ಕನ್ನಡಪ್ರಭ ವಾರ್ತೆ ನವದೆಹಲಿ
ಸಚಿವ ಸಂಪುಟ ವಿಸ್ತರಣೆ ಕಸರತ್ತು ಬೆನ್ನಲ್ಲೇ ದೆಹಲಿಯಲ್ಲಿ ಬುಧವಾರ ಬೆಳಗಾವಿ ನಾಯಕರ ನಡುವಿನ ಜಗಳ ಪರಿಹರಿಸಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸಂಧಾನ ಸಭೆ ನಡೆಯಿತು.ಸಂಧಾನ ಸಭೆ ಯಶಸ್ವಿಯಾಗಿದ್ದು, ಬೆಳಗಾವಿ ಜಿಲ್ಲೆಯಿಂದ ಯಾರನ್ನು ಮಂತ್ರಿ ಮಾಡಿದರೂ ಓಕೆ ಎಂದು ಶಾಸಕರು ತಿಳಿಸಿದ್ದಾರೆ. ಡಿಕೆಶಿಯವರ ಸಂಪುಟ ಸೇರಲು ಬೆಳಗಾವಿ ಜಿಲ್ಲೆ ಶಾಸಕರಲ್ಲಿ ತೀವ್ರ ಪೈಪೋಟಿ ಕಂಡು ಬಂದಿದೆ. ಈ ಮಧ್ಯೆ, ಮೂಲ ಕಾಂಗ್ರೆಸ್ಸಿಗರನ್ನೇ ಸಚಿವ ಪದವಿಗೆ ಪರಿಗಣಿಸಬೇಕು ಎಂದು ಕೆಲ ಶಾಸಕರು ಆಗ್ರಹಿಸುತ್ತಿದ್ದಾರೆ. ಇದು ಸಿಎಂಗೆ ತಲೆಬಿಸಿ ಉಂಟು ಮಾಡಿದೆ.ಈ ಹಿನ್ನೆಲೆಯಲ್ಲಿ ದೆಹಲಿಯ ಕರ್ನಾಟಕ ಭವನದಲ್ಲಿ ಸಿಎಂ ನೇತೃತ್ವದಲ್ಲಿ ಸಂಧಾನ ಸಭೆ ನಡೆಯಿತು. ಶಾಸಕ ಲಕ್ಷ್ಮಣ ಸವದಿಯವರನ್ನು ತುರ್ತಾಗಿ ದೆಹಲಿಗೆ ಕರೆಸಿಕೊಂಡ ಸಿಎಂ, ಅವರ ಜೊತೆ ಮಾತುಕತೆ ನಡೆಸಿದರು. ಸಚಿವ ಸತೀಶ್ ಜಾರಕಿಹೊಳಿ, ಮಾಜಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕೂಡ ಈ ವೇಳೆ ಉಪಸ್ಥಿತರಿದ್ದರು. ಸುಮಾರು ಒಂದು ಗಂಟೆ ಕಾಲ ನಡೆದ ಸಂಧಾನ ಸಭೆ ಯಶಸ್ವಿಯಾಗಿದ್ದು, ಯಾರನ್ನು ಮಂತ್ರಿ ಮಾಡಿದರೂ ಓಕೆ ಎಂದು ಬೆಳಗಾವಿ ಶಾಸಕರು ತಿಳಿಸಿದ್ದಾರೆ.
