ಪ್ರಧಾನಮಂತ್ರಿ ಫಸಲ್‌ ಭೀಮಾ ಯೋಜನೆಗೆ ಹೆಸರು ನೋಂದಾಯಿಸಲು ಸೂಚನೆ

| Published : May 30 2024, 12:45 AM IST

ಪ್ರಧಾನಮಂತ್ರಿ ಫಸಲ್‌ ಭೀಮಾ ಯೋಜನೆಗೆ ಹೆಸರು ನೋಂದಾಯಿಸಲು ಸೂಚನೆ
Share this Article
  • FB
  • TW
  • Linkdin
  • Email

ಸಾರಾಂಶ

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯು 2024-25 ನೇ ಸಾಲಿನಲ್ಲಿಯೂ ಜಾರಿಯಲ್ಲಿದೆ. ನೋಂದಾಯಿಸಿಕೊಳ್ಳಲು 2024 ರ ಆ.16 ಕೊನೆಯ ದಿನವಾಗಿದೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯು 2024-25 ನೇ ಸಾಲಿನಲ್ಲಿಯೂ ಜಾರಿಯಲ್ಲಿದೆ. ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ, ಮುಂತಾದ ಪ್ರಾಕೃತಿಕ ವಿಕೋಪ ಸೇರಿದಂತೆ ಹಲವಾರು ಕಾರಣಗಳಿಂದ ಬೆಳೆ ನಷ್ಟ ಉಂಟಾದಾಗ ರೈತರಿಗೆ ವಿಮಾ ರಕ್ಷಣೆ ಮತ್ತು ಆರ್ಥಿಕ ಬೆಂಬಲ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶ.

ಈ ಯೋಜನೆಯಡಿ ರೈತರ ವಿಮಾ ಕಂತನ್ನು ಆಹಾರ ಮತ್ತು ಎಣ್ಣೆ ಕಾಳು ಬೆಳೆಗಳಿಗೆ ಮುಂಗಾರು ಹಂಗಾಮಿಗೆ ಶೇ. 2 ಎಂದು ಪರಿಗಣಿಸಲಾಗಿದೆ. ಮುಖ್ಯ ಬೆಳೆಗಳಿಗೆ ಯೋಜನೆಯನ್ನು ಗ್ರಾಮ ಪಂಚಾಯಿತಿ ಮಟ್ಟಕ್ಕೆ ಅಳವಡಿಸಲಾಗುವುದು. ಈ ಯೋಜನೆಯು ಸಾಲ ಪಡೆದ ಹಾಗೂ ಸಾಲ ಪಡೆಯದ ರೈತರಿಗೆ ಐಚ್ಛಿಕವಾಗಿದ್ದು, ವಿಮಾ ಮೊತ್ತವು ಒಂದೇ ಆಗಿರುತ್ತದೆ.

ಬಿತ್ತನೆ ಅಥವಾ ನಾಟಿ ಕಾಲಕ್ಕೆ ಆಗುವ ನಷ್ಟ, ಬೆಳವಣಿಗೆ ಹಂತದಲ್ಲಿ ಆಗುವ ನಷ್ಟ ಹಾಗೂ ಕಟಾವಿನ ನಂತರದ ನಷ್ಟವನ್ನು ಸಹ ಪರಿಗಣಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ, ಓರಿಯಂಟಲ್ ಜನರಲ್ ಇನ್ಶುರೆನ್ಸ್ ಕಂಪನಿ ವಿಮಾ ಕಂಪನಿಯನ್ನು ಬೆಳೆ ವಿಮೆ ಕಾರ್ಯಕ್ಕೆ ಆಯ್ಕೆ ಮಾಡಲಾಗಿದೆ. ವಿಮಾ ಅರ್ಜಿಗಳು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಲಭ್ಯವಿದ್ದು, ಈ ಯೋಜನೆಯಡಿ ಅರ್ಜಿಯನ್ನು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸಲ್ಲಿಸಿ ನೋಂದಾಯಿಸಿಕೊಳ್ಳಬಹುದಾಗಿದೆ.

ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ವಿಮಾ ಮೊತ್ತ ಮತ್ತು ರೈತರ ವಿಮಾ ಕಂತಿನ ವಿವರ ಇಂತಿದೆ. ಭತ್ತ (ನೀರಾವರಿ) ಸಾಮಾನ್ಯ ವಿಮಾ (ಪ್ರತಿ ಎಕರೆಗೆ) ವಿಮಾ ಮೊತ್ತ ರು.37,738.28 ರೈತರ ವಿಮಾಕಂತು ಶೇ.2 ರಂತೆ 754.77, ಭತ್ತ (ಮಳೆಯಾಶ್ರಿತ) ವಿಮಾ ಮೊತ್ತ 25,799.63 ರು., ರೈತರ ವಿಮಾ ಕಂತು ಶೇ.2 ರಂತೆ ರು. 515.99. ನೋಂದಾಯಿಸಿಕೊಳ್ಳಲು 2024 ರ ಆ.16 ಕೊನೆಯ ದಿನವಾಗಿದೆ.

ಮುಸುಕಿನ ಜೋಳ(ಮಳೆಯಾಶ್ರಿತ) ವಿಮಾ ಮೊತ್ತ ರು.22,865.55, ರೈತರ ವಿಮಾ ಕಂತು ಶೇ.2 ರಂತೆ ರು. 457.31. ನೋಂದಾಯಿಸಿಕೊಳ್ಳಲು ಜು. 31 ಕೊನೆಯ ದಿನವಾಗಿದೆ.

ಈ ಯೋಜನೆಯಲ್ಲಿ ರೈತರು ಅರ್ಜಿಯೊಂದಿಗೆ ಪಹಣಿ, ಬ್ಯಾಂಕ್ ಪಾಸ್ ಪುಸ್ತಕ, ಮತ್ತು ಆಧಾರ್ ಸಂಖ್ಯೆ ನೀಡಿ ನೋಂದಾಯಿಸಿಕೊಳ್ಳಬೇಕು. ಯೋಜನೆಯ ಮಾಹಿತಿಯನ್ನು ಸಂರಕ್ಷಣೆ ತಂತ್ರಾಂಶದಲ್ಲಿ ಪಡೆಯಬಹುದು. (http://www.samrakshane.karnataka.gov.in/) ಹೆಚ್ಚಿನ ಮಾಹಿತಿಗೆ ಹೋಬಳಿಯ ರೈತ ಸಂಪರ್ಕ ಕೇಂದ್ರ ಹಾಗೂ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದಾಗಿದೆ. ಈ ಯೋಜನೆಯನ್ನು ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ರೈತರು ಸದುಪಯೋಗ ಪಡಿಸಿಕೊಳ್ಳುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಸೋಮಸುಂದರ ಕೋರಿದ್ದಾರೆ.