ಸಾರಾಂಶ
ಜಿಲ್ಲಾ ವಿಶೇಷ ಸಭೆಯಲ್ಲಿ ಪಕ್ಷದ ನೂತನ ಪದಾಧಿಕಾರಿಗಳಿಗೆ ಆದೇಶ ಪ್ರತಿ ವಿತರಣೆ
ಕನ್ನಡಪ್ರಭ ವಾರ್ತೆ ಹಾವೇರಿಸಮರ್ಥರನ್ನ ಪಕ್ಷದ ಪದಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದ್ದು, ನೂತನ ಪದಾಧಿಕಾರಿಗಳು ಪಕ್ಷದ ತತ್ವ ಸಿದ್ಧಾಂತಕ್ಕೆ ಅನುಗುಣವಾಗಿ ತಮ್ಮ ಜವಾಬ್ದಾರಿಯನ್ನ ಅತ್ಯಂತ ಸಮರ್ಥವಾಗಿ ನಿಭಾಯಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರ ಹೇಳಿದರು.
ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಏರ್ಪಡಿಸಿದ್ದ ಜಿಲ್ಲಾ ವಿಶೇಷ ಸಭೆಯಲ್ಲಿ ಪಕ್ಷದ ನೂತನ ಪದಾಧಿಕಾರಿಗಳಿಗೆ ಆದೇಶ ಪ್ರತಿ ವಿತರಿಸಿ ಮಾತನಾಡಿದರು.ಸರ್ವ ಸಮಾಜದ ಕಾರ್ಯಕರ್ತರನ್ನು ಜೊತೆಗೂಡಿಸಿಕೊಂಡು ಪಕ್ಷವನ್ನು ಅತ್ಯಂತ ಸಮರ್ಥವಾಗಿ ಬಲಪಡಿಸಬೇಕು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕಾರ್ಯವೈಖರಿಯಿಂದಾಗಿ ಇಂದು ಭಾರತ ವಿಶ್ವದಲ್ಲಿಯೇ ಅತ್ಯಂತ ಬಲಿಷ್ಠ ರಾಷ್ಟ್ರವಾಗುವತ್ತ ಸಾಗುತ್ತಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಾವೆಲ್ಲರೂ ಶ್ರದ್ಧೆಯಿಂದ ಕಾರ್ಯ ಮಾಡಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಬೇಕು ಎಂದರು.
ಜಿಲ್ಲಾ ಸಂಘಟನಾ ಪ್ರಭಾರಿ ಕಲ್ಲೇಶ ಎನ್.ಎಲ್. ಮಾತನಾಡಿ, ಹಾವೇರಿ ಲೋಕಸಭಾ ಕ್ಷೇತ್ರ ಈ ಬಾರಿ ಚುನಾವಣೆಯಲ್ಲಿ 2 ಲಕ್ಷಕ್ಕೂ ಅಧಿಕ ಮತಗಳಿಂದ ಮುನ್ನಡೆ ಸಾಧಿಸಬೇಕು. ಚುನಾವಣೆಯ ದೃಷ್ಟಿಯಿಂದ ಹಾಗೂ ಪಕ್ಷ ಸಂಘಟನೆಯ ದೃಷ್ಟಿಯಿಂದ ಪ್ರತಿಯೊಬ್ಬ ಕಾರ್ಯಕರ್ತರಿಗೂ ಒಂದು ಕೆಲಸ ಹಾಗೂ ಪ್ರತಿ ಕೆಲಸಕ್ಕೂ ಒಬ್ಬ ಕಾರ್ಯಕರ್ತರನ್ನ ಜೋಡಿಸಲಾಗುತ್ತಿದೆ. ತಮಗೆ ನೀಡಿರುವ ಕಾರ್ಯವನ್ನು ತಾವು ಅತ್ಯಂತ ನಿಷ್ಠೆಯಿಂದ ನಿರ್ವಹಿಸಬೇಕು ಎಂದರು.ಸಭೆಯಲ್ಲಿ ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜಕುಮಾರ ಬಸವ, ಸಹ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರದೀಪ ಮುಳ್ಳೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಡಾ. ಸಂತೋಷ ಆಲದಕಟ್ಟಿ, ಮಂಜುನಾಥ ಗಾಣಿಗೇರ, ನಂಜುಂಡೇಶ್ವರ ಹಾಗೂ ವಿವಿಧ ಮಂಡಲಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಮೋರ್ಚಾಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಇದ್ದರು.