ಬೆಂಗಳೂರು ಟರ್ಫ್‌ ಕ್ಲಬ್‌ಗೆ (ಬಿಟಿಸಿ) ಕುದುರೆ ಪಂದ್ಯಗಳ ಆಯೋಜನೆಗೆ ಅನುಮತಿ ನೀಡಿ ಏಕಸದಸ್ಯ ಪೀಠ ನೀಡಿದ್ದ ಮಧ್ಯಂತರ ಆದೇಶಕ್ಕೆ ಹೈಕೋರ್ಟ್‌ ವಿಭಾಗೀಯ ಪೀಠ ತಡೆ ವಿಧಿಸಿ, ಕುದುರೆ ರೇಸ್‌ ಪಂದ್ಯಾವಳಿಗಳನ್ನು ಅಮಾನತು ಪಡಿಸಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಬೆಂಗಳೂರು ಟರ್ಫ್‌ ಕ್ಲಬ್‌ಗೆ (ಬಿಟಿಸಿ) ಕುದುರೆ ಪಂದ್ಯಗಳ ಆಯೋಜನೆಗೆ ಅನುಮತಿ ನೀಡಿ ಏಕಸದಸ್ಯ ಪೀಠ ನೀಡಿದ್ದ ಮಧ್ಯಂತರ ಆದೇಶಕ್ಕೆ ಹೈಕೋರ್ಟ್‌ ವಿಭಾಗೀಯ ಪೀಠ ತಡೆ ವಿಧಿಸಿ, ಕುದುರೆ ರೇಸ್‌ ಪಂದ್ಯಾವಳಿಗಳನ್ನು ಅಮಾನತು ಪಡಿಸಿದೆ.

ಏಕಸದಸ್ಯ ಪೀಠ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ಮುಖ್ಯ ನ್ಯಾಯಮೂರ್ತಿ ಎನ್‌. ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ. ಅರವಿಂದ್‌ ಅವರಿದ್ದ ವಿಭಾಗೀಯ ಪೀಠ ಶನಿವಾರ ಪ್ರಕಟಿಸಿತು.

ಕುದುರೆ ರೇಸ್‌ಗೆ ಬಿಟಿಸಿಗೆ ಪರವಾನಗಿ ನೀಡಲು ರಾಜ್ಯ ಸರ್ಕಾರ ನಿರಾಕರಿಸಿರುವ ಆದೇಶ ಸಕಾರಣದಿಂದ ಕೂಡಿದೆ. ಬಿಟಿಸಿಗೆ ರೇಸ್‌ ಆಯೋಜಿಸಲು ಪರವಾನಗಿ ನೀಡಲು ನಿರಾಕರಿಸಿರುವ ರಾಜ್ಯ ಸರ್ಕಾರದ ಆದೇಶಕ್ಕೆ ತಡೆ ನೀಡುವ ಮೂಲಕ ಏಕಸದಸ್ಯ ಪೀಠವು ತಪ್ಪಾಗಿ ತೀರ್ಮಾನಿಸಿದೆ. ಮೇಲ್ನೋಟಕ್ಕೆ ಪ್ರಕಟಣ ತಮ್ಮ ಪರವಾಗಿದೆ ಎಂದು ತೋರಿಸುವಲ್ಲಿ ರಾಜ್ಯ ಸರ್ಕಾರ ಸಫಲವಾಗಿದೆ. ಹೀಗಾಗಿ ಏಕಸದಸ್ಯ ಪೀಠದ ಆದೇಶವನ್ನು ಅಮಾನತು ಮಾಡಿದ್ದು, ಅದಕ್ಕೆ ತಡೆ ನೀಡಲಾಗಿದೆ ಎಂದು ನ್ಯಾಯಾಲಯ ಆದೇಶಿಸಿದೆ. ಅಂತಿಮ ವಿಚಾರಣೆಯು ಆಗಸ್ಟ್‌ 13ಕ್ಕೆ ನಿಗದಿಗೊಳಿಸಲಾಗಿದೆ ಎಂದು ವಿಭಾಗೀಯ ಪೀಠ ಆದೇಶಿಸಿದೆ.

ಅರ್ಜಿ ವಿಚಾರಣೆ ಬಾಕಿ ಇರುವ ಸಂದರ್ಭದಲ್ಲಿ ಬೆಂಗಳೂರು ಟರ್ಫ್ ಕ್ಲಬ್‌ ಆಫ್‌-ಕೋರ್ಸ್‌, ಆನ್‌ ಕೋರ್ಸ್‌ ರೇಸ್‌ ಪಂದ್ಯಾವಳಿ ಮತ್ತು ಬೆಟ್ಟಿಂಗ್‌ ನಡೆಸುವುದನ್ನು ನಿಷೇಧಿಸಲಾಗಿದೆ. ಇದು ಅರ್ಜಿಯ ಅಂತಿಮ ಆದೇಶಕ್ಕೆ ಒಳಪಟ್ಟಿದೆ. ಉಳಿದ ಅರ್ಜಿದಾರರ ಹಕ್ಕಿನ ವ್ಯಾಪ್ತಿಯ ವಿಚಾರವನ್ನು ಅಂತಿಮ ವಿಚಾರಣೆಯ ಸಂದರ್ಭದಲ್ಲಿ ನಿರ್ಧರಿಸಲು ಮುಕ್ತವಾಗಿರಿಸಲಾಗಿದೆ.