ಸಾರಾಂಶ
ಹೊಸಕೋಟೆ: ನಾನು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ ಮಾಡಲ್ಲ. ಈ ವಿಚಾರವಾಗಿ ಪಕ್ಷದ ಹೈ ಕಮಾಂಡ್ಗೂ ಸ್ಪಷ್ಟ ನೀಡಿದ್ದೇನೆ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ಸ್ಪಷ್ಟಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವಂತೆ ಹೈಕಮಾಂಡ್ ಜೊತೆಗೆ ನಮ್ಮ ಕಾರ್ಯಕರ್ತರು ಸಾಕಷ್ಟು ಒತ್ತಡ ಹಾಕಿದ್ದಾರೆ. ಆದರೆ ನಾನು ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಹೀಗಾಗಿ ಪಕ್ಷದಿಂದ ಗೆಲ್ಲುವ ಬೇರೆ ವ್ಯಕ್ತಿಗೆ ಟಿಕೆಟ್ ಕೊಟ್ಟು ಚುನಾವಣೆಗೆ ನಿಲ್ಲಿಸಲಿ. ಈ ಬಗ್ಗೆ ಪಕ್ಷದ ಹೈಕಮಾಂಡ್ ಈಗಾಗಲೇ ನಾನು ತಿಳಿಸಿದ್ದೇನೆ ಎಂದರು.
ಒಂದೆರಡು ದಿನದಲ್ಲಿ ಟಿಕೆಟ್:ಅಷ್ಟೇ ಅಲ್ಲದೆ ಕರ್ನಾಟಕದ ಎಲ್ಲಾ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನ ಪಕ್ಷದ ಹೈಕಮಾಂಢ್ ಆಯ್ಕೆ ಮಾಡಿ ಎರಡು ದಿನಗಳಲ್ಲಿ ಘೋಷಣೆ ಮಾಡಲಿದೆ. ಪ್ರಧಾನಿ ನರೇಂದ್ರ ಮೋದಿಯವರು ಈ ಬಾರಿ ಮತ್ತೊಮ್ಮೆ ಪ್ರಧಾನಿಯಾಗುವುದರ ಮೂಲಕ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುವುದು ನಿಶ್ಚಿತ. ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ದೇಶದ ಜನ ಸಕಾರಾತ್ಮಕ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಆದ್ದರಿಂದ ಎಷ್ಟೇ ಪಕ್ಷಗಳು ಒಗ್ಗೂಡಿದರೂ ಪ್ರಧಾನಿ ನರೇಂದ್ರ ಮೋದಿ ಅವರ ಓಟಕ್ಕೆ ಬ್ರೇಕ್ ಹಾಕಲು ಆಗಲ್ಲ. ದೇಶದಲ್ಲಿ ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಸ್ಥಾನಗಳಲ್ಲಿ ಬಿಜೆಪಿ ದೇಶದ ಅಧಿಕಾರ ಚುಕ್ಕಾಣಿ ಹಿಡಿಯಲಿದೆ ಎಂದರು.