ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

21 ಕೆಸಿಕೆಎಂ 3ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದರಿಂದ ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು ಆಗ್ರಹಿಸಿ ಎನ್‌ಎಸ್‌ಯುಐ ನೇತೃತ್ವದಲ್ಲಿ ಶುಕ್ರವಾರ ಚಿಕ್ಕಮಗಳೂರಿನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.