ಸಾರಾಂಶ
ಜಿಲ್ಲೆಯಲ್ಲಿ ಸೆ.29 ರಂದು ನಡೆಯುವ ‘ಗ್ರಾಮ ಆಡಳಿತ ಅಧಿಕಾರಿ’ ಹುದ್ದೆಯ ನೇರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಯನ್ನು (ಕಡ್ಡಾಯ ಕನ್ನಡ) ಪರೀಕ್ಷಾ ಪ್ರಾಧಿಕಾರ ಮಾರ್ಗಸೂಚಿ ಅನ್ವಯ ವ್ಯವಸ್ಥಿತವಾಗಿ ನಡೆಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸೂಚಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಮಡಿಕೇರಿ
ಜಿಲ್ಲೆಯಲ್ಲಿ ಸೆ.29 ರಂದು ನಡೆಯುವ ‘ಗ್ರಾಮ ಆಡಳಿತ ಅಧಿಕಾರಿ’ ಹುದ್ದೆಯ ನೇರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಯನ್ನು (ಕಡ್ಡಾಯ ಕನ್ನಡ) ಪರೀಕ್ಷಾ ಪ್ರಾಧಿಕಾರ ಮಾರ್ಗಸೂಚಿ ಅನ್ವಯ ವ್ಯವಸ್ಥಿತವಾಗಿ ನಡೆಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸೂಚಿಸಿದ್ದಾರೆ.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಸ್ಪರ್ಧಾತ್ಮಕ ಪರೀಕ್ಷೆ ಕಟ್ಟುನಿಟ್ಟಾಗಿ ನಡೆಸುವಂತೆ ನಿರ್ದೇಶನ ನೀಡಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಮಂಜುಳಾ ಅವರು, ಜಿಲ್ಲೆಯ ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಮೈಕಲರ ಪದವಿ ಪೂರ್ವ ಕಾಲೇಜು, ಸಂತ ಜೋಸೆಫರ ಸಂಯುಕ್ತ ಪದವಿ ಪೂರ್ವ ಕಾಲೇಜು ಮತ್ತು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು, ಕುಶಾಲನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜು ಈ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯಲ್ಲಿ ಒಟ್ಟು 2,772 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಮಾಹಿತಿ ನೀಡಿದರು.ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್ ಅವರು ಸ್ಪರ್ಧಾತ್ಮಕ ಪರೀಕ್ಷೆ ಸುಗಮವಾಗಿ ನಡೆಸುವ ನಿಟ್ಟಿನಲ್ಲಿ ಅಗತ್ಯ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗುವುದು ಎಂದು ತಿಳಿಸಿದರು.
ಮದೆ ಮಹೇಶ್ವರ ಕಾಲೇಜಿನ ಪ್ರಾಂಶುಪಾಲ ಸಿದ್ದರಾಜು ಬೆಳ್ಳಯ್ಯ ಅವರು ಪರೀಕ್ಷೆ ಸಂಬಂಧ ಮಾಹಿತಿ ನೀಡಿದರು. ಜಿಲ್ಲಾ ಖಜಾನಾಧಿಕಾರಿ ರಘುನಾಥ್, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ರಾಘವ, ವಿವಿಧ ಕಾಲೇಜಿನ ಪ್ರಾಂಶುಪಾಲರು, ಪರೀಕ್ಷಾ ಮೇಲ್ವಿಚಾರಕರು ಇತರರು ಇದ್ದರು.