ಸಾರಾಂಶ
ಚಿಗಳ್ಳಿ ಗ್ರಾಪಂ ಅಧ್ಯಕ್ಷೆ ಪುಷ್ಪಾ ಕಲ್ಮೇಶ ಗೋಸಾವಿ ವಿರುದ್ಧ ಶುಕ್ರವಾರ ಅವಿಶ್ವಾಸ ಗೊತ್ತುವಳಿ ಮಂಡನೆ ನಡೆಯಿತು.
ಮುಂಡಗೋಡ: ತಾಲೂಕಿನ ಚಿಗಳ್ಳಿ ಗ್ರಾಪಂ ಅಧ್ಯಕ್ಷೆ ಪುಷ್ಪಾ ಕಲ್ಮೇಶ ಗೋಸಾವಿ ವಿರುದ್ಧ ಶುಕ್ರವಾರ ಅವಿಶ್ವಾಸ ಗೊತ್ತುವಳಿ ಮಂಡನೆ ನಡೆಯಿತು.
ಮೇ ೨೩ರಂದು ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಿ ಚಿಗಳ್ಳಿ ಗ್ರಾಪಂನ ಬಹುತೇಕ ಸದಸ್ಯರು ಶಿರಸಿ ಉಪ ವಿಭಾಗಾಧಿಕಾರಿ ಕಾವ್ಯರಾಣಿ ಅವರಿಗೆ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಶುಕ್ರವಾರ ಉಪ ವಿಭಾಗಾಧಿಕಾರಿ ಕಾವ್ಯರಾಣಿ ಅವಿಶ್ವಾಸ ಮಂಡನಾ ಸಭೆ ಕರೆದಿದ್ದರು. ಈ ಸಂದರ್ಭದಲ್ಲಿ ೧೩ ಸದಸ್ಯರ ಪೈಕಿ ೧೦ ಜನ ಅವಿಶ್ವಾಸದ ಪರವಾಗಿ ಮತ ಚಲಾಯಿಸಿದ್ದರಿಂದ ಅವಿಶ್ವಾಸ ಮಂಡನೆ ಯಶಸ್ವಿಯಾಗಿದೆ. ಅಧ್ಯಕ್ಷರು ಗೈರು ಹಾಜರಾಗಿದ್ದರು.೩೦ ತಿಂಗಳ ಅವಧಿಯಲ್ಲಿ ೧೫ ತಿಂಗಳ ಬಳಿಕ ಬೇರೆಯವರಿಗೆ ಅಧ್ಯಕ್ಷ ಸ್ಥಾನ ಬಿಟ್ಟುಕೊಡುವ ಬಗ್ಗೆ ಒಪ್ಪಂದವಾಗಿತ್ತು ಎನ್ನಲಾಗಿದೆ. ಒಪ್ಪಂದದಂತೆ ಅಧಿಕಾರ ಬಿಟ್ಟು ಕೊಡದ ಕಾರಣಕ್ಕೆ ಅಸಮಾಧಾನಗೊಂಡ ಸದಸ್ಯರು ಅವಿಶ್ವಾಸ ಗೊತ್ತುವಳಿ ಮಂಡಿಸಿದ್ದಾರೆ ಎನ್ನಲಾಗಿದೆ.
ವಾರದೊಳಗೆ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ:ಗ್ರಾಪಂನ ಅಧಿಕಾರ ಅವಧಿ ಇನ್ನು ೭ ತಿಂಗಳು ೨೦ ದಿನ ಬಾಕಿ ಉಳಿದಿದೆ. ಒಂದು ವಾರದೊಳಗೆ ಅಧ್ಯಕ್ಷರ ಆಯ್ಕೆ ಚುನಾವಣಾ ಪ್ರಕ್ರಿಯೆ ನಡೆಸಲಾಗುವುದೆಂದು ವಿಭಾಗಾಧಿಕಾರಿ ಕಾವ್ಯರಾಣಿ ತಿಳಿಸಿದ್ದಾರೆ.
ಮುಂಡಗೋಡ ತಾಲೂಕಿನ ಚಿಗಳ್ಳಿಯಲ್ಲಿ ಅವಿಶ್ವಾಸ ಗೊತ್ತುವಳಿ ಮಂಡನೆ ಸಭೆ ನಡೆಯಿತು.