ಸಾರಾಂಶ
ಕನ್ನಡಪ್ರಭ ವಾರ್ತೆ ಬೆಂಗಳೂರು
ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಗುರುವಾರ ಅಧಿಸೂಚನೆ ಪ್ರಕಟವಾಗಲಿದೆ.ಬರುವ ಏ.2 ರಂದು ರಾಜ್ಯಸಭಾ ಸ್ಥಾನದಿಂದ ಬಿಜೆಪಿಯ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಹಾಗೂ ಕಾಂಗ್ರೆಸ್ಸಿನ ಎಲ್.ಹನುಮಂತಯ್ಯ, ಜಿ.ಸಿ.ಚಂದ್ರಶೇಖರ್, ಸಯ್ಯದ್ ನಾಸಿರ್ ಹುಸೇನ್ ಅವರು ನಿವೃತ್ತಿಯಾಗಲಿದ್ದಾರೆ. ಇವರ ನಿವೃತ್ತಿಯಿಂದ ತೆರವಾಗುವ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.ಏಪ್ರಿಲ್ನಲ್ಲಿ ನಿವೃತ್ತಿಯಿಂದ ತೆರವಾಗಲಿರುವ ರಾಜ್ಯದ ನಾಲ್ಕು ಸ್ಥಾನಗಳಿಗೆ ಗುರುವಾರ ಚುನಾವಣಾ ಅಧಿಸೂಚನೆ ಪ್ರಕಟಗೊಳ್ಳಲಿದ್ದು, ಅಭ್ಯರ್ಥಿಗಳು ತಮ್ಮ ನಾಮಪತ್ರ ಸಲ್ಲಿಸಬಹುದಾಗಿದೆ. ಫೆ.15 ನಾಮಪತ್ರಗಳ ಸಲ್ಲಿಕೆಗೆ ಕಡೆ ದಿನವಾಗಿದ್ದು, ಫೆ.16 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಫೆ.20ರವರೆಗೂ ಉಮೇದುವಾರಿಕೆ ವಾಪಸ್ ಪಡೆಯಲು ಕಾಲಾವಕಾಶವಿದೆ.ನಾಲ್ಕಕ್ಕಿಂತ ಹೆಚ್ಚು ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದರೆ ಫೆ.27ರಂದು ಬೆಳಿಗ್ಗೆ 9 ರಿಂದ ಸಂಜೆ 4ಗಂಟೆವರೆಗೆ ಮತದಾನ ನಡೆಯಲಿದೆ. ಅದೇ ದಿನ ಸಂಜೆ 5 ಗಂಟೆ ನಂತರ ಮತ ಎಣಿಕೆ ನಡೆಯಲಿದ್ದು, ಫಲಿತಾಂಶ ಪ್ರಕಟವಾಗಲಿದೆ. ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಚುನಾವಣಾಧಿಕಾರಿಯಾಗಿದ್ದು, ಅವರಿಗೆ ನಾಮಪತ್ರ ಸಲ್ಲಿಸಬೇಕಾಗಿದೆ.