ಸಾರಾಂಶ
ಕನ್ನಡಪ್ರಭ ವಾರ್ತೆ ಮದ್ದೂರು
ಜೆಡಿಎಸ್ ಡಿಜಿಟಲ್ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಜೂ.29ರಂದು ಚಾಲನೆ ನೀಡಲು ಪಕ್ಷದ ಯುವ ಮೋರ್ಚಾ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಲಿದ್ದಾರೆ ಎಂದು ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಿಖಿಲ್ ಆಗಮನದ ಹಿನ್ನೆಲೆಯಲ್ಲಿ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಮತ್ತು ಅಭಿಮಾನಿಗಳ ಪೂರ್ವಭಾವಿ ಸಭೆ ನಡೆಸಿ ಮಾತನಾಡಿ, ಜೂನ್ 29ರಂದು ಕ್ಷೇತ್ರಕ್ಕೆ ಆಗಮಿಸುವ ನಿಖಿಲ್ ಕುಮಾರಸ್ವಾಮಿ ಅವರಿಗೆ ನಿಡಘಟ್ಟದ ಬಳಿ ಕಾರ್ಯಕರ್ತರು ಅದ್ಧೂರಿ ಸ್ವಾಗತ ನೀಡಲಿದ್ದಾರೆ ಎಂದರು.
ನಂತರ ಮದ್ದೂರು ಪ್ರವಾಸಿ ಮಂದಿರದ ಬಳಿ ಅವರನ್ನು ತೆರೆದ ಜೀಪ್ನಲ್ಲಿ ಮದ್ದೂರು ಮಳವಳ್ಳಿ ರಸ್ತೆಯ ಮೂಲಕ ಭಾರತಿನಗರಕ್ಕೆ ಕರೆದೊಯ್ಯಲಾಗುವುದು. ಬಳಿಕ ನಿಖಿಲ್ ಅವರನ್ನು ಪ್ರವೇಶ ದ್ವಾರದಿಂದ ಭಾರತೀನಗರದ ಆಲಭುಜನಹಳ್ಳಿ ರಸ್ತೆಯ ಎಂ.ಎಂ.ಕನ್ವೆನ್ಷನ್ ಹಾಲ್ ವರೆಗೆ ಜಾನಪದ ಕಲಾ ತಂಡಗಳ ಮೆರವಣಿಗೆ ನಡೆಸಲಾಗುವುದು ಎಂದರು.ತರುವಾಯ ಕನ್ವೆನ್ಷನ್ ಹಾಲ್ನಲ್ಲಿ ಮದ್ದೂರು ಕ್ಷೇತ್ರದ ಜೆಡಿಎಸ್ ಡಿಜಿಟಲ್ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಪಕ್ಷದ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದರು.
ಈ ವೇಳೆ ಜೆಡಿಎಸ್ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಬಿಳಿಯಪ್ಪ, ತಾಲೂಕು ಘಟಕದ ಅಧ್ಯಕ್ಷ ಚಿಕ್ಕತಿಮ್ಮೇಗೌಡ, ಕಾರ್ಯಾಧ್ಯಕ್ಷ ಮಾದನಾಯಕನಹಳ್ಳಿ ರಾಜಣ್ಣ, ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ದಿವ್ಯ ರಾಮಚಂದ್ರ ಶೆಟ್ಟಿ, ಜಿಪಂಮಾಜಿ ಸದಸ್ಯ ಕೆ.ರವಿ, ಎಪಿಎಂಸಿ ಮಾಜಿ ಅಧ್ಯಕ್ಷ ಚನ್ನಸಂದ್ರ ರವಿ, ಪುರಸಭಾ ಸದಸ್ಯರಾದ ಎಂ.ಮಹೇಶ್, ಪ್ರಿಯಾಂಕ ಅಪ್ಪು ಗೌಡ, ಎಂ.ಐ.ಪ್ರವೀಣ್, ಮುಖಂಡರಾದ ಕೆ.ಟಿ.ರಾಜಣ್ಣ, ಕೆ.ಟಿ.ಶೇಖರ್, ಗುರುದೇವರಹಳ್ಳಿ ಅರವಿಂದ, ಎನ್.ಡಿ.ಸಂದೀಪ, ಪಕ್ಷದ ವಿವಿಧ ಘಟಕಗಳ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಇದ್ದರು.ಎಚ್ ಡಿಡಿ, ಎಚ್ಡಿಕೆಯಿಂದ ಜೆಡಿಎಸ್ ಪ್ರಾದೇಶಿಕ ಪಕ್ಷವಾಗಿ ಉಳಿದಿದೆ: ಡಿ.ಸಿ.ತಮ್ಮಣ್ಣ
ಮದ್ದೂರು:ಮಾಜಿ ಪ್ರಧಾನಿ ದೇವೇಗೌಡರು ಮತ್ತು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ಮೇಲೆ ರೈತರು, ಕಾರ್ಯಕರ್ತರು ಇಟ್ಟಿರುವ ವಿಶ್ವಾಸದಿಂದಲೇ ಜೆಡಿಎಸ್ ಪ್ರಾದೇಶಿಕ ಪಕ್ಷವಾಗಿ ಉಳಿದುಕೊಂಡಿದೆ ಎಂದು ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ನಡೆದ ಪಕ್ಷ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ರಾಮಕೃಷ್ಣ ಹೆಗಡೆ, ಆರ್.ಗುಂಡೂರಾವ್, ಬಂಗಾರಪ್ಪ, ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಅಧಿಕಾರಾವಧಿ ನಂತರ ಪ್ರಾದೇಶಿಕ ಪಕ್ಷವನ್ನು ಅಸ್ತಿತ್ವಕ್ಕೆ ತಂದರಾದರು ಪಕ್ಷವನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದರು.ಮಾಜಿ ಪ್ರಧಾನಿ ದೇವೇಗೌಡರು ಮತ್ತು ಎಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಅಭಿಮಾನಿಗಳ ಪರಿಶ್ರಮ, ನಿಷ್ಠೆ, ರೈತರ ನಂಬಿಕೆಯಿಂದಾಗಿ ಜೆಡಿಎಸ್ ಪ್ರಾದೇಶಿಕ ಪಕ್ಷವಾಗಿ ಇನ್ನು ಉಳಿದುಕೊಂಡಿದೆ ಎಂದರು.
ಕಾಂಗ್ರೆಸ್ ದುರಾಡಳಿತ, ಭ್ರಷ್ಟಾಚಾರದಿಂದ ಬೇಸತ್ತಿರುವ ರಾಜ್ಯದ ಜನರು ಮುಂದಿನ 2028ರ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿಸುವ ಮೂಲಕ ಅಭೂತಪೂರ್ವ ಬೆಂಬಲದೊಂದಿಗೆ ಪಕ್ಷವನ್ನು ಅಧಿಕಾರಕ್ಕೆ ತರಲಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.