ಸಾರಾಂಶ
ಇಂದಿರಾ ಗಾಂಧಿ ಪ್ರಜಾಪ್ರಭುತ್ವ ಉಳಿವಿಗಾಗಿ ತುರ್ತು ಪರಿಸ್ಥಿತಿ ಘೋಷಿಸಿದರು. ಆದರೆ ಅದೇ ವೇಳೆ ಭೂ ಮಸೂದೆಯನ್ನೂ ಜಾರಿಗೆ ತಂದಿದ್ದಾರೆ ಎಂದು ರಮಾನಾಥ ರೈ ಹೇಳಿದರು.
ಕನ್ನಡಪ್ರಭ ವಾರ್ತೆ ಮಂಗಳೂರು
ದೇಶದಲ್ಲಿ ಪ್ರಧಾನಿಯಾಗಿದ್ದ ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಹೇರಿದ್ದರೂ ದ.ಕ.ಜಿಲ್ಲೆಯಲ್ಲಿ ಸಾಮಾನ್ಯರಿಗೆ ಯಾವುದೇ ತೊಂದರೆ ಆಗಿಲ್ಲ, ಆದರೆ ಬಿಜೆಪಿಗರು ತುರ್ತು ಪರಿಸ್ಥಿತಿ ವಿರುದ್ಧ ಕಾಂಗ್ರೆಸ್ ಮೇಲೆ ವೃಥಾ ಆರೋಪ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ.ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದಿರಾ ಗಾಂಧಿ ಪ್ರಜಾಪ್ರಭುತ್ವ ಉಳಿವಿಗಾಗಿ ತುರ್ತು ಪರಿಸ್ಥಿತಿ ಘೋಷಿಸಿದರು. ಆದರೆ ಅದೇ ವೇಳೆ ಭೂ ಮಸೂದೆಯನ್ನೂ ಜಾರಿಗೆ ತಂದಿದ್ದಾರೆ. ಬ್ಯಾಂಕ್ ಹಾಗೂ ಬಸ್ಗಳ ರಾಷ್ಟ್ರೀಕರಣ ಮಾಡಿದ್ದಾರೆ. ತುರ್ತು ಪರಿಸ್ಥಿಯಿಂದ ದ.ಕ.ಜಿಲ್ಲೆಯಲ್ಲಿ ಯಾರಿಗೂ ಏನೂ ಆಗಿಲ್ಲ ಎಂದು ಸಮರ್ಥಿಸಿಕೊಂಡರು.
ಕರ್ನಾಟಕ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ, ಮುಖಂಡರಾದ ಶಶಿಧರ ಹೆಗ್ಡೆ, ನವೀನ್ ಡಿಸೋಜಾ, ಅಪ್ಪಿ, ಚಿತ್ತರಂಜನ್ ಶೆಟ್ಟಿ, ಜಯಶೀಲ ಅಡ್ಯಂತಾಯ, ಸುರೇಂದ್ರ ಕಂಬಳಿ, ಚೇತನ್, ಯೋಗೀಶ್ ನಾಯ್ಕ್, ಬೇಬಿ ಕುಂದರ್, ನಿಯಾಸ್ ರಾಡ್ರಿಗಸ್, ನಿತ್ಯಾನಂದ ಶೆಟ್ಟಿ, ನಝೀರ್ ಬಜಾಲ್ ಇದ್ದರು.ಕುಮ್ಕಿ ಹಕ್ಕು ಲೀಸ್ ಬಗ್ಗೆ ತಪ್ಪಾಗಿ ಅರ್ಥೈಸಬೇಡಿ
ರಾಜ್ಯ ಸರ್ಕಾರ ಕುಮ್ತಿ ಹಕ್ಕಿನ ಜಮೀನನ್ನು ಲೀಸ್ಗೆ ನೀಡಲು ಆದೇಶ ಹೊರಡಿಸಿದೆ ಎಂದು ತಪ್ಪಾಗಿ ಅರ್ಥೈಸಲಾಗಿದೆ. ವಾಸ್ತವದಲ್ಲಿ ಕುಮ್ಕಿ ಜಾಗದಲ್ಲಿ ಕಾಫಿ, ಏಲಕ್ಕಿ, ಕಾಳುಮೆಣಸು ಮುಂತಾದ ಬೆಳೆಗಳನ್ನು ಬೆಳೆಸಿದವರು ಆ ಜಮೀನನ್ನು ಲೀಸ್ಗೆ ನೀಡುವ ಬಗ್ಗೆ ಸರ್ಕಾರ ಹೊರಡಿಸಿದ ಆದೇಶ ಎಂದು ನಾನು ಅರ್ಥೈಸಿದ್ದೇನೆ ಎಂದು ರಮಾನಾಥ ರೈ ಹೇಳಿದರು.