ಜನಸ್ಪಂದನ ಸಭೆಯಲ್ಲಿ ಇಬ್ಬರು ಅಧಿಕಾರಿಗಳ ಅಮಾನತಿಗೆ ಸೂಚನೆ

| Published : Oct 06 2024, 01:17 AM IST

ಸಾರಾಂಶ

ಇಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ ಶಿವಾನಂದ ಪಾಟೀಲ ಅವರು ತಾಲೂಕು ಅಬಕಾರಿ ಇನ್‌ಸ್ಪೆಕ್ಟರ್‌ ಪ್ರಕಾಶ ಮಾಕಣ್ಣವರ, ಗುಡ್ಡದ ಚನ್ನಾಪುರ ಗ್ರಾಪಂ ಅಭಿವೃದ್ಧಿ ಅಧಿಕಾರಿ ಇಮ್ತಿಯಾಜ್ ಅಹ್ಮದ್‌ ಅವರನ್ನು ಅಮಾನತು ಮಾಡುವಂತೆ ಸೂಚನೆ ನೀಡಿದರು.

ಶಿಗ್ಗಾಂವಿ: ಇಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ ಶಿವಾನಂದ ಪಾಟೀಲ ಅವರು ತಾಲೂಕು ಅಬಕಾರಿ ಇನ್‌ಸ್ಪೆಕ್ಟರ್‌ ಪ್ರಕಾಶ ಮಾಕಣ್ಣವರ, ಗುಡ್ಡದ ಚನ್ನಾಪುರ ಗ್ರಾಪಂ ಅಭಿವೃದ್ಧಿ ಅಧಿಕಾರಿ ಇಮ್ತಿಯಾಜ್ ಅಹ್ಮದ್‌ ಅವರನ್ನು ಅಮಾನತು ಮಾಡುವಂತೆ ಸೂಚನೆ ನೀಡಿದರು.

ಸಾರ್ವಜನಿಕರಿಂದ ಅತಿ ಹೆಚ್ಚು ದೂರುಗಳ ಬಂದ ಹಿನ್ನೆಲೆಯಲ್ಲಿ ಬಂಕಾಪುರ ಪುರಸಭೆ ಮುಖ್ಯಾಧಿಕಾರಿ ಮೇಲಿನ ಆರೋಪಗಳ ಬಗ್ಗೆ ವರದಿ ಕೊಡಿ ಎಂದು ಸೂಚನೆ ನೀಡಿದ್ದಾರೆ. ಬಂಕಾಪುರ ಪುರಸಭೆ ಮುಖ್ಯಾಧಿಕಾರಿ ಶಿವಪ್ಪ ಅವರ ಮೇಲಿನ ಆರೋಪಗಳ ಬಗ್ಗೆ ವರದಿ ಕೊಡಿ ಎಂದು ಯೋಜನಾ ನಿರ್ದೇಶಕಿ ಮಮತಾ ಅವರಿಗೆ ಸೂಚಿಸಿದರು.ಕೆಲ ಅಧಿಕಾರಿಗಳ ಮೇಲೆ ಹೆಚ್ಚಿನ ದೂರುಗಳ ಕೇಳಿಬಂದ ಹಿನ್ನೆಲೆಯಲ್ಲಿ ಅವರ ಬಗ್ಗೆ ವರದಿ ಕೊಡಿ ಎಂದು ಮೇಲಧಿಕಾರಿಗಳಿಗೆ ಸೂಚನೆ ನೀಡಿದರು. ವರದಿ ನೈಜವಾಗಿಲ್ಲ ಎಂಬುದು ಕಂಡು ಬಂದರೆ ಹಿರಿಯ ಅಧಿಕಾರಿಗಳಿಂದ ಮತ್ತೆ ವರದಿ ಪಡೆಯಲಿದ್ದು, ನೈಜ ವರದಿ ನೀಡದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಇದನ್ನು ಗಮನದಲ್ಲಿಟ್ಟುಕೊಂಡು ವರದಿ ಕೊಡಿ ಎಂದು ಸೂಚನೆ ನೀಡಿದರು.ಅಂಗವಿಕಲರಿಗೆ ತ್ರಿಚಕ್ರ ವಾಹನ ವಿತರಣೆ, ಕೆಎಸ್‌ಆರ್‌ಟಿಸಿ ಬಸ್ ಸೌಕರ್ಯ ಸೇರಿದಂತೆ ಹಲವು ದೂರುಗಳಿಗೆ ಸ್ಥಳದಲ್ಲೇ ಆದೇಶ ಮಾಡಿದರು. ಅರ್ಹ ಅಂಗವಿಕಲರಿಗೆ ತಕ್ಷಣ ತ್ರಿಚಕ್ರ ವಾಹನ ವಿತರಿಸಿ. ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಬಸ್ ಸಂಚಾರಕ್ಕೆ ವ್ಯವಸ್ಥೆ ಮಾಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. ಪ್ರತಿಯೊಬ್ಬ ಸಾರ್ವಜನಿಕರ ಅರ್ಜಿ ಸ್ವೀಕರಿಸುವ ಸಂದರ್ಭದಲ್ಲಿ ಸಂಬಂಧಪಟ್ಟ ಅಧಿಕಾರಿಯಿಂದ ಮಾಹಿತಿ ಪಡೆದ ಸಚಿವರು, ನ್ಯಾಯಸಮ್ಮತವಾಗಿದ್ದು ಕಂಡು ಬಂದರೆ ತಕ್ಷಣ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು. ಕಾನೂನು ತೊಡಕು, ತಾಂತ್ರಿಕ ಸಮಸ್ಯೆ ನೆಪ ಹೇಳದೆ ಕೆಲಸ ಮಾಡಿ ಎಂದು ಕಿವಿಮಾತು ಹೇಳಿದರು.ಮುದ್ದಿನಕೊಪ್ಪ ಗ್ರಾಪಂ ವ್ಯಾಪ್ತಿಯಲ್ಲಿ ೧೨೪ ಎಕರೆ ಸರ್ಕಾರಿ ಭೂಮಿ ಒತ್ತುವರಿಯಾಗಿದ್ದರೂ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ ಎಂಬ ದೂರಿನ ಬಗ್ಗೆ ಮಾಹಿತಿ ಪಡೆದ ಸಚಿವರು, ಜಿಪಂ ಸಿಇಒ ಅಕ್ಷಯ್ ಶ್ರೀಧರ್ ಅವರ ನೇತೃತ್ವದಲ್ಲಿ ಕಂದಾಯ ಇಲಾಖೆ ಮತ್ತು ಭೂಮಾಪನಾ ಇಲಾಖೆ ಅಧಿಕಾರಿಗಳು ಜಂಟಿ ಸರ್ವೇ ಮಾಡಿ ಎಂದು ಆದೇಶ ನೀಡಿದರು. ಒತ್ತುವರಿ ಆರೋಪ ನಿಜ ಎಂಬುದು ಕಂಡು ಬಂದರೆ ಸರ್ಕಾರದ ಭೂಮಿಯನ್ನು ವಶಪಡಿಸಿಕೊಳ್ಳಿ ಎಂದು ಸೂಚಿಸಿದರು.ಜಲಜೀವನ್ ಮಿಷನ್ ಯೋಜನೆ ಅನುಷ್ಠಾನದಲ್ಲಿ ಗುತ್ತಿಗೆದಾರರ ಲೋಪ ಕಂಡು ಬಂದರೆ ಕಪ್ಪುಪಟ್ಟಿಗೆ ಸೇರಿಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಹೇಳಿದರು.೩೫೦ ಕೋಟಿ ರು. ವೆಚ್ಚದ ಶಿಗ್ಗಾವಿ ಏತ ನೀರಾವರಿ ಯೋಜನೆ ಅನುಷ್ಠಾನಕ್ಕೆ ಬಂದಿದ್ದರೂ ಉದ್ದೇಶ ಸಫಲವಾಗಿಲ್ಲ. ಬಹುತೇಕ ಕೆರೆಗಳಿಗೆ ನೀರು ಬಂದಿಲ್ಲ ಎಂದು ರೈತ ಸಂಘದ ಮುಖಂಡರು ಸಚಿವರ ಗಮನ ಸೆಳೆದರು. ಯಾವ ಯಾವ ಕೆರೆಗಳಿಗೆ ನೀರು ಹರಿದಿಲ್ಲ ಎಂಬ ಬಗ್ಗೆ ವರದಿ ಕೊಡಿ ಎಂದು ಜಲಸಂಪನ್ಮೂಲ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರವಿ ಅರಸೀಕರೆ ಅವರಿಗೆ ಸೂಚಿಸಿದರು.ಜಿಲ್ಲೆಯಲ್ಲಿರುವ ಎರಡು ಸಕ್ಕರೆ ಕಾರ್ಖಾನೆಗಳಲ್ಲಿ ಸಕ್ಕರೆ ಇಳುವರಿ ಪ್ರಮಾಣ ಕಡಿಮೆ ತೋರಿಸುತ್ತಿದ್ದು, ರೈತರು ಪೂರೈಕೆ ಮಾಡಿದ ಕಬ್ಬಿಗೆ ಕಡಿಮೆ ದರ ಕೊಡುತ್ತಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಅತಿ ಹೆಚ್ಚು ಬೆಲೆ ಸಿಗುತ್ತಿದೆ. ಹಾವೇರಿ ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಅನ್ಯಾಯವಾಗುತ್ತಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ರೈತ ಸಂಘದ ಮುಖಂಡರು ಮನವಿ ಮಾಡಿದರು. ಈ ಬಗ್ಗೆ ಪರಿಶೀಲನೆ ನಡೆಸಲು ವಿಶೇಷ ತಂಡ ರಚನೆ ಮಾಡಲಿದ್ದು, ತಂಡದ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.ತಾಲೂಕಿನ ಕಿರಾಣಿ ಅಂಗಡಿಗಳಲ್ಲಿ ಮದ್ಯ ಮಾರಾಟ ನಡೆಯುತ್ತಿದೆ. ಅಬಕಾರಿ ಅಧಿಕಾರಿಗಳು ದಾಳಿ ಮಾಡುತ್ತಿಲ್ಲ. ಇದರಿಂದ ಹಳ್ಳಿಗಳ ಸ್ವಾಸ್ಥ್ಯ ನಾಶವಾಗುತ್ತಿದೆ. ಅಬಕಾರಿ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ಧಾರೆ ಎಂದು ಗ್ರಾಮಸ್ಥರು ದೂರಿದರು. ಅಬಕಾರಿ ಇಲಾಖೆ ಜಿಲ್ಲಾಧಿಕಾರಿಯನ್ನು ಕರೆಸಿ ಈ ಬಗ್ಗೆ ಪ್ರಶ್ನೆ ಮಾಡಿದರು. ಎಷ್ಟು ಬಾರಿ ದಾಳಿ ಮಾಡಿದ್ದೀರಿ? ಏನು ಕ್ರಮ ಕೈಗೊಂಡಿದ್ದೀರಿ ಎಂದು ಪ್ರಶ್ನಿಸಿದರು. ಕರ್ತವ್ಯಲೋಪ ಎಸಗಿದ ಅಧಿಕಾರಿಯನ್ನು ಅಮಾನತು ಮಾಡಿ ಎಂದು ಸೂಚಿಸಿದರು.ಕುರ್ಸಾಪುರ ಜವಳಿ ಪಾರ್ಕ್ ಯೋಜನೆಗೆ ೨೦೦ ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗಿದೆ. ಆದರೆ ಯಾವ ಹಂತದಲ್ಲಿದೆ ಎಂಬ ಬಗ್ಗೆ ಮಾಹಿತಿಯೇ ಇಲ್ಲ. ಗುಡ್ಡಗಳನ್ನು ಒತ್ತುವರಿ ಮಾಡಿ ನಾಶ ಮಾಡಲಾಗುತ್ತಿದೆ. ಪುರಸಭೆ ಮಳಿಗೆಗಳನ್ನು ಹರಾಜು ಮಾಡದ ಕಾರಣ ಆದಾಯಕ್ಕೆ ಪೆಟ್ಟು ಬೀಳುತ್ತಿದೆ ಎಂಬ ದೂರುಗಳನ್ನು ಪರಿಶೀಲಿಸಲು ನಿರ್ದೇಶನ ನೀಡಿದರು.ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಬಸವರಾಜ ಶಿವಣ್ಣನವರ್, ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ಶಾಸಕರಾದ ಶ್ರೀನಿವಾಸ ಮಾನೆ, ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ್, ಜಿಪಂ ಸಿಇಒ ಅಕ್ಷಯ್ ಶ್ರೀಧರ್, ಎಎಸ್ಪಿ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು. ಸಾಗುವಾನಿ ಕಟ್ಟಿಗೆ ನಾಪತ್ತೆ: ಹಳೆಯ ತಹಸೀಲ್ದಾರ್ ಕಚೇರಿ ನಿರ್ಮಾಣಕ್ಕೆ ಹಳೆಯ ಕಚೇರಿಯನ್ನು ನೆಲಸಮ ಮಾಡಲಾಗಿದ್ದು, ಈ ಕಟ್ಟಡಕ್ಕೆ ಬಳಸಿದ್ದ ಉತ್ತಮವಾದ ಸಾಗುವಾನಿ ಕಟ್ಟಿಗೆಗಳ ಏನಾದವು ಎಂಬುದೇ ಗೊತ್ತಿಲ್ಲ. ಬೆಲೆ ಬಾಳುವ ಸಾಗುವಾನಿ ಕಟ್ಟಿಗೆ ಎಲ್ಲಿ ಹೋಗಿವೆ ಎಂಬುದೇ ಗೊತ್ತಿಲ್ಲ. ಈ ಕಟ್ಟಿಗೆ ಪತ್ತೆ ಮಾಡಿ ಹರಾಜು ಹಾಕಿ ಎಂದು ಮಹಿಳೆಯೊಬ್ಬರು ಸಚಿವ ಶಿವಾನಂದ ಪಾಟೀಲ ಅವರಿಗೆ ಮನವಿ ಮಾಡಿದರು. ಮಗುವಿಗೆ ವೈದ್ಯರು ಚಿಕಿತ್ಸೆ ನೀಡಲು ನಿರಾಕರಿಸಿದ ಕಾರಣ ಬೇರೆ ಆಸ್ಪತ್ರೆಗೆ ಕರೆದೊಯ್ಯಬೇಕಾಯಿತು ಎಂಬ ದೂರು ಕೇಳಿ ಬೇಸರ ವ್ಯಕ್ತಪಡಿಸಿದ ಸಚಿವರು, ತಾಲೂಕು ವೈದ್ಯಾಧಿಕಾರಿಯನ್ನು ಕರೆಸಿ ವರದಿ ಕೇಳಿದರು. ತಕ್ಷಣ ಮಗುವಿನ ಚಿಕಿತ್ಸೆಗೆ ವ್ಯವಸ್ಥೆ ಮಾಡಿ ಎಂದು ಹೇಳಿದರು.ಅಚ್ಚುಕಟ್ಟಾದ ವ್ಯವಸ್ಥೆ: ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರಕ್ಕೆ ಅಚ್ಚುಕಟ್ಟಾದ ವ್ಯವಸ್ಥೆ ಮಾಡಲಾಗಿತ್ತು. ಇಲಾಖಾವಾರು ಕೌಂಟರ್ ತೆರೆದು ಅರ್ಜಿ ಸ್ವೀಕಾರದ ವ್ಯವಸ್ಥೆ ಮಾಡಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿದ ಸಚಿವರು, ಸ್ವತಃ ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಿ ಸಂಬಂಧಪಟ್ಟ ಅಧಿಕಾರಿಗಳನ್ನು ಕರೆದು ವಿವರಣೆ ಕೇಳಿದ್ದು ವಿಶೇಷವಾಗಿತ್ತು.