ನೀಟ್ ಅಕ್ರಮ ತನಿಖೆಗೆ ಆಗ್ರಹಿಸಿ ಎನ್‌ಎಸ್‌ಯುಐ ಪ್ರತಿಭಟನೆ

| Published : Jun 25 2024, 12:31 AM IST

ನೀಟ್ ಅಕ್ರಮ ತನಿಖೆಗೆ ಆಗ್ರಹಿಸಿ ಎನ್‌ಎಸ್‌ಯುಐ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ನೀಟ್ ಪರೀಕ್ಷೆಯಲ್ಲಿ ನಡೆದ ಅಕ್ರಮವನ್ನು ಉನ್ನತ ಮಟ್ಟದ ತನಿಖೆ ನಡೆಸುವಂತೆ ಆಗ್ರಹಿಸಿ ಎನ್‌ಎಸ್‌ಯುಐ ಜಿಲ್ಲಾ ಘಟಕದ ನೇತೃತ್ವದಲ್ಲಿ ನಗರದ ಅಶೋಕ ಸರ್ಕಲ್‌ನಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾಧಿಕಾರಿ ಮುಖಾಂತರ ರಾಷ್ಟ್ರಪತಿಗೆ ಮನವಿ

ಕನ್ನಡಪ್ರಭ ವಾರ್ತೆ ಕೊಪ್ಪಳ

ನೀಟ್ ಪರೀಕ್ಷೆಯಲ್ಲಿ ನಡೆದ ಅಕ್ರಮವನ್ನು ಉನ್ನತ ಮಟ್ಟದ ತನಿಖೆ ನಡೆಸುವಂತೆ ಆಗ್ರಹಿಸಿ ಎನ್‌ಎಸ್‌ಯುಐ ಜಿಲ್ಲಾ ಘಟಕದ ನೇತೃತ್ವದಲ್ಲಿ ನಗರದ ಅಶೋಕ ಸರ್ಕಲ್‌ನಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ನೀಟ್ ಪರೀಕ್ಷೆಯ ಫಲಿತಾಂಶ ವಿವಾದಗಳಿಂದ ಕೂಡಿದ್ದು ಭಾರಿ ಅಕ್ರಮ ನಡೆದಿರುವ ಸಾಧ್ಯತೆ ಮೇಲ್ನೋಟಕ್ಕೆ ಕಾಣಿಸುತ್ತದೆ. ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ವಿವಾದಾತ್ಮಕ ಫಲಿತಾಂಶದ ಕಾರಣದಿಂದ ದೇಶದ ಲಕ್ಷಾಂತರ ವೈದ್ಯಕೀಯ ಸೀಟು ಆಕಾಂಕ್ಷಿಗಳಿಗೆ ಅನ್ಯಾಯವಾಗುತ್ತಿದೆ. ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಲು ಕೇಂದ್ರ ಸರ್ಕಾರವು ನೀಟ್ ಅಕ್ರಮದ ಬಗ್ಗೆ ತನಿಖೆ ನಡೆಸಬೇಕು ಎಂದು ಆಗ್ರಹಿಸಲಾಯಿತು.

ನೀಟ್ ಫಲಿತಾಂಶ ವಿವಾದವಾಗಲು ಅನೇಕ ಅಂಶಗಳು ಕಾರಣವಾಗಿದ್ದು, ಒಟ್ಟು 67 ವಿದ್ಯಾರ್ಥಿಗಳು ಮೊದಲ ರ್‍ಯಾಂಕ್ ಬಂದಿರುವುದು ಹಾಗೂ ಒಂದೇ ಪರೀಕ್ಷಾ ಕೇಂದ್ರದ 8 ವಿದ್ಯಾರ್ಥಿಗಳು ಪ್ರಥಮ ರ್‍ಯಾಂಕ್ ಮಾಡಿರುವುದು ನೀಟ್ ಅಕ್ರಮ ನಡೆದಿರುವುದಕ್ಕೆ ಸಾಕ್ಷಿಯಂತಿದೆ. ರ್‍ಯಾಂಕ್ ಬಂದಿರುವವರಲ್ಲಿ ಆರು ವಿದ್ಯಾರ್ಥಿಗಳು ಒಂದೇ ತರಬೇತಿ ಕೇಂದ್ರದವರಾಗಿರುವುದು ಇನ್ನಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ನೀಟ್ ಪರೀಕ್ಷೆಯ ಫಲಿತಾಂಶದ ನಂತರ ದೇಶದ ಕೆಲವೆಡೆ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದು, ಯುವ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಳ್ಳದಂತೆ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕಿದೆ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಇದಕ್ಕೆ ಕೇಂದ್ರ ಬಿಜೆಪಿ ಸರ್ಕಾರ ನೇರ ಕಾರಣವಾಗಿದ್ದು, ವೈದ್ಯಕೀಯ ವಿದ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟ ಆಡುತ್ತಿದೆ. ಕೂಡಲೇ ಅಕ್ರಮವೆಸಗಿದವರ ಮೇಲೆ ಕ್ರಮ ಜರುಗಿಸಿ ವಿದ್ಯಾರ್ಥಿಗಳಿಗೆ ನ್ಯಾಯ ಕೊಡಿಸಬೇಕು. ಇಲ್ಲವಾದಲ್ಲಿ ಜಿಲ್ಲಾ ಎನ್ಎಸ್‌ಯುಐ ಸಮಿತಿಯಿಂದ ಹೋರಾಟ ತೀವ್ರಗೊಳಿಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಜಿಲ್ಲಾಧಿಕಾರಿ ಮುಖಾಂತರ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು. ಅದಕ್ಕೂ ಮೊದಲು ಅಶೋಕ ವೃತ್ತದಲ್ಲಿ ಘೋಷಣೆ ಕೂಗಿ ಕೇಂದ್ರದ ಶಿಕ್ಷಣ ಮಂತ್ರಿ ರಾಜೀನಾಮೆಗೆ ಆಗ್ರಹಿಸಲಾಯಿತು.

ಈ ಸಂದರ್ಭದಲ್ಲಿ ಎನ್ಎಸ್‌ಯುಐ ಜಿಲ್ಲಾ ಅಧ್ಯಕ್ಷ ಶಿವಕುಮಾರ್ ಕಾರಟಗಿ, ಮಾಜಿ ಜಿಲ್ಲಾಧ್ಯಕ್ಷ ಮಂಜುನಾಥ ಜಿ. ಗೊಂಡಬಾಳ, ತಾಲೂಕು ಅಧ್ಯಕ್ಷ ಹನುಮೇಶ ಬೆಣ್ಣಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಭೋವಿ, ಕಾರ್ಯಕರ್ತರಾದ ಮರಿಯಪ್ಪ, ಶಿವು, ಶಂಕರ, ದೇವರಾಜ ಅನೇಕರಿದ್ದರು.