ಬಂಟ್ವಾಳ: ಅಮೃತ ಭಾರತ ಸ್ಟೇಶನ್ ಯೋಜನೆಯಡಿ 26.18 ಕೋಟಿ ರು, ವೆಚ್ಚದಲ್ಲಿ ನವೀಕರಿಸಲಾದ ಬಂಟ್ವಾಳ ರೈಲು ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಲೋಕಾರ್ಪಣೆ ಮಾಡಿದರು.

ಬಂಟ್ವಾಳ ರೈಲು ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಮಾತನಾಡಿ, ಕರಾವಳಿ ಭಾಗದ ರೈಲ್ವೆ ಅಭಿವೃದ್ಧಿಗೆ ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಗೆ ವಿಲೀನಗೊಳಿಸುವುದು ಅಗತ್ಯವಾಗಿದೆ ಎಂದು ಹೇಳಿದರು. ಜೊತೆಗೆ ಸುಬ್ರಹ್ಮಣ್ಯ-ಸಕಲೇಶಪುರ ನಡುವಿನ ಶಿರಾಡಿ ಘಾಟ್ ವ್ಯಾಪ್ತಿಯಲ್ಲಿ ಹೊಸ ರೈಲ್ವೆ ಮಾರ್ಗ ನಿರ್ಮಾಣಕ್ಕೂ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

ಪುತ್ತೂರು ರೈಲ್ವೆ ನಿಲ್ದಾಣವನ್ನೂ ಮುಂದಿನ ದಿನಗಳಲ್ಲಿ ಅಮೃತ ಭಾರತ ಯೋಜನೆಗೆ ಸೇರ್ಪಡೆಗೊಳಿಸುವ ಪ್ರಯತ್ನ ನಡೆಯಲಿದೆ. ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಸುಬ್ರಹ್ಮಣ್ಯ ರೈಲ್ವೆ ನಿಲ್ದಾಣ ಶೀಘ್ರದಲ್ಲೇ ಉದ್ಘಾಟನೆಗೊಳ್ಳಲಿದೆ ಎಂದು ಹೇಳಿದರು.

ಮಂಗಳೂರು-ಬೆಂಗಳೂರು ವಂದೇ ಭಾರತ್ ರೈಲು ಸಂಚಾರಕ್ಕೆ ಅಗತ್ಯ ಮೂಲಸೌಕರ್ಯ ಸಿದ್ಧವಾಗುತ್ತಿದ್ದು, ಮಾರ್ಗದ ವಿದ್ಯುದೀಕರಣ ಕಾಮಗಾರಿ ಅಂತಿಮ ಹಂತದಲ್ಲಿದೆ. ಮಂಗಳೂರು-ಸುಬ್ರಹ್ಮಣ್ಯ ನಡುವೆ ಈಗಾಗಲೇ ಸ್ಥಳೀಯ ರೈಲು ಯಶಸ್ವಿಯಾಗಿ ಸಂಚರಿಸುತ್ತಿದ್ದು, ಕೇವಲ 25 ರು. ದರದಲ್ಲಿ ಪ್ರಯಾಣಿಸಲು ಅವಕಾಶ ದೊರೆಯುತ್ತಿದೆ ಎಂದರು.

ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್, ಮಾಜಿ ಸಚಿವ ಬಿ. ನಾಗರಾಜ ಶೆಟ್ಟಿ, ಮಾಜಿ ಶಾಸಕ ಕೆ. ಪದ್ಮನಾಭ ಕೊಟ್ಟಾರಿ ಹಾಗೂ ಎ. ರುಕ್ಮಯ ಪೂಜಾರಿ, ರೈಲ್ವೆ ವಿಭಾಗೀಯ ವ್ಯವಸ್ಥಾಪಕ ಮುದಿತ್ ಮಿತ್ತಲ್, ಹಿರಿಯ ಅಭಿಯಂತರ ಗತಿ ಶಕ್ತಿ ಆನಂದ ಭಾರತಿ ಸೇರಿದಂತೆ ಹಲವು ಗಣ್ಯರು ಇದ್ದರು.


ಪದ್ಮಶ್ರೀ ಪುರಸ್ಕೃತರಾದ ಹರೇಕಳ ಹಾಜಬ್ಬ, ಮಹಾಲಿಂಗ ನಾಯ್ಕ್, ರೈಲ್ವೆ ಹೋರಾಟಗಾರರು, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಪ್ರಧಾನಿಯ ಭಾಷಣಕ್ಕೂ ಮುನ್ನ ಸ್ಥಳೀಯ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಚೆಂಡೆ ವಾದನ, ತಾಳಮದ್ದಲೆ, ಯಕ್ಷಗಾನ ನೃತ್ಯ ಸೇರಿದಂತೆ ವಿವಿಧ ಕಲಾಪ್ರದರ್ಶನಗಳು ಗಮನ ಸೆಳೆದವು. ರೈಲ್ವೆ ಸಿಬ್ಬಂದಿಯವರಿಂದಲೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಮಳೆಯ ಹಿನ್ನೆಲೆ ಪ್ಲಾಟ್‌ಫಾರ್ಮ್‌ನಲ್ಲೇ ಕಾರ್ಯಕ್ರಮ ಮಳೆಯ ಕಾರಣದಿಂದ ಹೊರಾಂಗಣದಲ್ಲಿ ಆಯೋಜಿಸಬೇಕಿದ್ದ ಕಾರ್ಯಕ್ರಮವನ್ನು ರೈಲು ನಿಲ್ದಾಣದ ಮೊದಲನೇ ಪ್ಲಾಟ್‌ಫಾರ್ಮ್‌ನಲ್ಲೇ ನಡೆಸಲಾಯಿತು. ಸಾರ್ವಜನಿಕರಿಗೆ ಪ್ರಧಾನಿ ಭಾಷಣ ವೀಕ್ಷಿಸಲು ಬೃಹತ್ ಎಲ್‌ಇಡಿ ಪರದೆ ವ್ಯವಸ್ಥೆ ಮಾಡಲಾಗಿತ್ತು.