ಮಂಗಳೂರು: ನವ ಮಂಗಳೂರು ಬಂದರು ಪ್ರಾಧಿಕಾರದ ವತಿಯಿಂದ ಪಣಂಬೂರಿನ ಜೆಎನ್ಸಿ ಸಭಾಂಗಣದ ಆವರಣದಲ್ಲಿ ಶನಿವಾರ 80ನೇ ಸ್ವಾತಂತ್ರ್ಯ ದಿನ ಆಚರಿಸಲಾಯಿತು.ನವ ಮಂಗಳೂರು ಬಂದರು ಪ್ರಾಧಿಕಾರದ ಉಪಾಧ್ಯಕ್ಷೆ ಎಸ್.ಶಾಂತಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಸ್ವತಂತ್ರ ಭಾರತದ ನಿರ್ಮಾಣಕ್ಕೆ ದಾರಿ ಮಾಡಿಕೊಟ್ಟ ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಸದಾ ಕಾಲ ಸ್ಮರಿಸಬೇಕಿದೆ. ಭಾರತದ ಆರ್ಥಿಕ ಬೆಳವಣಿಗೆಯಲ್ಲಿ ಸಾಗರ ವಲಯದ ಪಾತ್ರ ಮಹತ್ವದ್ದು ಎಂದರು.
ಮಹಾತ್ಮ ಗಾಂಧೀಜಿ, ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ದಿ.ಯು.ಎಸ್.ಮಲ್ಯ ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಲಾಯಿತು.ಬಂದರು ಅಧಿಕಾರಿಗಳು, ನೌಕರರು, ಗುತ್ತಿಗೆ ಸಿಬ್ಬಂದಿ, ಸಿಐಎಸ್ಎಫ್ ಸಿಬ್ಬಂದಿ, ಖಾಸಗಿ ಭದ್ರತಾ ಸಿಬ್ಬಂದಿ, ಸ್ವಚ್ಛತಾ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಶಾಲಾ ಶಿಕ್ಷಕರಿಗೆ ಅವರ ಅತ್ಯುತ್ತಮ ಸೇವೆಗಾಗಿ ಸನ್ಮಾನಿಸಲಾಯಿತು. ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ಅಧಿಕಾರಿಗಳು ಹಾಗೂ ನೌಕರರನ್ನೂ ಪುರಸ್ಕರಿಸಲಾಯಿತು. ‘ಹರ್ ಘರ್ ತಿರಂಗಾ’ ಅಭಿಯಾನದ ಅಂಗವಾಗಿ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರನ್ನು, ಶೈಕ್ಷಣಿಕ ಸಾಧಕರನ್ನು ಗೌರವಿಸಲಾಯಿತು.