ಸಾರಾಂಶ
ಕನ್ನಡಪ್ರಭ ವಾರ್ತೆ ಆಲೂರು
ತಾಲೂಕಿನ ಗಡಿಭಾಗ ಕ್ಯಾತನಹಳ್ಳಿ ಗ್ರಾಮಕ್ಕೆ ನೂತನವಾಗಿ ಕೆಎಸ್ಆರ್ಟಿಸಿ ಬಸ್ ಸಂಚಾರಕ್ಕೆ ಶಾಸಕ ಸಿಮೆಂಟ್ ಮಂಜು ಚಾಲನೆ ನೀಡಿದರು.ಆಲೂರು ತಾಲೂಕಿನ ಗಡಿ ಭಾಗದ ಗ್ರಾಮವಾದ ಗಂಜಿಗೆರೆ ಗ್ರಾಮ ಪಂಚಾಯಿತಿಗೆ ಸೇರಿದ ಕ್ಯಾತನಹಳ್ಳಿ ಕಾಲೋನಿ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಡನೆಗಳ ಉಪಟಳ ಹೆಚ್ಚಿದ್ದು ಈ ಭಾಗದ ಜನರು ಜೀವ ಭಯದಲ್ಲಿ ಓಡಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಶಾಸಕ ಸಿಮೆಂಟ್ ಮಂಜುರವರು ಮೂರ್ನಾಲ್ಕು ದಿನಗಳ ಹಿಂದೆ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಲು ಗ್ರಾಮಕ್ಕೆ ಬಂದ ಸಂದರ್ಭದಲ್ಲಿ ಕ್ಯಾತನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಈ ಭಾಗಕ್ಕೆ ಬಸ್ ಸೌಲಭ್ಯ ಕಲ್ಪಿಸಿಕೊಡುವಂತೆ ಮನವಿ ಮಾಡಿದ್ದರು.
ಜನಸಾಮಾನ್ಯರ ಮನವಿಗೆ ಸ್ಪಂದಿಸಿದ ಶಾಸಕ ಸಿಮೆಂಟ್ ಮಂಜು ಈ ಭಾಗಕ್ಕೆ ಬಸ್ ಸೌಲಭ್ಯ ಕಲ್ಪಿಸಿ ಕೊಡುವ ಭರವಸೆ ನೀಡಿದ್ದರು. ಕೊಟ್ಟ ಮಾತಿನಂತೆ ಹಾಸನದಿಂದ ಗಂಜಗೆರೆ ಗ್ರಾಮಕ್ಕೆ ಬರುತ್ತಿದ್ದ ಬಸ್ ಸೌಲಭ್ಯವನ್ನು ಕ್ಯಾತ್ನಳ್ಳಿ ಕಾಲೋನಿಯವರೆಗೆ ವಿಸ್ತರಿಸಿ ಈ ಭಾಗಕ್ಕೆ ಬಸ್ ಸೌಲಭ್ಯ ಕಲ್ಪಿಸಿದ್ದಾರೆ.ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸಿಮೆಂಟ್ ಮಂಜು ಕ್ಯಾತನಹಳ್ಳಿ ಗ್ರಾಮ ತಾಲೂಕಿನ ಗಡಿ ಗ್ರಾಮವಾಗಿದ್ದು, ಬಸ್ ಸೌಲಭ್ಯ ಸೇರಿದಂತೆ ಇದುವರೆಗೂ ಯಾವುದೇ ಮೂಲಭೂತ ಸೌಕರ್ಯಗಳು ಗ್ರಾಮಕ್ಕೆ ತಲುಪುವುದೇ ಕಷ್ಟವಾಗಿತ್ತು, ಈ ಭಾಗದಲ್ಲಿ ಕಾಡಾನೆಗಳ ಉಪಟಳ ಒಂದು ಕಡೆಯಾದರೆ ಮೂಲಭೂತ ಸೌಕರ್ಯಗಳ ಕೊರತೆ ಮತ್ತೊಂದೆಡೆ. ಇದರಿಂದಾಗಿ ಜನಸಾಮಾನ್ಯರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದರು. ನಾನು ಶಾಸಕನಾದ ನಂತರ ಈ ಭಾಗದ ಜನರ ಜೊತೆ ಒಡನಾಡಿಯಾಗಿದ್ದೇನೆ. ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಕ್ಯಾತ್ನಳ್ಳಿ ಗ್ರಾಮ ಹಾಗೂ ಸುತ್ತಮುತ್ತಲಿನ ಕಾಮಗಾರಿ ಗುದ್ದಲಿ ಪೂಜೆಗೆ ಬಂದ ಸಂದರ್ಭದಲ್ಲಿ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಬಸ್ ಸೌಲಭ್ಯದ ಬಗ್ಗೆ ಮನವಿ ಮಾಡಿದ್ದರು. ಹೀಗಾಗಿ ಸಂಬಂಧಪಟ್ಟ ಕೆಎಸ್ಆರ್ಟಿಸಿ ಅಧಿಕಾರಿಗಳ ಜೊತೆ ಮಾತನಾಡಿ, ಹಾಸನದಿಂದ ಕ್ಯಾತನಹಳ್ಳಿ ಕಾಲೋನಿ ಗ್ರಾಮದವರೆಗೂ ಅನುಕೂಲ ಮಾಡಿಕೊಡಲಾಗಿದೆ. ಇದರಿಂದ ಈ ಭಾಗದ ಜನರು, ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರಿಗೆ ತುಂಬಾ ಅನುಕೂಲವಾಗಲಿದೆ. ಜನಸಾಮಾನ್ಯರು ಇದರ ಉಪಯೋಗಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಇನ್ನೂ ಈ ಗ್ರಾಮಗಳಿಗೆ ಹೆಚ್ಚುವರಿ ಬಸ್ಸಿನ ಅವಶ್ಯಕತೆ ಇದ್ದರೆ ಹೆಚ್ಚುವರಿ ಬಸ್ ಸೌಲಭ್ಯ ಒದಗಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಗಂಜಿಗೆರೆ ಗ್ರಾಮ ಪಂಚಾಯತ್ ಪಿಡಿಒ ರುದ್ರೇಗೌಡ ಮುಖಂಡರಾದ ಉಮೇಶ್ ತಿಪ್ಪನಹಳ್ಳಿ, ಪ್ರಮೋದ ತಟ್ಟೆಕೆರೆ, ಪ್ರದೀಪ್(ಗುರು)ಸಿದ್ದಾಪುರ, ಶುಭ, ಆದರ್ಶ, ಪ್ರವೀಣ್ ಉಪಸ್ಥಿತರಿದ್ದರು.