ಕನ್ನಡಪ್ರಭ ವಾರ್ತೆ ಸಕಲೇಶಪುರ

ತಾಲೂಕಿನ ಹೆಬ್ಬಸಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಬ್ಬಸಾಲೆ ಮುಖ್ಯರಸ್ತೆಯಿಂದ ಅಜ್ಜಿಗುಡ್ಡೆ ಗ್ರಾಮದವರೆಗೆ ₹1.30 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ರಸ್ತೆ ಕಾಮಗಾರಿಗೆ ಶಾಸಕ ಸಿಮೆಂಟ್ ಮಂಜು ಭೂಮಿಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಗುಣಮಟ್ಟದ ರಸ್ತೆ ನಿರ್ಮಾಣ ಅತ್ಯಗತ್ಯವಾಗಿದ್ದು, ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರ ವಿಶೇಷ ಆದ್ಯತೆ ನೀಡುತ್ತಿದೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇನೆ. ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಕೀಯಕ್ಕೆ ಅವಕಾಶವಿಲ್ಲ. ಜನರ ಹಿತವೇ ನನ್ನ ರಾಜಕೀಯ. ಜನರ ಅಗತ್ಯಗಳಿಗೆ ಸ್ಪಂದಿಸಿ, ಗುಣಮಟ್ಟದ ಮೂಲಸೌಕರ್ಯ ಕಲ್ಪಿಸುವುದು ನನ್ನ ಬದ್ಧತೆಯಾಗಿದೆ ಎಂದು

ಹೇಳಿದರು.

ಅಭಿವೃದ್ಧಿ ಕಾಮಗಾರಿಗಳು ಯಾವುದೇ ಪಕ್ಷ ಅಥವಾ ವ್ಯಕ್ತಿಗೆ ಸೀಮಿತವಾಗಿಲ್ಲ. ಕ್ಷೇತ್ರದ ಪ್ರತಿಯೊಬ್ಬ ನಾಗರಿಕರ ಹಿತದೃಷ್ಟಿಯಿಂದ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದ್ದು, ಮುಂದೆಯೂ ಜನರ ವಿಶ್ವಾಸಕ್ಕೆ ತಕ್ಕಂತೆ ಗುಣಮಟ್ಟದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.


ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಬ್ಲಾಕ್ ಮಾಜಿ ಅಧ್ಯಕ್ಷ ಎಚ್.ಬಿ. ಭಾಸ್ಕರ್, ಹೆಬ್ಬಸಾಲೆ, ಅಜ್ಜಿಗುಡ್ಡೆ ರಸ್ತೆ ನಿರ್ಮಾಣವು ಸ್ಥಳೀಯರ ಬಹುಕಾಲದ ಕನಸಾಗಿದ್ದು, ರಾಜ್ಯ ಸರ್ಕಾರದ ಅನುದಾನದಿಂದ ಕಾಮಗಾರಿಗೆ ಚಾಲನೆ ದೊರೆತಿರುವುದು ಸಂತಸದ ವಿಚಾರ ಎಂದು ಹೇಳಿದರು.

ಕ್ಷೇತ್ರದ ಅಭಿವೃದ್ಧಿಗೆ ರಾಜಕೀಯ ಮೀರಿದ ಸಹಕಾರ ಅಗತ್ಯ. ರಸ್ತೆ, ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯ ಕಾಮಗಾರಿಗಳಿಗೆ ಸರ್ಕಾರ ಅಗತ್ಯ ಅನುದಾನ ನೀಡುತ್ತಿದ್ದು, ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕು. ರಸ್ತೆ ಅಗಲೀಕರಣ ಅಗತ್ಯವಿರುವ ಸ್ಥಳಗಳಲ್ಲಿ ಗ್ರಾಮಸ್ಥರು ಸಹಕಾರ ನೀಡಿ ಜಾಗ ಬಿಟ್ಟುಕೊಟ್ಟರೆ ಉತ್ತಮ ಗುಣಮಟ್ಟದ ರಸ್ತೆ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಡಿ. ಸಿ ಸಣ್ಣಸ್ವಾಮಿ, ಹೆಬ್ಬಸಾಲೆ ಗ್ರಾಪಂ ಅಧ್ಯಕ್ಷ ಮಹೇಶ್ ಶೆಟ್ಟಿ, ಮುಖಂಡರಾದ ಡಾ.ಸುಧಾಕರ್, ಮೇಘರಾಜ್, ಕೌಶಿಕ್, ಶ್ರೀಜಿತ್, ಅಧಿತ್ಯ, ಪ್ರಭಾಕರ್ ಸೇರಿ ಸ್ಥಳೀಯ ಮುಖಂಡರು, ಬಿಜೆಪಿ ಹಾಗೂ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.