ರೋಣ: ಬಿಸಿಲಿನ ತಾಪಮಾನ ಹೆಚ್ಚುತ್ತಿರುವ ಹಿನ್ನೆಲೆ ಆರೋಗ್ಯದ ದೃಷ್ಟಿಯಿಂದ ಎಲ್ಲರೂ ಮುಂಜಾನೆ ಬೇಗ ಕೆಲಸಕ್ಕೆ ಹಾಜರಾಗಿ ಮಧ್ಯಾಹ್ನದೊಳಗೆ ಕೆಲಸ ಮುಗಿಸಿಕೊಳ್ಳುವಂತೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ. ಕಂದಕೂರ ತಿಳಿಸಿದರು.

ತಾಲೂಕಿನ ಸವಡಿ ಗ್ರಾಪಂ ವ್ಯಾಪ್ತಿಯ ಹೊನ್ನಾಪುರ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ನಡೆಯುತ್ತಿರುವ ಸಾಮೂಹಿಕ ಬದು ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಮಾತನಾಡಿ, ಸರ್ಕಾರದ ಮಾರ್ಗಸೂಚಿ ಅನುಸಾರ ಕೂಲಿಕಾರರು ಕಡ್ಡಾಯವಾಗಿ ಅಳತೆಗೆ ತಕ್ಕಂತೆ ಕೆಲಸ ನಿರ್ವಹಿಸಬೇಕು ಎಂದು ಸೂಚಿಸಿದರು.ಈ ವೇಳೆ ಕೂಲಿಕಾರರು ಗ್ರಾಮದಲ್ಲಿ ನಿರಂತರವಾಗಿ ನರೇಗಾ ಕಾಮಗಾರಿಗಳನ್ನು ಆರಂಭಿಸಿ ಉದ್ಯೋಗಾವಕಾಶ ಕಲ್ಪಿಸಬೇಕೆಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಕಾರ್ಯನಿರ್ವಾಹಕ ಅಧಿಕಾರಿಗಳು, ಗುಣಮಟ್ಟದ ಹಾಗೂ ನಿಯಮಾನುಸಾರ ಕೆಲಸ ಮಾಡಿದಲ್ಲಿ ನಿರಂತರವಾಗಿ ಕೆಲಸ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಪರಿಶೀಲನೆ ಸಂದರ್ಭದಲ್ಲಿ ಕೂಲಿಕಾರರು ಹಾಗೂ ಸಿಬ್ಬಂದಿಗೆ ಹಲವು ಪ್ರಮುಖ ಸೂಚನೆಗಳನ್ನು ನೀಡಲಾಯಿತು. ಪ್ರತಿದಿನ ಕಡ್ಡಾಯವಾಗಿ ಎರಡು ಬಾರಿ ಎನ್‌ಎಂಎಂಎಸ್‌ ಆ್ಯಪ್ ಮೂಲಕ ಹಾಜರಾತಿ ದಾಖಲಿಸಬೇಕು. ಕಾಯಕ ಬಂಧುಗಳು ತಮ್ಮ ವ್ಯಾಪ್ತಿಯ ಕೂಲಿಕಾರರಿಗೆ ಪ್ರತಿದಿನ ಕೆಲಸದ ಅಳತೆಯ ಕುರಿತು ಮಾಹಿತಿ ನೀಡಿ, ಸರಿಯಾದ ರೀತಿಯಲ್ಲಿ ಕೆಲಸ ನಿರ್ವಹಿಸಲು ಮಾರ್ಗದರ್ಶನ ನೀಡುವಂತೆ ಸೂಚಿಸಲಾಯಿತು. ಎನ್‌ಎಂಆರ್ ತೆಗೆದುಕೊಂಡ ಕೂಲಿಕಾರರು ಕಡ್ಡಾಯವಾಗಿ ಕಾಮಗಾರಿ ಸ್ಥಳಕ್ಕೆ ಹಾಜರಾಗಿ ಕೆಲಸ ನಿರ್ವಹಿಸಬೇಕು ಎಂದು ಅಧಿಕಾರಿಗಳು ಸೂಚಿಸಿದರು.ನರೇಗಾ ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಬದು ನಿರ್ಮಾಣ ಕಾಮಗಾರಿಗಳು ಗ್ರಾಮೀಣ ಭಾಗದಲ್ಲಿ ನೀರು ಸಂರಕ್ಷಣೆ, ಮಣ್ಣಿನ ಸದ್ಬಳಕೆ ಹಾಗೂ ರೈತರ ಭೂಮಿಯ ಅಭಿವೃದ್ಧಿಗೆ ಸಹಕಾರಿಯಾಗುತ್ತಿದ್ದು, ಗ್ರಾಮಾಭಿವೃದ್ಧಿಗೆ ಮಹತ್ವದ ಪಾತ್ರ ವಹಿಸುತ್ತಿವೆ ಎಂದು ತಿಳಿಸಿದರು. ಈ ವೇಳೆ ಪಿಡಿಒ, ಟಿಐಇಸಿ, ಡಿಇಒ, ಜಿಕೆಎಂ, ಗ್ರಾಪಂ ಸಿಬ್ಬಂದಿ ಹಾಗೂ ಗ್ರಾಮಸ್ಥರು ಇದ್ದರು.