ಕನ್ನಡಪ್ರಭ ವಾರ್ತೆ ಸಿರಿಗೆರೆ

ಭರಮಸಾಗರ ಹೋಬಳಿ ವ್ಯಾಪ್ತಿಯಲ್ಲಿ ಬರುವ ಕೋಗುಂಡೆಯಿಂದ ಚೌಲಿಹಳ್ಳಿ ಗ್ರಾಮದವರೆಗೆ ನೂತನ ಸಿಸಿ ರಸ್ತೆ ನಿರ್ಮಿಸಲು ಉದ್ದೇಶಿಸಲಾಗಿದ್ದು ಅದಕ್ಕಾಗಿ 1 ಕೋಟಿ ರು. ಖರ್ಚು ಮಾಡಲಾಗುತ್ತಿದೆ ಎಂದು ಶಾಸಕ ಡಾ.ಎಂ.ಚಂದ್ರಪ್ಪ ತಿಳಿಸಿದರು.

ಕೋಗುಂಡೆ ಗ್ರಾಮದಲ್ಲಿ 1 ಕೋಟಿ ರು. ವೆಚ್ಚದಲ್ಲಿ ಕೋಗುಂಡೆಯಿಂದ ಚೌಲಿಹಳ್ಳಿ ಗ್ರಾಮದವರೆಗೂ ನೂತನ ಸಿಸಿ ರಸ್ತೆ ಕಾಮಗಾರಿಗೆ ಗುರುವಾರ ಭೂಮಿಪೂಜೆ ನೆರವೇರಿಸಿ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದರು.

ಹಬ್ಬಹರಿದಿನಗಳಿದ್ದರೂ ನನಗೆ ರಜೆ ಇಲ್ಲ. ಕ್ಷೇತ್ರದ ಅಭಿವೃದ್ಧಿಯ ಕೆಲಸಗಳನ್ನಿಟ್ಟುಕೊಂಡು ಅವುಗಳನ್ನು ಮಾಡಲು ನಿತ್ಯವೂ ಸಂಚಾರ ಮಾಡುತ್ತೇನೆ. ಅಧಿಕಾರ ಶಾಶ್ವತವಲ್ಲ. ಇರುವಷ್ಟು ದಿನ ಹತ್ತಾರು ಜನಕ್ಕೆ ಉಪಯೋಗವಾಗುವ ರೀತಿಯಲ್ಲಿ ಹಗಲು-ರಾತ್ರಿ ಪ್ರಾಮಾಣಿಕವಾಗಿ ಶ್ರಮಿಸುವ ಉದ್ದೇಶ ನನಗೆ ಇದೆ ಎಂದರು.

ಪ್ರತಿ ಮನೆ ಮನೆಗೂ ಶುದ್ಧ ಕುಡಿಯುವ ನೀರು ಪೂರೈಸುವುದಕ್ಕಾಗಿ 300 ಕೋಟಿ ರು. ಖರ್ಚು ಮಾಡಿದ್ದೇನೆ. 660 ಕೋಟಿ ರು.ಗಳಲ್ಲಿ ಎಲ್ಲಾ ಕೆರೆಗಳಿಗೆ ನೀರು ತುಂಬಿಸಲಾಗುವುದು. ಅಜ್ಜಪ್ಪನಹಳ್ಳಿ ಬಳಿ 25 ಕೋಟಿ ರು. ವೆಚ್ಚದಲ್ಲಿ ವಿದ್ಯುತ್ ಪವರ್ ಸ್ಟೇಷನ್ ಕಟ್ಟಿಸುತ್ತಿದ್ದೇನೆ. ರೈತರ ತೋಟಗಳು ಒಣಗಬಾರದೆಂದು ವಿದ್ಯುತ್, ನೀರು ಸರಬರಾಜಿಗೆ ಮೊದಲ ಆದ್ಯತೆ ಕೊಡುತ್ತಿದ್ದೇನೆ. ಕೆಪಿಎಸ್ ಶಾಲೆ ಮಂಜೂರು ಮಾಡಿದ್ದು, ಎಲ್‌ಕೆಜಿಯಿಂದ ಪಿಯುಸಿವರೆಗೆ ಆಂಗ್ಲ ಮಾಧ್ಯಮದಲ್ಲಿ ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣ ನೀಡಲಾಗುವುದು. ಇದರಿಂದ ಮುಂದೆ ಎಂಜಿನಿಯರಿಂಗ್ ಹಾಗೂ ವೈದ್ಯಕೀಯ ಶಿಕ್ಷಣಕ್ಕೆ ಸೀಟು ಪಡೆಯಲು ಅನುಕೂಲವಾಗಲಿದೆ ಎಂದರು.13 ಕೋಟಿ ರು. ವೆಚ್ಚದಲ್ಲಿ ಗುಣಮಟ್ಟದ ಶಾಲಾ ಕಟ್ಟಡ ಕಟ್ಟಿಸುತ್ತೇನೆಂದು ಭರವಸೆ ನೀಡಿದರು. ಚುನಾವಣೆಯಲ್ಲಿ ಮತ ಹಾಕುವುದು ಒಂದು ಸೆಕೆಂಡಿನ ಕೆಲಸ. ಯಾರು ನಿಮ್ಮ ಊರಿಗೆ ಒಳ್ಳೆಯದು ಮಾಡುತ್ತಾರೆಂಬ ಆಲೋಚನೆಯಿಟ್ಟುಕೊಂಡು ಮತ ಚಲಾಯಿಸಿ.


ಚುನಾವಣೆ ಸಂದರ್ಭದಲ್ಲಿ ಬಂದು ಹೆಗಲ ಮೇಲೆ ಕೈ ಹಾಕಿ ಪಾಲಿಷ್ ಮಾತುಗಳನ್ನಾಡುವವರನ್ನು ನಂಬಬೇಡಿ. ಐದು ಸಾರಿ ನನ್ನನ್ನು ಗೆಲ್ಲಿಸಿದ್ದೀರ. ನಿಮ್ಮ ಋಣ ತೀರಿಸುವ ಕೆಲಸ ಮಾಡುತ್ತಿದ್ದೇನೆ. ತಾಲೂಕಿನ 493 ಹಳ್ಳಿ ಜನರು ನನ್ನವರೆಂದು ಭಾವಿಸಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ಇನ್ನೂ 50 ವರ್ಷಗಳ ಕಾಲ ಕುಡಿಯುವ ನೀರಿಗೆ ಸಮಸ್ಯೆಯಾಗುವುದಿಲ್ಲ. ಪೈಪ್‍ಲೈನ್ ಅಳವಡಿಕೆ ಕಾರ್ಯ ಈಗಾಗಲೆ ಪೂರ್ಣಗೊಂಡಿದೆ. ಮೂರ್ನಾಲ್ಕು ತಿಂಗಳುಗಳಲ್ಲಿ ನೀರು ಸರಬರಾಜಾಗಲಿದೆ ಎಂದರು.

ಈ ಸಂದರ್ಭದಲ್ಲಿ ಭರಮಸಾಗರ ಬಿಜೆಪಿ ಮಂಡಲ ಅಧ್ಯಕ್ಷ ಎನ್.ಟಿ.ಬಸವರಾಜ್, ಜಿಲ್ಲಾ ಉಪಾಧ್ಯಕ್ಷ ಶೈಲೇಶ್‍ಕುಮಾರ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ತಿಪ್ಪೇಸ್ವಾಮಿ, ಮಂಜುನಾಥ, ಕಲ್ಲೇಶ್, ವಿರುಪಾಕ್ಷಪ್ಪ, ಯೋಗೇಶ್ವರಪ್ಪ, ಬಸವರಾಜ್, ಮಲ್ಲೇಶ್, ಕೊಟ್ರೇಶ್, ತಿಪ್ಪೇಶ್, ಕೊಟ್ರಪ್ಪ, ರಾಜಣ್ಣ, ಅರುಣ್‍ಕುಮಾರ್ ಹಾಗೂ ಗ್ರಾಮದ ಮುಖಂಡರು ಹಾಜರಿದ್ದರು.