ದೇಶದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಪರೀಕ್ಷಾ ವ್ಯವಸ್ಥೆಯ ವಿಶ್ವಾಸಾರ್ಹತೆ ಕುರಿತು ಆತಂಕ ಮತ್ತು ಅನಿಶ್ಚಿತತೆಯನ್ನು ಉಂಟು ಮಾಡಿದೆ. ವರ್ಷಪೂರ್ತಿ ಪರಿಶ್ರಮಪಟ್ಟು ತಯಾರಿ ನಡೆಸುವ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಅನ್ಯಾಯವಾಗಿದೆ.

ಹುಬ್ಬಳ್ಳಿ:

ವೈದ್ಯಕೀಯ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ನಡೆದ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯ (ನೀಟ್) ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಇಲ್ಲಿಯ ವಿದ್ಯಾನಗರ ಬಿವಿಬಿ ಕಾಲೇಜ್ ಎದುರಿಗೆ ಸಮಾವೇಶಗೊಂಡ ಪ್ರತಿಭಟನಾಕಾರರು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ನೀಟ್ ಯುಜಿ-2026 ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳ ಆರೋಪಗಳ ಕುರಿತು ಕೇಂದ್ರ ತನಿಖಾ ಸಂಸ್ಥೆಗಳ ಮೂಲಕ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿದರು.ದೇಶದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಪರೀಕ್ಷಾ ವ್ಯವಸ್ಥೆಯ ವಿಶ್ವಾಸಾರ್ಹತೆ ಕುರಿತು ಆತಂಕ ಮತ್ತು ಅನಿಶ್ಚಿತತೆಯನ್ನು ಉಂಟು ಮಾಡಿದೆ. ವರ್ಷಪೂರ್ತಿ ಪರಿಶ್ರಮಪಟ್ಟು ತಯಾರಿ ನಡೆಸುವ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಅನ್ಯಾಯವಾಗಿದೆ. ಹೀಗಾಗಿ ಪ್ರಕರಣದ ಕುರಿತು ಕೇಂದ್ರ ಸರ್ಕಾರವು ಕೇಂದ್ರ ತನಿಖಾ ಸಂಸ್ಥೆಗಳ ಮೂಲಕ ನ್ಯಾಯಸಮ್ಮತ, ನಿಷ್ಪಕ್ಷಪಾತ ಹಾಗೂ ನಿಗದಿತ ಅವಧಿಯೊಳಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜ್ಯ ಕಾರ್ಯದರ್ಶಿ ದರ್ಶನ ಹೆಗಡೆ ಮಾತನಾಡಿ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನೀಟ್ ಪರೀಕ್ಷೆ ನಡೆಸಲು ಸಂಪೂರ್ಣ ವಿಫಲವಾಗಿದೆ. 2024ರಲ್ಲಿ ಇದೇ ರೀತಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿತ್ತು. ಆಗಲೂ ಎಬಿವಿಪಿ ಹೋರಾಟ ಮಾಡಿ ತನಿಖೆಗೆ ಆಗ್ರಹಿಸಿತ್ತು ಎಂದು ತಿಳಿಸಿದರು. ನೀಟ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಸಾಕಷ್ಟು ಪರಿಶ್ರಮ ಹಾಕಿ ಓದಿರುತ್ತಾರೆ. ಈಗ ಪರೀಕ್ಷೆಯಲ್ಲಿ ಅಕ್ರಮ ನಡೆದರೆ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಲಿದೆ. ಇನ್ನೂ ಅವರ ಪಾಲಕರಲ್ಲಿ ಆತಂಕ ಮೂಡಿದೆ. ಪ್ರಶ್ನೆಪತ್ರಿಕೆ ಸೋರಿಕೆಗೆ ಕಾರಣಿಭೂತರಾದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ಎನ್‌ಟಿಎ ನಿರ್ದೇಶಕರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಧಾರವಾಡ ಜಿಲ್ಲಾ ಸಂಚಾಲಕ ಸಿದ್ಧಾರ್ಥ್ ಕೋರಿ, ನಗರ ಸಹ ಕಾರ್ಯದರ್ಶಿ ಮನೋಜ್ ವಾಲ್ಮೀಕಿ, ಲಕ್ಷ್ಮಣ್ , ಅನ್ಮೂಲ್, ಸುಜನ, ಲೋಕೇಶ್, ಇಶಿಕಾ ಇದ್ದರು.