ಪ್ರತಿಯೊಬ್ಬರೂ ಸಿರಿಧಾನ್ಯ ಬಳಸಲು ಮುಂದಾಗಿ

| Published : Jan 18 2025, 12:47 AM IST

ಸಾರಾಂಶ

ಎಲ್ಲರೂ ಸಿರಿಧಾನ್ಯಗಳನ್ನು ಹೆಚ್ಚು ಬಳಸಬೇಕೆಂದು ಶಾಸಕ ಸ್ವರೂಪ್ ಪ್ರಕಾಶ್ ಸಲಹೆ ನಿಡಿದರು.

ಕನ್ನಡಪ್ರಭ ವಾರ್ತೆ ಹಾಸನ

ಎಲ್ಲರೂ ಸಿರಿಧಾನ್ಯಗಳನ್ನು ಹೆಚ್ಚು ಬಳಸಬೇಕೆಂದು ಶಾಸಕ ಸ್ವರೂಪ್ ಪ್ರಕಾಶ್ ಸಲಹೆ ನಿಡಿದರು.

ನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ವತಿಯಿಂದ ನಮ್ಮ ನಡೆ ಸಿರಿಧಾನ್ಯಗಳ ಕಡೆ ಎಂಬ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಿರಿಧಾನ್ಯಗಳ ಉತ್ಪಾದನೆ ಮತ್ತು ಬಳಕೆ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾ ಕ್ರೀಡಾಂಗಣದಿಂದ ಹೇಮಾವತಿ ಪ್ರತಿಮೆ ಬಳಿವರೆಗೆ ಶುಕ್ರವಾರ ಆಯೋಜಿಸಿದ್ದ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಗರದಲ್ಲಿ ವಾರಕ್ಕೊಮ್ಮೆ ಸಾವಯವ ಉತ್ಪನ್ನಗಳ ಸಂತೆ ನಡೆಯುತ್ತಿದೆ ಇದು ದೊಡ್ಡ ಮಟ್ಟದಲ್ಲಿ ನಡೆಯುವಂತಾಗಬೇಕು ಎಂದು ತಿಳಿಸಿದರು.ನಗರಸಭೆ ಅಧ್ಯಕ್ಷ ಚಂದ್ರೇಗೌಡ ಮಾತನಾಡಿ, ಸಿರಿಧಾನ್ಯಗಳ ಮಹತ್ವ ಅರಿತುಕೊಂಡು ನಾಗರಿಕರು ಅವುಗಳ ಬಳಕೆಗೆ ಒತ್ತು ನೀಡಬೇಕು ಎಂದರು. ಜಿಲ್ಲಾಧಿಕಾರಿ ಸತ್ಯಭಾಮ ಮಾತನಾಡಿ, ರೈತರು ಸಿರಿಧಾನ್ಯಗಳನ್ನು ಬೆಳೆಯಲು ಆಸಕ್ತಿವಹಿಸಬೇಕು. ಈಗಾಗಲೇ ಯುವ ಜನತೆ ಸಿರಿಧಾನ್ಯಗಳ ಬಳಕೆಯ ಟ್ರೆಂಡ್ ಪ್ರಾರಂಭವಾಗಿದೆ. ಅದೇ ರೀತಿ ನಾಗರಿಕರು ಸಿರಿಧಾನ್ಯಗಳ ಬಳಕೆಗೆ ಮುಂದಾಗಬೇಕು ಎಂದು ತಿಳಿಸಿದರು. ಅಂತಾರಾಷ್ಟ್ರೀಯ ವಾಣಿಜ್ಯ ಮೇಳ, ಸಿರಿಧಾನ್ಯಗಳು ಮತ್ತು ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ಸಂಪರ್ಕ ಕಲ್ಪಿಸುವ ಹಾಗೂ ಗ್ರಾಹಕರಲ್ಲಿ ಅರಿವು ಮೂಡಿಸುವ ಮುಖ್ಯ ಉದ್ದೇಶಗಳೊಂದಿಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜ.೨೩ ರಿಂದ ೨೫ ರವರಿಗೆ ಅಂತಾರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಮೇಳವನ್ನು ಆಯೋಜಿಸಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸಲು ಇಂದು ಜಾಥಾ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ತಿಳಿಸಿದರು. ಕಡಿಮೆ ಮಳೆ ಬೀಳುವ ಪ್ರದೇಶದಲ್ಲಿ ಕಡಿಮೆ ನೀರಿನಲ್ಲಿ ಸಿರಿಧಾನ್ಯಗಳನ್ನು ಬೆಳೆಯಲು ಅವಕಾಶ ಇದೆ ಈ ನಿಟ್ಟಿನಲ್ಲಿ ರೈತಾಪಿ ವರ್ಗ ಈ ಕಿರು ಧಾನ್ಯಗಳ ಉತ್ಪಾದನೆಗೆ ಗಮನಹರಿಸಬೇಕು ಎಂದು ತಿಳಿಸಿದರು.ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್.ಪೂರ್ಣಿಮಾ ಮಾತನಾಡಿ, ಸಿರಿಧಾನ್ಯಗಳ ಬಳಕೆಯಿಂದ ಉತ್ತಮ ಆರೋಗ್ಯ ಹೊಂದಬಹುದು ಹಾಗೂ ಮಧುಮೇಹ ನಿಯಂತ್ರಣಕ್ಕೆ ಕೂಡ ಸಹಕಾರಿಯಾಗಲಿದೆ. ಎರಡು ತಲೆಮಾರಿನ ಹಿಂದೆ ಹಿರಿಯರು ಸಿರಿಧಾನ್ಯಗಳನ್ನು ಬಳಸುತ್ತಿದ್ದರು. ನಂತರ ಅವುಗಳ ಸ್ಥಾನದಲ್ಲಿ ಹೆಚ್ಚು ಅಕ್ಕಿ ಬಳಕೆ ಪ್ರಾರಂಭವಾಗಿ ಕಾಲಕ್ರಮೇಣ ಸಿರಿಧಾನ್ಯಗಳ ಬಳಕೆ ಕುಂಠಿತಗೊಂಡಿದೆ ಎಂದರು. ಸ್ವತಃ ತಾವು ನಾಲ್ಕು ವರ್ಷಗಳಿಂದ ಸಿರಿಧಾನ್ಯಗಳನ್ನು ಬಳಸುತ್ತಿರುವುದಾಗಿ ತಿಳಿಸಿದರು.ಜಂಟಿ ಕೃಷಿ ನಿರ್ದೇಶಕರಾದ ರಮೇಶ್, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಲತಾ ಸರಸ್ವತಿ, ನಬಾರ್ಡ್ ಎ.ಜಿ.ಎಂ.ಮಾಲಿನಿ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಮಂಗಳ, ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಜಾಥಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಎತ್ತಿನ ಗಾಡಿಗಳು ಹಾಗೂ ಕಲಾ ತಂಡಗಳು ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಕಾರ್ಯಕ್ರಮಕ್ಕೆ ಮೆರುಗು ಮೂಡಿಸಿತ್ತು.