ಮತ ಬಹಿಷ್ಕಾರದ ಎಚ್ಚರಿಕೆಗೆ ಅಧಿಕಾರಿಗಳು ಎಚ್ಚೆತ್ತಿದ್ದಾರೆ: ಮುದ್ನಾಳ

| Published : Mar 24 2024, 01:31 AM IST

ಮತ ಬಹಿಷ್ಕಾರದ ಎಚ್ಚರಿಕೆಗೆ ಅಧಿಕಾರಿಗಳು ಎಚ್ಚೆತ್ತಿದ್ದಾರೆ: ಮುದ್ನಾಳ
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲೆಯ ಗುರುಮಠಕಲ್ ತಾಲೂಕಿನ ಮಾಧ್ವಾರ್‌ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಸಣ್ಣಸಂಬರ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಪ್ರತಿಭಟನೆ ಮತ್ತು ಮತ ಬಹಿಷ್ಕಾರದ ಎಚ್ಚರಿಕೆಗೆ ಎಚ್ಚೆತ್ತ ಅಧಿಕಾರಿಗಳು ಹಾಗೂ ಸಿಬ್ಬಂದಿ ಗ್ರಾಮಕ್ಕೆ ಭೇಟಿ ನೀಡಿ ಕುಡಿಯುವ ನೀರಿನ ಕಾಮಗಾರಿ ಆರಂಭಿಸಿದ್ದಾರೆ.

ಯಾದಗಿರಿ: ಜಿಲ್ಲೆಯ ಗುರುಮಠಕಲ್ ತಾಲೂಕಿನ ಮಾಧ್ವಾರ್‌ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಸಣ್ಣಸಂಬರ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಪ್ರತಿಭಟನೆ ಮತ್ತು ಮತ ಬಹಿಷ್ಕಾರದ ಎಚ್ಚರಿಕೆಗೆ ಎಚ್ಚೆತ್ತ ಅಧಿಕಾರಿಗಳು ಹಾಗೂ ಸಿಬ್ಬಂದಿ ಗ್ರಾಮಕ್ಕೆ ಭೇಟಿ ನೀಡಿ ಕುಡಿಯುವ ನೀರಿನ ಕಾಮಗಾರಿ ಆರಂಭಿಸಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ.ಮುದ್ನಾಳ ತಿಳಿಸಿದ್ದಾರೆ.

ಇತ್ತೀಚೆಗೆ ಗ್ರಾಮಕ್ಕೆ ಭೇಟಿ ನೀಡಿ ಪ್ರತಿಭಟನೆ ಮಾಡಿದರೂ ಕಾಟಾಚಾರಕ್ಕೆ ಭೇಟಿ ನೀಡಿದ್ದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ನಂತರ ಇದೀಗ ಕುಡಿಯುವ ನೀರಿನ ಪೈಪ್‌ಲೈನ್ ಹಾಕಲು ಚರಂಡಿ ಸ್ವಚ್ಛತೆ ಹಾಗೂ ಬ್ಲೀಚಿಂಗ್ ಪೌಡರ್ ಸಿಂಪಡಣೆಗೆ ಮುಂದಾಗಿದ್ದಾರೆ ಎಂದರು.

ಈ ಕುರಿತು ಮಾತನಾಡಿರುವ ಸಾಮಾಜಿಕ ಹೋರಾಟಗಾರ ಉಮೇಶ ಕೆ.ಮುದ್ನಾಳ, ಈಗಾಗಲೇ ಪ್ರತಿಭಟನೆ ನಡೆಸಿದ ನಂತರ ಅಧಿಕಾರಿಗಳು ಎಚ್ಚೆತ್ತುಕೊಂಡು ಸ್ಥಳಕ್ಕೆ ಆಗಮಿಸಿ ಕಾಮಗಾರಿ ಆರಂಭಿಸಿದ್ದಾರೆ. ಈಗ ಬೇಸಿಗೆ ಇರುವುದರಿಂದ ಕುಡಿಯುವ ನೀರಿಗೆ ಸರ್ಕಾರ ಪ್ರಥಮಾದ್ಯತೆ ನೀಡಿದ್ದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿಗೆ ಸಂಕಷ್ಟ ಉಂಟಾಗಿತ್ತು. ಇದೀಗ ಹೋರಾಟಕ್ಕೆ ಸ್ಪಂದಿಸಿ ಕುಡಿಯುವ ನೀರು, ನೈರ್ಮಲ್ಯಕ್ಕೆ ಕ್ರಮ ಕೈಗೊಂಡಿರುವುದು ಹೋರಾಟಕ್ಕೆ ಸಿಕ್ಕ ಜಯವಾಗಿದೆ ಎಂದಿದ್ದಾರೆ.

ತಕ್ಷಣ ಎಲ್ಲಾ ಬೇಡಿಕೆ ಸಂಪೂರ್ಣವಾಗಿ ಈಡೇರಿಸಬೇಕು. ಅಲ್ಲಿಯವರೆಗೂ ಹೋರಾಟ ನಿರಂತರವಾಗಿ ನಡೆಯುತ್ತದೆ. ಯಾವುದೇ ಕಾರಣಕ್ಕೂ ಕಾಟಾಚಾರದ ಕೆಲಸ ಮಾಡಿದರೆ ಸಹಿಸುವುದಿಲ್ಲ ಎಂದು ಎಚ್ಚರಿಸಿದರು. ಹೋರಾಟಕ್ಕೆ ಮಣಿದು ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದರಿಂದ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.

ಗ್ರಾಮೀಣ ಪ್ರದೇಶದ ಶುದ್ಧ ಕುಡಿಯುವ ನೀರು ಸೇರಿ ಇನ್ನಿತರ ಸಮಸ್ಯೆಗಳಿಗೆ ಹೋರಾಟ ಮಾಡಲು ನಾನು ಸದಾಸಿದ್ಧ. ಅಧಿಕಾರಿಗಳು ಸಮಸ್ಯೆಗೆ ಸ್ಪಂದಿಸದಿದ್ದಲ್ಲಿ ಅಂಥವರ ಬಗ್ಗೆ ನನಗೆ ದೂರು ನೀಡಿ. ಕುಂಭಕರ್ಣ ನಿದ್ರೆಯಲ್ಲಿರುವ ಅಧಿಕಾರಿಗಳನ್ನು ಬಡಿದೆಬ್ಬಿಸುವ ಕೆಲಸ ಮಾಡುತ್ತೇನೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಹೇಳಿದರು.