ಸಾರಾಂಶ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ
ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು ಕಲ್ಪಿಸದಿದ್ದರೇ ಹೋರಾಟಕ್ಕೆ ಇಳಿಯಲಾಗುವುದು ಎಂದು ಜಯ ಕರ್ನಾಟಕ ಸಂಘಟನೆಯ ತಾಲೂಕು ಮುಖಂಡ ರಹಿಮಾನಸಾಬ್ ಕನಕಾಲ್ ಎಚ್ಚರಿಕೆ ನೀಡಿದರು.ಪಟ್ಟಣದದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು ನೀಡುವ ನಿರ್ಧಾರದಿಂದ ಹಿಂದೆ ಸರಿದಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಅವರು, ಈ ವಿಚಾರದಲ್ಲಿ ಸರ್ಕಾರ ಬದ್ಧತೆ ತೋರದಿದ್ದರೇ ಹೋರಾಟಕ್ಕಿಳಿಯ ಬೇಕಾಗುತ್ತದೆ ಎಂದು ಎಚ್ಚರಿಸಿದರು.ಸಿ ಮತ್ತು ಡಿ ದರ್ಜೆಯ ಹುದ್ದೆಗಳಲ್ಲಿ ಕನ್ನಡಿಗರಿಗೆ ಶೇ.100ರಷ್ಟು ಮೀಸಲು ಕಲ್ಪಿಸುವ ವಿಧೇಯಕಕ್ಕೆ ಅನುಮೋದನೆ ನೀಡಿದ ಬಗ್ಗೆ ಮುಖ್ಯಮಂತ್ರಿಗಳು ಪ್ರಕಟಿಸಿದಾಗ ಕನ್ನಡಿಗರು ಸಂತಸಗೊಂಡಿದ್ದರು. ಆದರೆ, ಖಾಸಗಿಯವರಿಂದ ಆಕ್ಷೇಪ ವ್ಯಕ್ತವಾಗುತ್ತಲೇ ಈ ಸಚಿವ ಸಂಪುಟ ವಿರೋಧ ನಿರ್ಧಾರದಿಂದ ಹಿಂದೆ ಸರಿದಿರುವುದನ್ನು ಗಮನಿಸಿದಾಗ ಆಡಳಿತ ನಡೆಸುವವರು ಖಾಸಗಿಯವರ ಮರ್ಜಿಯಲ್ಲಿ ಇರುವಂತೆ ಕಾಣುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಮೀಸಲು ಕಲ್ಪಿಸುವ ಸಂಬಂಧ ವಿಧೇಯಕ ರೂಪಿಸಿ ಅದನ್ನು ಅನುಷ್ಠಾನಕ್ಕೆ ತರುವ ಬದಲು ಖಾಸಗಿ ಲಾಭಿಗೆ ಮಣಿದು ವಿಧೇಯಕವನ್ನೇ ತಡೆಹಿಡಿದಿರುವ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಕ್ರಮ ಖಂಡನೀಯ, ಸರ್ಕಾರದಿಂದ ಸಾಕಷ್ಟು ಅನುಕೂಲಗಳನ್ನು ಪಡೆದುಕೊಳ್ಳುವ ಖಾಸಗಿ ಕಂಪನಿಗಳು ಸ್ಥಳೀಯರಿಗೆ ಉದ್ಯೋಗ ಮೊದಲೇ ಬೇಕು ಎಂದು ಒತ್ತಾಯಿಸಿದರು.ಕೆಲವು ಖಾಸಗಿ ಕಂಪನಿಗಳ ಮಾಲೀಕರು ರಾಜ್ಯಕ್ಕೆ ಬಂದು 15 ರಿಂದ 20 ವರ್ಷ ಕಳೆದರೂ ಇನ್ನೂ ಕನ್ನಡ ಮಾತನಾಡುವುದನ್ನು ಕಲಿತಿಲ್ಲ. ಮೀಸಲಾತಿ ವಿಚಾರ ಬಂದಾಗ ಬೆದರಿಕೆ ಹಾಕುವುದು ಸರಿಯಲ್ಲ. ಎಲ್ಲಿಯಿಂದಾದರೂ ಬಂದು ಕಾರ್ಖಾನೆ ಸ್ಥಾಪಿಸಿ ಕನ್ನಡ ನಾಡಿನಲ್ಲಿ ಹೂಡಿಕೆ ಮಾಡಲಿ. ಆದರೆ, ಉದ್ಯೋಗ ನೀಡುವ ವಿಚಾರದಲ್ಲಿ ಕನ್ನಡಿಗರಿಗೆ ಪ್ರಥಮ ಆದ್ಯತೆ ನೀಡಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದರು.ಇದೇ ಸಂದರ್ಭದಲ್ಲಿ ಮುಖಂಡರುಗಳಾದ ಸುನೀಲ ಕನಮಡಿ, ಪ್ರವೀಣ್ ಪವಾರ, ನಾಗು ಕಮತಗಿ, ಸಾಹೇಬಗೌಡ ಉತ್ನಾಳ, ಹಸನ್ ಬಾಗವಾನ, ಪ್ರಭು ಬಾಗೇವಾಡಿ ಸೇರಿದಂತೆ ಹಲವಾರು ಜನ ಮುಖಂಡರು ಉಪಸ್ಥಿತರಿದ್ದರು.