ಸಾರಾಂಶ
- ಅಧಿಕಾರಿಗಳಿಗೆ ಕೆ.ಎಸ್.ಬಸವಂತಪ್ಪ ತರಾಟೆ । ಮಾಯಕೊಂಡ ಕ್ಷೇತ್ರ ವ್ಯಾಪ್ತಿ ದಿಂಡದಹಳ್ಳಿ ಘಟಕ
- - - ಕನ್ನಡಪ್ರಭ ವಾರ್ತೆ, ದಾವಣಗೆರೆಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ದಿಂಡದಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಿ ಮೂರು ತಿಂಗಳು ಕಳೆದಿದೆ. ಆದರೂ, ಗ್ರಾಮಸ್ಥರಿಗೆ ಹನಿ ನೀರೂ ಉಪಯೋಗಕ್ಕೆ ದಕ್ಕಿಲ್ಲ. ಈ ನಿರ್ಲಕ್ಷ್ಯ ಕಂಡು ಗುತ್ತಿಗೆದಾರರು ಮತ್ತು ಅಧಿಕಾರಿಗಳನ್ನು ಶಾಸಕ ಕೆ.ಎಸ್.ಬಸವಂತಪ್ಪ ತರಾಟೆಗೆ ತೆಗೆದುಕೊಂಡರು.
ದಿಂಡದಹಳ್ಳಿ ಗ್ರಾಮಕ್ಕೆ ಗುರುವಾರ ಶಾಸಕರು ಭೇಟಿ ನೀಡಿದರು. ಆಗ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಿ ಮೂರು ತಿಂಗಳು ಆಗಿವೆ. ಆದರೂ, ನಮಗೆ ಶುದ್ಧ ನೀರು ಸಿಗದೇ ರೋಗಗಳಿಗೆ ತುತ್ತಾಗಬೇಕಾಗಿದೆ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡರು.ಶಾಸಕರು ಸಂಬಂಧಪಟ್ಟ ಸಂಬಂಧಪಟ್ಟ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ, ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆಗೆ ಈಗಾಗಲೇ ಅನುದಾನ ಬಿಡುಗಡೆಯಾಗಿದೆ. ಆದರೂ ಗ್ರಾಮಸ್ಥರಿಗೆ ನೀರು ಪೂರೈಕೆ ಆಗಿಲ್ಲ. ಇದೇ ರೀತಿ ಕ್ಷೇತ್ರದ ವ್ಯಾಪ್ತಿಯಲ್ಲಿ ಇಂತಹ ಅನೇಕ ಘಟಕಗಳು ನಿರ್ವಹಣೆ ಇಲ್ಲದೇ ಸ್ಥಗಿತಗೊಂಡಿರುವ ಈ ಬಗ್ಗೆ ಜನರಿಂದ ದೂರುಗಳು ಬರುತ್ತಿವೆ. ಕೂಡಲೇ ಗ್ರಾಮೀಣರಿಗೆ ಶುದ್ಧ ಕುಡಿಯುವ ನೀರು ವಿತರಿಸಲು ತುರ್ತು ಕ್ರಮ ತೆಗೆದುಕೊಳ್ಳಬೇಕೆಂದು ತಾಕೀತು ಮಾಡಿದರು.
ಜಿಪಂ ಸಿಇಒ ಸುರೇಶ್ ಇಟ್ನಾಳ್ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಶಾಸಕರು, ಗ್ರಾಮೀಣರಿಗೆ ಶುದ್ಧ ಕುಡಿಯುವ ನೀರು ವಿತರಿಸಬೇಕೆಂದ ಉದ್ದೇಶದಿಂದ ಕ್ಷೇತ್ರದ ವ್ಯಾಪ್ತಿಯಲ್ಲಿ ಲಕ್ಷಾಂತರ ರು. ವೆಚ್ಚ ಮಾಡಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ. ಘಟಕಕ್ಕೆ ತಗಲುವ ಅನುದಾನವು ಬಿಡುಗಡೆಯಾಗಿದೆ. ಹೀಗಿದ್ದರೂ ನೀರಿನ ಘಟಕಗಳು ಸರಿಯಾಗಿ ನಿರ್ವಹಣೆ ಆಗುತ್ತಿಲ್ಲ. ಕೂಡಲೇ ತನಿಖೆ ನಡೆಸಿ, ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಆಗ ಜಿಪಂ ಸಿಇಒ ಅವರು ಈ ಬಗ್ಗೆ ತನಿಖೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳುವುದಾಗಿ ಉತ್ತರಿಸಿದರು.ಕರ್ನಾಟಕ ಪಬ್ಲಿಕ್ ಶಾಲೆಗೆ ಭೇಟಿ:
ಮಾಯಕೊಂಡ ಗ್ರಾಮಕ್ಕೆ ತೆರಳಿದ ಶಾಸಕ ಕೆ.ಎಸ್.ಬಸವಂತಪ್ಪ ಅವರು ಗ್ರಾಮದ ಕೆಪಿಎಸ್ ಶಾಲೆ ಹಾಗೂ ಪದವಿಪೂರ್ವ ಕಾಲೇಜಿನಲ್ಲಿ ಸಭೆ ನಡೆಸಿದರು. ಶಾಲಾ- ಕಾಲೇಜು ಅಭಿವೃದ್ಧಿ ಬಗ್ಗೆ ಎಸ್ಸೆಸ್ಸೆಲ್ಸಿ ಫಲಿತಾಂಶ ಕಡಿಮೆ ಬಂದಿರುವುದಕ್ಕೆ ಶಿಕ್ಷಕರನ್ನು ತರಾಟೆ ತೆಗೆದುಕೊಂಡರು. ಮುಂದಿನ ಬಾರಿಯಾದರೂ ಶಾಲೆಗೆ ಉತ್ತಮ ಫಲಿತಾಂಶ ತರಲು ಶಿಕ್ಷಕರು ಶ್ರಮಿಸಬೇಕು ಎಂದು ಸೂಚಿಸಿರು. ಬಳಿಕ ಶಾಲಾ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಿದರು.ವೇಳೆ ಪ್ರಾಂಶುಪಾಲ ಡಿ.ಬಸವರಾಜ್, ಉಪ ಪ್ರಾಂಶುಪಾಲರು, ಸಹ ಶಿಕ್ಷಕರು ಹಾಗೂ ಶಾಲಾ ಸಿಬ್ಬಂದಿ, ಮಾಯಕೊಂಡ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಟಿ. ಹನುಮಂತಪ್ಪ, ಮುಖಂಡರಾದ ಮೆಡಿಕಲ್ ರುದ್ರೇಶಣ್ಣ, ಜಗದೀಶ್ ಇದ್ದರು.
- - - -30ಕೆಡಿವಿಜಿ35, 36ಃ:ದಾವಣಗೆರೆ ತಾಲೂಕಿನ ದಿಂಡದಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಶಾಸಕ ಕೆ.ಎಸ್.ಬಸವಂತಪ್ಪ ಶುದ್ಧ ಕುಡಿಯುವ ನೀರಿನ ಘಟಕ ಪರಿಶೀಲನೆ ನಡೆಸಿದರು.