ಸಾರ್ವಜನಿಕರಲ್ಲಿ ಪೌಷ್ಟಿಕ ಆಹಾರದ ಮಹತ್ವದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಈ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ಆರೋಗ್ಯಕರ ಜೀವನಕ್ಕಾಗಿ ಪ್ರತಿಯೊಬ್ಬರೂ ಉತ್ತಮ ಆಹಾರ ಪದ್ಧತಿ ರೂಢಿಸಿಕೊಳ್ಳಬೇಕು.
ಕುಂದಗೋಳ:
ಶಾರೀರಿಕ ಹಾಗೂ ಮಾನಸಿಕವಾಗಿ ಸದೃಢರಾಗಿರಲು ಪ್ರತಿಯೊಬ್ಬರೂ ಸಮತೋಲಿತ ಹಾಗೂ ಪೌಷ್ಟಿಕ ಆಹಾರ ಸೇವಿಸುವುದು ಅತ್ಯಗತ್ಯ ಎಂದು ಹಿರಿಯ ನ್ಯಾಯಾಧೀಶ ಅಬ್ದುಲ್ ಖಾದರ್ ಹೇಳಿದರು.ತಾಲೂಕಿನ ಸಂಶಿ ಗ್ರಾಮದ ವಾಲ್ಮೀಕಿ ಭವನದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ವಿಶ್ವ ಪೌಷ್ಟಿಕಾಂಶ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಸಾರ್ವಜನಿಕರಲ್ಲಿ ಪೌಷ್ಟಿಕ ಆಹಾರದ ಮಹತ್ವದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಈ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ಆರೋಗ್ಯಕರ ಜೀವನಕ್ಕಾಗಿ ಪ್ರತಿಯೊಬ್ಬರೂ ಉತ್ತಮ ಆಹಾರ ಪದ್ಧತಿ ರೂಢಿಸಿಕೊಳ್ಳಬೇಕು. ಪೌಷ್ಟಿಕಾಂಶ ಕೊರತೆಯಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಅರಿವು ಹೊಂದಿ, ಆಹಾರದಲ್ಲಿ ಅಗತ್ಯ ಪೋಷಕಾಂಶಗಳನ್ನು ಒಳಗೊಂಡಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಸುರೇಶ ಕಳಸಣ್ಣವರ ಮಾತನಾಡಿ, ಗರ್ಭಿಣಿಯರು ಹಾಗೂ ಮಕ್ಕಳು ದೈಹಿಕ ಬೆಳವಣಿಗೆ ಮತ್ತು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ ಆಹಾರ ಸೇವಿಸುವುದು ಅತ್ಯಂತ ಅಗತ್ಯ. ಗರ್ಭಾವಸ್ಥೆಯಿಂದಲೇ ತಾಯಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದರೆ ಮಗುವಿನ ಆರೋಗ್ಯಕರ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದರು.
ಇದೇ ವೇಳೆ ವಾಲ್ಮೀಕಿ ಭವನದಲ್ಲಿ ಸಾರ್ವಜನಿಕರಿಗಾಗಿ ಪ್ರದರ್ಶನಕ್ಕಿಟ್ಟಿದ್ದ ವಿವಿಧ ಬಗೆಯ ಪೌಷ್ಟಿಕ ಆಹಾರ ಪದಾರ್ಥಗಳನ್ನು ನ್ಯಾಯಾಧೀಶ ಅಬ್ದುಲ್ ಖಾದರ್ ಹಾಗೂ ಗಣ್ಯರು ವೀಕ್ಷಿಸಿದರು.ಶಿಶು ಅಭಿವೃದ್ಧಿ ಯೋಜನಾಧಿಕಾರಿ ಉಮಾ ಬಳ್ಳೊಳ್ಳಿ, ವಕೀಲರ ಸಂಘದ ಅಧ್ಯಕ್ಷ ಬಿ.ಪಿ. ಪಾಟೀಲ, ಕಾರ್ಯದರ್ಶಿ ವೈ.ಬಿ. ಬೆಳೆಬಾಳ, ಜಿ.ಬಿ. ಸೊರಟೂರ, ಪಿಡಿಒ ಪಾಂಡುರಂಗ ಹಟ್ಟಿ, ವಕೀಲರಾದ ಎಸ್.ಬಿ. ಹಿರೇಮಠ, ಎಸ್.ಐ. ಕಮ್ಮಾರ, ವಿ.ಎಲ್. ಹಡಪದ ಸೇರಿದಂತೆ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿದ್ದರು.