ಸಾರಾಂಶ
ನ್ಯಾಯಾಲಯವು ಟೆಂಡರ್ ಪರಿಶೀಲನಾ ಸ್ಥಾನದಲ್ಲಿ ಕುಳಿತು ಟೆಂಡರ್ ಪ್ರಕ್ರಿಯೆಯ ಪ್ರತಿಯೊಂದು ಹಂತದಲ್ಲೂ ಹಸ್ತಕ್ಷೇಪ ಮಾಡಲಾಗದು ಎಂದು ಹೈಕೋರ್ಟ್ ಹೇಳಿದೆ.
ಬೆಂಗಳೂರು : ನ್ಯಾಯಾಲಯವು ಟೆಂಡರ್ ಪರಿಶೀಲನಾ ಸ್ಥಾನದಲ್ಲಿ ಕುಳಿತು ಟೆಂಡರ್ ಪ್ರಕ್ರಿಯೆಯ ಪ್ರತಿಯೊಂದು ಹಂತದಲ್ಲೂ ಹಸ್ತಕ್ಷೇಪ ಮಾಡಲಾಗದು ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ರಾಸಾಯನಿಕ ಮತ್ತು ಸುಗಂಧ ದ್ರವ್ಯ ಪೂರೈಕೆಗೆ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆಎಸ್ಡಿಎಲ್) ಕರೆದಿದ್ದ ಗುತ್ತಿಗೆಯನ್ನು ಪ್ರಶ್ನಿಸಿ ಬೆಂಗಳೂರು ಮೂಲದ ಎಸ್ಪಿ ಎಂಟರ್ ಪ್ರೈಸಸ್ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದೆ.
ಟೆಂಡರ್ ಪ್ರಕ್ರಿಯೆಗೆ ತನ್ನನ್ನು ಆಹ್ವಾನಿಸಿಲ್ಲ ಎಂದು ಆಕ್ಷೇಪಿಸಿ ಎಸ್.ಪಿ. ಎಂಟರ್ ಪ್ರೈಸಸ್ ಸಲ್ಲಿಸಿದ್ದ ತಕರಾರು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ.
ಅರ್ಜಿದಾರರು ನ್ಯಾಯಾಲಯ ಟೆಂಡರ್ ಪ್ರಕ್ರಿಯೆ ಮೇಲೆ ನಿಗಾ ವಹಿಸುವಂತೆ ಕೋರಿದ್ದಾರೆ. ಆದರೆ ನ್ಯಾಯಾಲಯ ಟೆಂಡರ್ ಪರಿಶೀಲನಾ ಸಮಿತಿಯ ಸ್ಥಾನದಲ್ಲಿ ಕುಳಿತು ಪ್ರತಿಯೊಂದು ಹಂತದಲ್ಲೂ ಮೇಲ್ವಿಚಾರಣೆ ಅಥವಾ ನಿಗಾ ವಹಿಸಲು ಸಾಧ್ಯವಿಲ್ಲ. ಅರ್ಜಿದಾರರು ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು. ಆದರೆ, ತಾಂತ್ರಿಕ ಬಿಡ್ ಹಂತದಲೇ ಅವರ ಅರ್ಜಿ ತಿರಸ್ಕೃತಗೊಂಡಿದೆ. ನಂತರ ಯಶಸ್ವಿ ಬಿಡ್ಡರ್ಗೆ ಕಾರ್ಯಾದೇಶ ನೀಡಲಾಗಿದೆ. ಆದ್ದರಿಂದ ಈ ಹಂತದಲ್ಲಿ ಟೆಂಡರ್ ಪ್ರಕ್ರಿಯೆಯಲ್ಲಿ ಮಧ್ಯಪ್ರವೇಶ ಮಾಡಲಾಗದು. ಅರ್ಜಿದಾರರು ಅಗತ್ಯವಿದ್ದರೆ ಮೇಲ್ಮನವಿ ಪ್ರಾಧಿಕಾರದ ಮುಂದೆ ಮೇಲ್ಮನವಿ ಸಲ್ಲಿಸಬಹುದು ಎಂದು ಪೀಠ ಆದೇಶದಲ್ಲಿ ಹೇಳಿದೆ.