ಸಾರಾಂಶ
ಗ್ರಾಪಂ ಸಭೆಯಲ್ಲಿ ಅಸಮಾಧಾನ
ಬಾಗೂರು: ಹೋಬಳಿಯ ಕಾರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಮಾಡಲು ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೆ.ಎ.ಸತೀಶ್ ಅಸಮಾಧಾನ ವ್ಯಕ್ತಪಡಿಸಿದರು.
ಬಾಗೂರು ಹೋಬಳಿಯ ಕಾರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಮಾಡಲು ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೆ.ಎ.ಸತೀಶ್ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮ ಪಂಚಾಯಿತಿ ಸಭೆಯಲ್ಲಿ ಮಾತನಾಡಿದರು.ಹೋಬಳಿಯಲ್ಲಿ ನಡೆದ ಗ್ರಾಮ ಪಂಚಾಯಿತಿ ಸಭೆಯಲ್ಲಿ ಮಾತನಾಡಿ, ‘ಕಳೆದ 2 ವರ್ಷಗಳ ಹಿಂದೆಯೇ ಗ್ರಾಮ ಪಂಚಾಯಿತಿ ವತಿಯಿಂದ ಸ್ವಚ್ಛ ಭಾರತ್ ಮಿಷನ್ ಯೋಜನೆ ಅಡಿಯಲ್ಲಿ ಸುಮಾರು 13 ಲಕ್ಷ ರು. ವೆಚ್ಚದಲ್ಲಿ ಕಸ ವಿಲೇವಾರಿ ಘಟಕ ನಿರ್ಮಾಣ ಮಾಡಲಾಗಿದೆ. ಇದರ ಜತೆಗೆ 3 ವರ್ಷಗಳ ಹಿಂದೆಯೇ ಸುಮಾರು 6 ಲಕ್ಷ ರು. ವೆಚ್ಚದಲ್ಲಿ ಕಸ ವಿಲೇವಾರಿ ಮಾಡಲು ಆಟೋವನ್ನು ಕೂಡ ತೆಗೆದುಕೊಳ್ಳಲಾಗಿದೆ. ಆದರೆ ಸಿಬ್ಬಂದಿ ಕೊರತೆಯಿಂದಾಗಿ ಪಂಚಾಯಿತಿ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಮಾಡಲು ಆಗುತ್ತಿಲ್ಲ. ಇದರಿಂದ ಸಾರ್ವಜನಿಕರು ಎಲ್ಲೆಂದರಲ್ಲಿ ಕಸವನ್ನು ಎಸೆಯುತ್ತಿದ್ದಾರೆ. ಇದರಿಂದ ಸಾಂಕ್ರಾಮಿಕ ಕಾಯಿಲೆ ಹರಡುವ ಭೀತಿ ಎದುರಾಗಿದೆ. ಕಳೆದ ಅನೇಕ ವರ್ಷಗಳಿಂದ ತಾಲೂಕು ಪಂಚಾಯಿತಿ ಕಾರ್ಯನಿರ್ವಣಾಧಿಕಾರಿ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದ್ದರೂ ಏನೂ ಪ್ರಯೋಜನವಾಗಿಲ್ಲ. ಆದರೆ ಕಳೆದ ಒಂದು ವಾರದ ಹಿಂದೆ ತಾಲೂಕು ಪಂಚಾಯಿತಿಯ ಸ್ವಚ್ಛ ಭಾರತ್ ಮಿಷನ್ ಯೋಜನೆಯ ಕೆಲವು ಅಧಿಕಾರಿಗಳು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ನೆಪ ಮಾತ್ರಕ್ಕೆ ಚರ್ಚೆ ನಡೆಸಿದ್ದಾರೆ. ಮಳೆಗಾಲ ಪ್ರಾರಂಭವಾಗುತ್ತಿದ್ದು ಮುಂಬರುವ ದಿನಗಳಲ್ಲಿ ಇನ್ನಷ್ಟು ಕಸದ ಸಮಸ್ಯೆ ತಲೆದೋರಲಿದೆ’ ಎಂದು ಕಳವಳ ವ್ಯಕ್ತಪಡಿಸಿದರು.
ಕಾರೇಹಳ್ಳಿ ಗ್ರಾಮ ಪಂಚಾಯತಿಯು ಜಿಲ್ಲೆ ಹಾಗೂ ತಾಲೂಕಿನ ಗಡಿಭಾಗದಲ್ಲಿದ್ದು ಗ್ರಾಮ ಪಂಚಾಯಿತಿ ಅಭಿವೃದ್ಧಿಯಲ್ಲಿ ಹಿಂದೆ ಉಳಿದಿದ್ದು ಮುಂಬರುವ ದಿನಗಳಲ್ಲಿ ಸರ್ಕಾರ ವಿಶೇಷ ಅನುದಾನ ನೀಡುವಂತೆ ಒತ್ತಾಯಿಸಿದರು.ಗ್ರಾಮ ಪಂಚಾಯಿತಿ ಸದಸ್ಯರಾದ ಚನ್ನೇನಹಳ್ಳಿ ಕುಮಾರ್, ಸುಜಾತ ನಾಗೇಂದ್ರ, ಕೃಷಿ ಪತ್ತಿನ ಅಧ್ಯಕ್ಷ ನಟೇಶ್, ದಯಾನಂದ್, ಸೇರಿ ಇತರರು ಹಾಜರಿದ್ದರು.