ಭದ್ರಾವತಿಯಲ್ಲಿ ಅರಣ್ಯ ಇಲಾಖೆ ವಿರುದ್ಧ ರಾಜಕೀಯ ಪಕ್ಷಗಳ ಪಕ್ಷಾತೀತ ಹೋರಾಟ

| Published : Feb 23 2025, 12:30 AM IST

ಭದ್ರಾವತಿಯಲ್ಲಿ ಅರಣ್ಯ ಇಲಾಖೆ ವಿರುದ್ಧ ರಾಜಕೀಯ ಪಕ್ಷಗಳ ಪಕ್ಷಾತೀತ ಹೋರಾಟ
Share this Article
  • FB
  • TW
  • Linkdin
  • Email

ಸಾರಾಂಶ

ತಾಲೂಕು ವ್ಯಾಪ್ತಿಯಲ್ಲಿ ಬರುವ ಅನೇಕ ಗ್ರಾಮಗಳಲ್ಲಿ ಅರಣ್ಯ ಇಲಾಖೆ ವತಿಯಿಂದ ನೋಟೀಸ್ ನೀಡಿ ಒಕ್ಕಲೆಬ್ಬಿಸುತ್ತಿರುವುದನ್ನು ಖಂಡಿಸಿ ರೈತರೊಂದಿಗೆ ವಿವಿಧ ರಾಜಕೀಯ ಪಕ್ಷಗಳು ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಮುಂಭಾಗ ಪಕ್ಷಾತೀತವಾಗಿ ಹೋರಾಟ ನಡೆಸುವ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡಿದವು.

ಪ್ರತಿಭಟನಾ ಮೆರವಣಿಗೆ । ರೈತರಿಗೆ ನೀಡಿರುವ ನೋಟಿಸ್ ತಕ್ಷಣ ಹಿಂಪಡೆಯಿರಿ । ಅರಣ್ಯ ಅಧಿಕಾರಿಗೆ ಮನವಿ

ಕನ್ನಡಪ್ರಭ ವಾರ್ತೆ ಭದ್ರಾವತಿ

ತಾಲೂಕು ವ್ಯಾಪ್ತಿಯಲ್ಲಿ ಬರುವ ಅನೇಕ ಗ್ರಾಮಗಳಲ್ಲಿ ಅರಣ್ಯ ಇಲಾಖೆ ವತಿಯಿಂದ ನೋಟೀಸ್ ನೀಡಿ ಒಕ್ಕಲೆಬ್ಬಿಸುತ್ತಿರುವುದನ್ನು ಖಂಡಿಸಿ ರೈತರೊಂದಿಗೆ ವಿವಿಧ ರಾಜಕೀಯ ಪಕ್ಷಗಳು ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಮುಂಭಾಗ ಪಕ್ಷಾತೀತವಾಗಿ ಹೋರಾಟ ನಡೆಸುವ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡಿದವು.

ತಾಲೂಕಿನ ರೈತರು ಕಳೆದ ಸುಮಾರು ೫೦-೬೦ ವರ್ಷಗಳಿಂದ ಸರ್ಕಾರದಿಂದ ಸಾಗುವಳಿ ಪತ್ರ ಪಡೆದು ಖಾತೆ, ಪಹಣಿ, ಮ್ಯುಟೇಷನ್ ಸೇರಿದಂತೆ ಎಲ್ಲಾ ದಾಖಲೆಗಳನ್ನು ಹೊಂದಿದ್ದು, ಬ್ಯಾಂಕ್‌ಗಳಿಂದ ಸಾಲ ಸಹ ಪಡೆದಿದ್ದು, ಸಾಕಷ್ಟು ಹಣ ಖರ್ಚು ಮಾಡಿ ಅಡಕೆ-ತೆಂಗು ಸೇರಿದಂತೆ ಪ್ರಮುಖ ವಾಣಿಜ್ಯ ಬೆಲೆಗಳ ತೋಟ ನಿರ್ಮಿಸಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ. ಇದೀಗ ಅರಣ್ಯ ಭೂಮಿ ಹೆಸರಿನಲ್ಲಿ ಜಾತ್ಯತೀತ ಜನತಾದಳ ಹಾಗೂ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಗರ್‌ಹುಕುಂ ಸಾಗುವಳಿ ಮತ್ತು ಶರಾವತಿ ಮುಳುಗಡೆ ರೈತರ ಹಿತರಕ್ಷಣಾ ಸಮಿತಿ ಹಾಗೂ ಶಿವಮೊಗ್ಗ ಗ್ರಾಮಾಂತರ ವ್ಯಾಪ್ತಿಯ ಕಾಂಗ್ರೆಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿವೆ.

ಈ ಮೂಲಕ ನಾವೆಲ್ಲರೂ ರೈತರ ಧ್ವನಿಯಾಗಿದ್ದು, ಪಕ್ಷಕ್ಕಿಂತ ರೈತರ ಹಿತ ಬಹಳ ಮುಖ್ಯವಾಗಿದೆ. ತಕ್ಷಣ ರೈತರಿಗೆ ನೀಡಿರುವ ನೋಟಿಸ್ ಹಿಂಪಡೆಯಬೇಕು. ರೈತರನ್ನು ಒಕ್ಕಲೆಬ್ಬಿಸುವುದನ್ನು ಬಿಡಬೇಕು. ರೈತರಿಗೆ ನ್ಯಾಯ ಒದಗಿಸಿಕೊಡುವ ಮೂಲಕ ಅವರ ಹಿತಕಾಪಾಡಬೇಕೆಂದು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಸರ್ಕಾರವನ್ನು ಆಗ್ರಹಿಸಿದರು.

ಇದಕ್ಕೂ ಮುನ್ನ ನಗರದ ರಂಗಪ್ಪ ವೃತ್ತದಿಂದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿವರೆಗೂ ರೈತರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶಿಶ್ ರೆಡ್ಡಿ ಅವರಿಗೆ ಮನವಿ ಸಲ್ಲಿಸಲಾಯಿತು.

ಶಾಸಕರಾದ ಶಾರದಾ ಪೂರ್‍ಯಾನಾಯ್ಕ, ಡಾ. ಧನಂಜಯ ಸರ್ಜಿ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದಾ ಅಪ್ಪಾಜಿ, ಪಕ್ಷದ ಪ್ರಮುಖರಾದ ಆರ್ ಕರುಣಾಮೂರ್ತಿ, ಟಿ. ಚಂದ್ರೇಗೌಡ, ಗೀತಾ ಸತೀಶ್, ಡಿ. ಆನಂದ್, ಎಂ.ಎ ಅಜಿತ್, ಧರ್ಮೆಗೌಡ, ಮಧುಸೂಧನ್, ಕುಮರಿ ಚಂದ್ರಣ್ಣ, ಗೊಂದಿ ಜಯರಾಮ್, ಗುಣಶೇಖರ್, ಪಾರ್ಥಿಬನ್, ಜಯರಾಮ್, ರಾಮಕೃಷ್ಣ, ಮಾಜಿ ಶಾಸಕರಾದ ಬಿಜೆಪಿ ಪಕ್ಷದ ಎಸ್. ರುದ್ರೇಗೌಡ, ಕೆ.ಬಿ ಅಶೋಕ್‌ನಾಯ್ಕ, ಮಂಗೋಟೆ ರುದ್ರೇಶ್, ತೀರ್ಥಯ್ಯ, ಸುಬ್ರಮಣಿ, ಕನಸಿನಕಟ್ಟೆ ಶ್ರೀನಿವಾಸ್, ಪಾಲಾಕ್ಷಪ್ಪ, ಮಾಜಿ ಶಾಸಕ ಕಾಂಗ್ರೆಸ್ ಪಕ್ಷದ ಆರ್. ಪ್ರಸನ್ನಕುಮಾರ್, ಶ್ರೀನಿವಾಸ್ ಕರಿಯಣ್ಣ, ಹನುಮಂತು, ಮಲ್ಲಯ್ಯ, ಕಟ್ಟಾ ಉಮೇಶ್, ರೈತ ವರಿಷ್ಠ ಎಚ್. ಆರ್ ಬಸವರಾಜಪ್ಪ, ಹೋರಾಟಗಾರ ತೀ.ನಾ. ಶ್ರೀನಿವಾಸ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಬಿ.ಕೆ. ಶಿವಕುಮಾರ್, ಬಿಜೆಪಿ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಮಲ್ಲೇಶ್‌ರಾವ್ ಪಾಲ್ಗೊಂಡಿದ್ದರು.