ಸಾರಾಂಶ
ಕುಶಾಲನಗರ ಸಮೀಪ ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಟ್ಟೆಹಾಡಿ ಸಮುದಾಯಭವನ ಬಳಿ ತೋಟದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ನವಜಾತ ಶಿಶು ಪತ್ತೆಯಾಗಿದೆ.
ಕನ್ನಡಪ್ರಭ ವಾರ್ತೆ ಕುಶಾಲನಗರ
ಕುಶಾಲನಗರ ಸಮೀಪದ ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಟ್ಟೆಹಾಡಿ ಸಮುದಾಯಭವನ ಬಳಿ ತೋಟದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ನವಜಾತ ಶಿಶು ಪತ್ತೆಯಾಗಿದೆ. ಜನಿಸಿದ ಕೆಲವೇ ಗಂಟೆಗಳ ಅವಧಿಯ ಹೆಣ್ಣು ಶಿಶುವನ್ನು ತೋಟದಲ್ಲಿ ಎಸೆದು ಹೋದ ಪ್ರಸಂಗ ನಡೆದಿದೆ.ಈ ವಿಷಯದ ಬಗ್ಗೆ ಸ್ಥಳೀಯರು ಕುಶಾಲನಗರ ಗ್ರಾಮಾಂತರ ಪೊಲೀಸರಿಗೆ, ಮತ್ತು ಆರೋಗ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದಾರೆ.
ಸ್ಧಳಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್, ತಾಲೂಕು ವೈದ್ಯಾಧಿಕಾರಿ ಇಂದೂಧರ್, ಕುಶಾಲನಗರ ಪೊಲೀಸ್ ವೃತ್ತಾಧಿಕಾರಿ ದಿನೇಶ್ ಕುಮಾರ್ , ಗ್ರಾಮಾಂತರ ಠಾಣಾಧಿಕಾರಿ ಸ್ವಾಮಿ ಅವರು ಸ್ಧಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮಹಜರ್ ಮಾಡಿ ನಂತರ ನವಜಾತ ಶಿಶುವನ್ನು ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಇಲಾಖೆಯ ನಿಯಮಾನುಸಾರ ದಾಖಲು ಮಾಡಿಲಾಗಿದೆ.ಈ ಪ್ರಕರಣ ಸಂಬಂಧಿಸಿದಂತೆ ಕುಶಾಲನಗರ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಪೋಲಿಸ್ ಇಲಾಖೆ ಮೂಲಕ ತನಿಖೆ ಕೈಗೊಳ್ಳಲಾಗುವುದು ಎಂದು ತಿಳಿದುಬಂದಿದೆ.
ಈ ಸಂದರ್ಭದಲ್ಲಿ ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ಸದಸ್ಯ ಆರ್.ಚಂದ್ರು, ನಂಜರಾಯಪಟ್ಟಣ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಪ್ರತಾಪ್ ಸಾಗರ್, ಜಿಲ್ಲಾ ಡಿ.ಎಸ್ .ಓ. ಡಾ. ಶ್ರೀನಿವಾಸ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಹೆಚ್.ಕೆ. ಶಾಂತಿ, ಪೊಲೀಸ್ ಪೇದೆಗಳಾದ ಕಾಂತಿ, ಸುನಿಲ್ ಕುಮಾರ್, ದಿನೇಶ್ , ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಇದ್ದರು.