ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಮಹಿಳಾ ಮೀಸಲಾತಿ ಕಾಯ್ದೆಯ ಜಾರಿಗೆ ಅಡ್ಡಿಯಾದ ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳು ಮಹಿಳಾ ವಿರೋಧಿಯಾಗಿವೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ಸೇರಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು, ಕೆಲ ಕಾಲ ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳ ವಿರುದ್ಧ ಘೋಷಣೆ ಕೂಗಿದರು.

ಬಿಜೆಪಿ ತಾಲೂಕು ಅಧ್ಯಕ್ಷ ಪೀಹಳ್ಳಿ ರಮೇಶ್ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ಬಂದು 79 ವರ್ಷಗಳು ಕಳೆಯುತ್ತಿದ್ದರೂ ಮಹಿಳೆಯರು ತಮ್ಮ ಮೀಸಲಾತಿಗೆ ಅಂಗಲಾಚುವ ಪರಿಸ್ಥಿತಿ ಎದುರಾಗಿರುವುದು ದುರಂತ ಎಂದು ಬೇಸರ ವ್ಯಕ್ತಪಡಿಸಿದರು.

ಅಂಬೇಡ್ಕರ್ ಮಹಿಳಾ ಪರ ಆಶಯಗಳನ್ನು ಕಾಂಗ್ರೆಸ್ ಮಣ್ಣುಪಾಲು ಮಾಡುತ್ತಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ವಿನಯ್ ಕುಲಕರ್ಣಿ ಅವರನ್ನ ನ್ಯಾಯಾಲಯ ಕೊಲೆ ಆರೋಪಿ ಎಂದು ಆದೇಶ ಮಾಡಿದ ವೇಳೆ ಕೊಲೆ ಆರೋಪಿ ಪರವಾಗಿ ಪ್ರತಿಭಟನೆ ನಡೆಸಲು ಅವಕಾಶ ಕೊಟ್ಟು ಇದೀಗ ನಿರುದ್ಯೋಗಿ ಯುವಕ, ಯುವಕರು ಬೆಂಗಳೂರಿನಲ್ಲಿ ಪ್ರತಿಭಟನೆಗೆ ಮುಂದಾದರೆ ಅದನ್ನು ಪೊಲೀಸರಿಂದ ಹತ್ತಿಕ್ಕುವ ಮೂಲಕ ಇಬ್ಬುಗೆಯ ನೀತಿ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ.ಸಿದ್ದರಾಮಯ್ಯ ಮಾತನಾಡಿ, ಕಾಂಗ್ರೆಸ್ ಪುರುಷ ಪ್ರಧಾನ ಪಕ್ಷ ಎಂಬಂತೆ ನಡೆದುಕೊಳ್ಳುತ್ತಿದೆ. ನಿರಂತರ ಮಹಿಳಾ ವಿರೋಧಿಯಾಗಿ ವರ್ತಿಸುತ್ತಾ ಬಂದಿದೆ. 1949ರಲ್ಲಿ ಅಂಬೇಡ್ಕರ್ ಮಹಿಳೆಯಿರಿಗೆ ಶೇ.50 ರಷ್ಟು ಮೀಸಲಾತಿ ತರಲು ಹೋದಾಗ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿತ್ತು. ಈಗ ಸಂಸತ್‌ನಲ್ಲಿ ಮಹಿಳಾ ಮೀಸಲಾತಿ ಕಾಯ್ದೆಗೆ ಸೋಲಾಗುವಂತೆ ಮಾಡಿದೆ. ಕಾಂಗ್ರೆಸ್‌ಗೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಮುಖಂಡ, ಹೋರಾಟಗಾರ ಕೆ.ಎಸ್. ನಂಜುಂಡೇಗೌಡ ಮಾತನಾಡಿ, ರಾಜಕಾರಣದ ಏಕೈಕ ಉದ್ದೇಶದಿಂದ ಕಾಂಗ್ರೆಸ್ ಹಾಗೂ ಅದರ ಮೈತ್ರಿಕೂಟಗಳು ಮಹಿಳಾ ವಿರೋಧಿ ನೀತಿ ಅನುಸರಿಸುವ ಮೂಲಕ ಇಡೀ ದೇಶದ ಮಹಿಳೆಯರಿಗೆ ಅವಮಾನ ಮಾಡಿದೆ ಎಂದು ಟೀಕಿಸಿದರು.

ಪ್ರತಿಭಟನೆಯಲ್ಲಿ ತಾಲೂಕು ಬಿಜೆಪಿ ಮಹಿಳಾ ಅಧ್ಯಕ್ಷೆ ಮಂಜುಳ ಮಾನಸ, ದೇವಿರಮ್ಮ, ಜಯಲಕ್ಷ್ಮಮ್ಮ, ಬಲ್ಲೇನಹಳ್ಳಿ ಬಿ.ಸಿ ಕೃಷ್ಣೇಗೌಡ, ಉಮೇಶ್‌ಕುಮಾರ್, ಟೆಂಪೋ ಪ್ರಕಾಶ್, ಬೆಳಗೊಳ ಮಲ್ಲೇಶ, ನೆಲಮನೆ ಹರೀಶ್, ಬಲ್ಲೇನಹಳ್ಳಿ ಮಂಜುನಾಥ್, ಹೇಮಂತ್, ಸುನೀಲ್, ಕಿರಣ್ ಸೇರಿದಂತೆ ಇತರರು ಇದ್ದರು.