ನೇಪಾಳದಲ್ಲಿ ಭಾರಿ ಪ್ರವಾಹ ಉಂಟಾಗಿದ್ದು, ಹಲವಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ನೂರಾರು ಜನ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ಕನ್ನಡಪ್ರಭ ವಾರ್ತೆ ಕೋಲಾರ

ಆ.೨೬ರಂದು ನೇಪಾಳದಲ್ಲಿ ಸಂಭವಿಸಿದ ದಿಢೀರ್ ಪ್ರವಾಹ ಹಾಗೂ ಪ್ರಕೃತಿ ವಿಕೋಪದ ಹಿನ್ನೆಲೆಯಲ್ಲಿ, ಕೋಲಾರ ಮೂಲದ ಯಾವುದೇ ನಾಗರೀಕರು ಅಥವಾ ಪ್ರವಾಸಿಗರು ಅಲ್ಲಿಗೆ ತೆರಳಿ ಸಂಪರ್ಕಕ್ಕೆ ಸಿಗದೆ ಇದ್ದಲ್ಲಿ ತಕ್ಷಣವೇ ಮಾಹಿತಿಯನ್ನು ಒದಗಿಸುವಂತೆ ಕೋಲಾರ ಜಿಲ್ಲಾಡಳಿತವು ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ನೇಪಾಳದಲ್ಲಿ ಭಾರಿ ಪ್ರವಾಹ ಉಂಟಾಗಿದ್ದು, ಹಲವಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ನೂರಾರು ಜನ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲಾಧಿಕಾರಿಗಳು ಗುರುವಾರ (ಆ. ೨೭) ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಜಿಲ್ಲೆಯಿಂದ ನೇಪಾಳಕ್ಕೆ ತೆರಳಿರುವವರ ಕುರಿತು ಆತಂಕವಿದ್ದರೆ ಅಥವಾ ಅವರ ಸಂಪರ್ಕ ಸಾಧ್ಯವಾಗದಿದ್ದರೆ, ಕೂಡಲೇ ಕೋಲಾರ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ಅವರ ವಿವರಗಳನ್ನು ಒದಗಿಸುವಂತೆ ಸೂಚಿಸಿದ್ದಾರೆ.

ಸಾರ್ವಜನಿಕರ ಅನುಕೂಲಕ್ಕಾಗಿ ಹಾಗೂ ತುರ್ತು ನೆರವಿಗಾಗಿ ಈ ಕೆಳಗಿನ ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಲಾಗಿದೆ. ಕೋಲಾರ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರದ ದೂರವಾಣಿ ಸಂಖ್ಯೆ: ೦೮೧೫೨-೨೪೩೫೦೬. ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ ದೂರವಾಣಿ ಸಂಖ್ಯೆ: ೦೮೦-೨೨೨೫೩೭೦೭ ಹಾಗೂ ಟೋಲ್ ಫ್ರೀ ಸಂಖ್ಯೆ: ೧೦೭೦

ಭಾರತೀಯ ರಾಯಭಾರ ಕಚೇರಿಯ ತುರ್ತು ವಾಟ್ಸಾಪ್ ಹಾಗೂ ಕರೆ ಸಂಖ್ಯೆಗಳು: ೯೭೭ ೯೮೫೧೩೧೬೮೦೭, ೯೭೭ ೯೭೦೯೧೦೭೫೦೦, ೯೭೭ ೯೮೧೦೩೨೬೧೧೭.

ನೇಪಾಳದಲ್ಲಿರುವ ತಮ್ಮ ಕುಟುಂಬದವರು ಅಥವಾ ಪರಿಚಿತರು ಸಂಪರ್ಕಕ್ಕೆ ಸಿಗದೆ ಇದ್ದಲ್ಲಿ, ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗದೆ ಮೇಲಿನ ತುರ್ತು ಸಂಖ್ಯೆಗಳನ್ನು ಸಂಪರ್ಕಿಸಿ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ಎಂ.ಆರ್.ರವಿಕುಮಾರ್ ಕೋರಿದ್ದಾರೆ.